ಚಿತ್ರದುರ್ಗ | ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂದಕ್ಕೆ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ದೇಶದ ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.

 

ಕಾರ್ಮಿಕರ ರಕ್ಷಣೆಗಾಗಿ ಸಂಸತ್ತು 1923 ರಿಂದ 1996 ರ ನಡುವೆ ಜಾರಿಗೆ ತಂದ 44 ಕಾರ್ಮಿಕ ಕಾನೂನುಗಳನ್ನು ಪುನಃ ಸ್ಥಾಪಿಸಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ ಮತ್ತು 1996 ಕಟ್ಟಡ ಹಾಗು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ 1996 ನ್ನು ಪುನಃ ಸ್ಥಾಪಿಸಿ ಪೂರ್ಣವಾಗಿ ಜಾರಿಗೆ ತರಬೇಕು.

 

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಪ್ರಾದೇಶಿಕ ಪರಿಸ್ಥಿತಿಗಳಿಗೆ ಸೂಕ್ತವಾದ ಪ್ರತ್ಯೇಕ ಕಾರ್ಮಿಕ ಕಾನೂನುಗಳನ್ನು ರೂಪಿಸುವ ಹಕ್ಕನ್ನು ಉಳಿಸಿಕೊಳ್ಳಲು ಅವಕಾಶ ನೀಡಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ರೂ. 36 ಸಾವಿರ ಮಾಸಿಕ ವೇತನ ನಿಗಧಿಪಡಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ಖಾತರಿಪಡಿಸಬೇಕು. 60 ವರ್ಷ ತುಂಬಿದ ನಂತರ ತಿಂಗಳಿಗೆ ಆರು ಸಾವಿರ ರೂ. ಪಿಂಚಣಿ ನೀಡಬೇಕು. ಬಿಲ್ಡ್‍ರ್‍ಗಳಿಂದ ಸಂಗ್ರಹಿಸಲಾದ ಕಲ್ಯಾಣ ಸೆಸ್‍ನ್ನು ಶೇ.2 ಕ್ಕೆ ಹೆಚ್ಚಿಸಬೇಕು. ಸರ್ಕಾರವು ಕಲ್ಯಾಣ ಮಂಡಳಿಗೆ ಸಮಾನವಾದ ಮೊತ್ತ ಕೊಡಬೇಕು.

ನಿರ್ಮಾಣ ವಲಯದ ಮಹಿಳಾ ಕಾರ್ಮಿಕರಿಗೆ ಕಾನೂನು ಪ್ರಕಾರ ಆರು ತಿಂಗಳ ವೇತನ ಸಹಿತ ರಜೆ ನೀಡಬೇಕು. ಮನೆ, ನಿವೇಶನ ಹೊಂದಿರದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ವಸತಿ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾಂ.ಸಿ.ವೈ.ಶಿವರುದ್ರಪ್ಪ, ಕಾಂ.ಜಿ.ಸಿ.ಸುರೇಶ್‍ಬಾಬು, ಕಾಂ.ಜಾಫರ್‍ಶರೀಫ್, ಕಾಂ.ಎನ್.ಸಿ.ಕುಮಾರಸ್ವಾಮಿ, ಕಾಂ.ಟಿ.ಆರ್.ಉಮಾಪತಿ, ಕಾಂ.ಪೆನ್ನಯ್ಯ, ಕಾಂ.ಕೆ.ಇ.ಸತ್ಯಕೀರ್ತಿ ಕಾಂ.ಎಸ್.ಸಿ.ಕುಮಾರ್, ಕಾಂ.ಬಿ.ರಾಜಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಹಾಜರಿದ್ದರು.

Share This Article
Enable Notifications OK No thanks