ಸುದ್ದಿಒನ್, ಚಿತ್ರದುರ್ಗ, ಜುಲೈ. 04 : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯ ನೇಮಕಾತಿ ಪ್ರಕ್ರಿಯೆಯಲ್ಲಿ ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಅದಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.
ಚಿತ್ರದುರ್ಗದ ಪ್ರಸ್ತುತ ಡಿಸಿಯಾಗಿದ್ದ ವೆಂಕಟೇಶ್ ಟಿ. ಅವರ ಸ್ಥಾನಕ್ಕೆ, ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮ್ಯಾ ಎಸ್. ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು.
ಆದರೆ ರಾಜ್ಯದಲ್ಲಿ ಸದ್ಯ ಎಸ್ ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಚಾಲ್ತಿಯಲ್ಲಿದೆ. ನಿಯಮಗಳ ಪ್ರಕಾರ, ಇಂತಹ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಯ ಜವಾಬ್ದಾರಿ ಹೊತ್ತಿರುವ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮುನ್ನ ಕೇಂದ್ರ ಚುನಾವಣಾ ಆಯೋಗದ ಪೂರ್ವಾನುಮತಿ ಅಥವಾ ಸಹಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆದರೆ, ರಮ್ಯಾ ಎಸ್. ಅವರ ವರ್ಗಾವಣೆ ವೇಳೆ ಆಯೋಗದಿಂದ ಇಂತಹ ಯಾವುದೇ ಸಹಮತಿ ಪಡೆದಿರಲಿಲ್ಲ ಎನ್ನಲಾಗಿದೆ. ಈ ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ, ತಕ್ಷಣವೇ ತನ್ನ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ.


















