ಚಿತ್ರದುರ್ಗ. ಸೆ.11: ಜಿಲ್ಲಾಸ್ಪತ್ರೆಗೆ ಮಂಜೂರಾದ ಹುದ್ದೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅನುಗುಣವಾಗಿ ತಜ್ಞ ವೈದ್ಯರು, ಶುಶ್ರೂಷಕರು, ತಂತ್ರಜ್ಞರು, ಗ್ರೂಪ್-ಡಿ ನೌಕರರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಗೆ ಮಂಜೂರಾದ ಹುದ್ದೆಗಳು ಖಾಲಿ ಇದ್ದ ಸಂದರ್ಭದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.
ಜಿಲ್ಲಾಸ್ಪತ್ರೆಯಲ್ಲಿ ಫಿಜಿಷಿಯನ್, ಹೃದ್ರೋಗ ತಜ್ಞರು, ಅರವಳಿಕೆ ತಜ್ಞರು, ನೆಫ್ರೋಲಜಿ, ನ್ಯೂರೋಲಜಿ ಅಂತಹ ತಜ್ಞ ವೈದ್ಯರ ಕೊರತೆ ಕಾಡಬಾರದು. ಆಸ್ಪತ್ರೆಯಲ್ಲಿ ಇಂಜಿನಿಯರ್ ಗ್ರೇಡ್ 2 ಹಾಗೂ ಗ್ರೇಡ್ -3 ಹಂತದ 6 ಹುದ್ದೆಗಳು ಖಾಲಿಯಿವೆ. ಹೊರಗುತ್ತಿಗೆ ಅಥವಾ ಪ್ರಭಾರದಲ್ಲಿ ಈ ಹುದ್ದೆಗಳಿಗೆ ಭರ್ತಿ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಜಿಲ್ಲಾಸ್ಪತ್ರೆಯ ದುರಸ್ಥಿ ಕಾಮಗಾರಿ ಪೂರ್ಣಗೊಂಡು ಎರಡು ವರ್ಷಗಳು ತುಂಬಿಲ್ಲ. ಆದರೂ ವಾರ್ಡ್ ಮೇಲ್ಛಾವಣಿ ಕುಸಿದು ಬಿದ್ದು ರೋಗಿಗಳಿಗೆ ತೊಂದರೆಯಾದ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಕಟ್ಟಡ ಕ್ಷಮತೆ, ಅಗತ್ಯ ಇರುವ ದುರಸ್ಥಿ ಕೆಲಸಗಳ ಕುರಿತು ಇಂಜಿನಿಯರ್ ಅವರ ವರದಿ ಇಲ್ಲದೇ ದುರಸ್ಥಿ ಕಾಮಗಾರಿ ನಡೆಸಲಾಗಿದೆಯೇ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ಪ್ರಶ್ನಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ, ನಿವಾಸಿ ವೈದ್ಯಾಧಿಕಾರಿ ಆನಂದ್ ಪ್ರಕಾಶ್, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಸಿ.ಓ.ಸುಧಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಡಾ.ಶೀತಲ್ ಪ್ರಶಾಂತ, ಚಿದಾನಂದ ಸ್ವಾಮಿ, ಹಬೀಬುಲ್ಲಾ, ನಾಗರಾಜ ಸಕ್ಕರೆ, ಎಂ.ಆರ್.ಸಿ. ಮೂರ್ತಿ, ರೆಹಮತ್ ಸೇರಿದಂತೆ ಮತ್ತಿತರರು ಇದ್ದರು.

