ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜೂ. 09 : ಸರ್ಕಾರವು ವಿದ್ಯುತ್ ಖಾಸಗೀಕರಣಕ್ಕೆ ಅನುಮತಿ ನೀಡದೆ, ರಾಜ್ಯದ ಬಡ ಗುತ್ತಿಗೆದಾರರು, ಕಾರ್ಮಿಕರು ಹಾಗೂ ರೈತಾಪಿ ವರ್ಗದ ಹಿತವನ್ನು ಕಾಪಾಡಬೇಕೆಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ಎಸ್ಸಿ/ಎಸ್ಟಿ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಲಾಯಿತು.
ಚಿತ್ರದುರ್ಗ ನಗರದಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಕರ್ನಾಟಕ ರಾಜ್ಯ ಅನುಮತಿ ಪಡೆದ ಎಸ್ಸಿ/ಎಸ್ಟಿ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಆರ್. ಪ್ರಸನ್ನ ಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ದಿನದಿಂದಲೇ ರಾಜ್ಯದ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಎದುರಿಸುತ್ತಿದ್ದ ಓ.ಸಿ ಮತ್ತು ಸಿ.ಸಿ ಸಮಸ್ಯೆಗಳನ್ನು ಬಗೆಹರಿಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಶ್ಲಾಘನೀಯವಾಗಿದೆ.ಪ್ರಸ್ತುತ ರಾಜ್ಯದಲ್ಲಿ ಚರ್ಚೆಯಲ್ಲಿರುವ ವಿದ್ಯುತ್ ಖಾಸಗೀಕರಣದ ಪ್ರಸ್ತಾವನೆಯು ವಿದ್ಯುತ್ ಗುತ್ತಿಗೆದಾರರು, ಕಾರ್ಮಿಕರು, ರೈತರು ಹಾಗೂ ಬಡ ಜನಸಾಮಾನ್ಯರ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 30,000 ವಿದ್ಯುತ್ ಗುತ್ತಿಗೆದಾರರು ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದು, ಅವರೊಂದಿಗೆ ಸುಮಾರು 3 ಲಕ್ಷ ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ಖಾಸಗೀಕರಣ ಜಾರಿಯಾದಲ್ಲಿ ಇವರ ಬದುಕು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಬಹುದು ಎಂದು ಅಂತಕವನ್ನು ವ್ಯಕ್ತಪಡಿಸಿದರು.
ಅದೇ ರೀತಿ ರಾಜ್ಯದ ರೈತರು ಸರ್ಕಾರದ ಉಚಿತ ವಿದ್ಯುತ್ ಯೋಜನೆಯಡಿ ಕೃಷಿ ಪಂಪ್ಸೆಟ್ಗಳನ್ನು ಬಳಸಿ ಕೃಷಿ ಚಟುವಟಿಕೆ ನಡೆಸುತ್ತಿದ್ದು, ಖಾಸಗೀಕರಣದಿಂದ ರೈತರ ಮೇಲೂ ಆರ್ಥಿಕ ಹೊರೆ ಬೀಳುವ ಆತಂಕವಿದೆ. ರಾಜ್ಯದ ಬಡ ಕುಟುಂಬಗಳಿಗೆ ನೀಡುತ್ತಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಆರ್ಆರ್ಜಿ ಮುಂತಾದ ಯೋಜನೆಗಳು ಜನಸಾಮಾನ್ಯರ ಬದುಕಿಗೆ ಆಧಾರವಾಗಿವೆ. ಖಾಸಗೀಕರಣದಿಂದ ಇಂತಹ ಯೋಜನೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಬಡ ಜನರ ಜೀವನ ಸಂಕಷ್ಟಕ್ಕೆ ಸಿಲುಕಬಹುದು. ಆದ್ದರಿಂದ ಸರ್ಕಾರವು ವಿದ್ಯುತ್ ಖಾಸಗೀಕರಣಕ್ಕೆ ಅನುಮತಿ ನೀಡದೆ, ರಾಜ್ಯದ ಬಡ ಗುತ್ತಿಗೆದಾರರು, ಕಾರ್ಮಿಕರು ಹಾಗೂ ರೈತಾಪಿ ವರ್ಗದ ಹಿತವನ್ನು ಕಾಪಾಡಬೇಕೆಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ಎಸ್ಸಿ/ಎಸ್ಟಿ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಮನವಿ ಮಾಡಲಾಯಿತು. ಇದರ ಬಗ್ಗೆ ಜೂ. 23ರಂದು ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ವಿದ್ಯುತ್ ಸಚಿವರಿಗೆ ಹಾಗೂ ಕೆ.ಇ.ಆರ್.ಸಿ.ಗೆ ಮನವಿಯನ್ನು ಸಲ್ಲಿಸಲಾಗುವುದೆಂದು ತಿಳಿಸಿದರು.
ಗೋಷ್ಟಿಯಲ್ಲಿ ಜಿಲ್ಲಾ ಅನುಮತಿ ಪಡೆದ ಎಸ್ಸಿ/ಎಸ್ಟಿ ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಮಂಜುನಾಥ್ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















