ಚಿತ್ರದುರ್ಗ : ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಮೀಟಿಂಗ್ : ಏನೆಲ್ಲಾ ಚರ್ಚೆಯಾಯ್ತು ? ಇಲ್ಲಿದೆ ಸಂಪೂರ್ಣ ಮಾಹಿತಿ…!

4 Min Read

ಚಿತ್ರದುರ್ಗ . ಮಾ.01:   ಬೇಸಿಗೆ ಕಾಲದಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ, ಪಟ್ಟಣಗಳಲ್ಲಿನ ಜನರಿಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ, ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ 83 ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 236 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಈ ಗ್ರಾಮಗಳ ವ್ಯಾಪ್ತಿಯಲ್ಲಿ ಸರ್ಕಾರದ ನಿರ್ದೇಶನದಂತೆ ಖಾಸಗಿ ಬೋರ್‍ವೆಲ್ ಹಾಗೂ ಪರ್ಯಾಯ ನೀರಿನ ಮೂಲಗಳ ಬಗ್ಗೆ ಗುರುತಿಸಿ, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಲಾಗುತ್ತಿದೆ.  ಜಿಲ್ಲೆಯಲ್ಲಿ ಒಟ್ಟು 1056 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 165 ಘಟಕಗಳು ಕೆಟ್ಟಿದ್ದು, ಇವುಗಳನ್ನು ದುರಸ್ತಿಗೊಳಿಸಬೇಕಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ವೀರೇಂದ್ರ ಪಪ್ಪಿ ಅವರು ಕೇವಲ 165 ಆರ್.ಒ ಘಟಕಗಳು ಮಾತ್ರ ಕೆಟ್ಟಿರುವುದು ಎಂಬುದಾಗಿ ತಿಳಿಸುತ್ತಿದ್ದು, ವಾಸ್ತವದಲ್ಲಿ ಇನ್ನೂ ಹೆಚ್ಚಿನ ಘಟಕಗಳು ಕೆಟ್ಟಿವೆ ಎಂದರು.  ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಗ್ರಾಮೀಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡುತ್ತಿಲ್ಲ, ಶಾಸಕರುಗಳಿಗೆ ಯಾವುದೇ ಮಾಹಿತಿ ಕೊಡುತ್ತಿಲ್ಲ, ಹೀಗಾದರೆ ಮುಂಬರುವ ಸಮಸ್ಯೆಗಳನ್ನು ನಾವು ಯಾವ ರೀತಿ ಎದುರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಹಳ್ಳಿಗಳಿಗೆ ಖುದ್ದು ತೆರಳಿ, ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಅರಿಯುವ ಹಾಗೂ ಆಯಾ ಕ್ಷೇತ್ರ ಶಾಸಕರುಗಳೊಂದಿಗೆ ಚರ್ಚಿಸಿ ವಾಸ್ತವತೆ ತಿಳಿದುಕೊಳ್ಳುವ ಕಾರ್ಯ ಮಾಡಬೇಕು ಎಂದರು.

ಶಾಸಕ ರಘುಮೂರ್ತಿ ಅವರು, ಆರ್.ಒ. ಘಟಕಗಳನ್ನು ಅನುಷ್ಠಾನಗೊಳಿಸಿದ ಬಳಿಕ, ಅವುಗಳನ್ನು ಸಂಬಂಧಿಸಿದ ಗ್ರಾ.ಪಂ. ಗಳಿಗೆ ಹಸ್ತಾಂತರ ಮಾಡಬೇಕು, ಆದರೆ ಅಧಿಕಾರಿಗಳು ಈ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

ಸಚಿವರು ಮಾತನಾಡಿ, ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಜಿಲ್ಲೆಯ ಯಾವುದೇ ಗ್ರಾಮ, ನಗರ, ಪಟ್ಟಣಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾದರೆ, ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು.  ಹೀಗಾಗಿ ಈಗಿನಂದಲೇ ಪರಿಹಾರ ಕಾರ್ಯಗಳನ್ನು ಯೋಜಿಸಿ, ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಬೇಕು, ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಗ್ಯಾರಂಟಿ ಯೋಜನೆಗಳ ಪರಿಶೀಲನೆ : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ ಅವರು, ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಅನ್ನಭಾಗ್ಯ ಯೋಜನೆಯಡಿ 05 ಕೆ.ಜಿ. ಅಕ್ಕಿ ಹಾಗೂ 05 ಕೆ.ಜಿ. ಅಕ್ಕಿ ಬದಲಿಗೆ ಹಣ ಕೋಡಲಾಗುತ್ತಿತ್ತು.  ಇದೀಗ 10 ಕೆ.ಜಿ. ಅಕ್ಕಿ ಕೊಡಲು ನಿರ್ಧರಿಸಿದ್ದು, ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.  ವಯೋವೃದ್ಧರಿಗೆ ಬಯೋಮೆಟ್ರಿಕ್ ನೀಡುವುದು ಸಮಸ್ಯೆ ಇರುವುದರಿಂದ, ಈ ಕಾರಣಕ್ಕಾಗಿ ಅವರಿಗೆ ಪಡಿತರ ಆಹಾರ ವಿತರಣೆ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು.  ಪಿಯುಸಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್‍ಟಿಸಿ ಯವರು ಅವಕಾಶ ಮಾಡಿಕೊಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತನಿಖೆಗೆ ಸಮಿತಿ ರಚನೆ: ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂದಿದ್ದ ಸಮಯದಲ್ಲಿ ಜಿಲ್ಲೆಯಲ್ಲಿ ಸಿಎಸ್‍ಆರ್ ನಿಧಿಯಲ್ಲಿ ಸುಮಾರು 47 ಕೋಟಿ ರೂ., ಡಿಎಂಎಫ್ ನಿಧಿಯಲ್ಲಿ 14.85 ಕೋಟಿ ರೂ. ಹಾಗೂ ಸರ್ಕಾರದ ಅನುದಾನದಲ್ಲಿ ಖರೀದಿಸಲಾದ ಔಷಧಿ, ವೈದ್ಯಕೀಯ ಉಪಕರಣಗಳು ಇತ್ಯಾದಿಗಳ ಖರೀದಿ ಹಾಗೂ ಬಳಕೆ ಕುರಿತಂತೆ ಲೆಕ್ಕ ಪತ್ರಗಳ ಪರಿಶೀಲನೆ ಮತ್ತು ವರದಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಿಸಿ : ಡಿಡಿಪಿಐ ಮಂಜುನಾಥ್ ಅವರು, ಈ ವರ್ಷ ಜಿಲ್ಲೆಯಲ್ಲಿ 24414 ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದು, ಸುಮಾರು 5656 ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿರುವುದನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರು ಮಾತನಾಡಿ, ಜಿಲ್ಲೆಯ ಡಯಟ್‍ನಿಂದ ಉತ್ತಮ ಕಾರ್ಯ ಆಗುತ್ತಿದೆ.  ಆದರೆ ಡಿಡಿಪಿಐ ಅವರು, ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ತೃಪ್ತಿಕರ ಕಾರ್ಯ ಮಾಡುತ್ತಿಲ್ಲ.  ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಪಾಸಿಂಗ್ ಪ್ಯಾಕೇಜ್ ಶಿಕ್ಷಣ ನೀಡುವಂತಹ ಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡುತ್ತಿಲ್ಲ. ಕಾರ್ಯಗಾರಗಳಿಗೆ ಪ್ರತಿ ವರ್ಷ ಸಂಪನ್ಮೂಲ ವ್ಯಕ್ತಿಗಳನ್ನು ಬದಲಿಸಬೇಕು. ಮುಂದಿನ ಶೈಕ್ಷಣಿಕ ಸಾಲಿಗೆ ಕಾರ್ಯಗಾರಗಳನ್ನು ಏರ್ಪಡಿಸಲು ಈಗಿನಿಂದಲೇ ವೇಳಾಪಟ್ಟಿ ಮಾಡಿಕೊಳ್ಳಬೇಕು, ಪರೀಕ್ಷೆ ಸಂದರ್ಭದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಬಾರದು ಎಂದರು.
ಸಭೆಯಲ್ಲಿ ಶಾಸಕರುಗಳಾದ ಕೆ.ಸಿ. ವೀರೇಂದ್ರ ಪಪ್ಪಿ, ಟಿ. ರಘುಮೂರ್ತಿ, ಡಾ. ಎಂ. ಚಂದ್ರಪ್ಪ, ಬಿ.ಜಿ. ಗೋವಿಂದಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಡಿ.ಟಿ. ಶ್ರೀನಿವಾಸ್, ಕೆ.ಎಸ್. ನವೀನ್.  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ, ಜಿಲ್ಲಾ ಅಧ್ಯಕ್ಷ ಶಿವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಎಸ್‍ಪಿ ರಂಜಿತ್ ಕುಮಾರ್ ಬಂಡಾರು, ಕೆಡಿಪಿ ನಾಮನಿರ್ದೇಶಿತ ಸದಸ್ಯರುಗಳಾದ ಪಿ. ದೀಪಿಕಾ ಸತೀಶ್, ಟಿ.ಕೆ. ಖಲೀಂ ಉಲ್ಲಾ, ಕೆ.ಸಿ. ನಾಗರಾಜ್, ರಂಗಸ್ವಾಮಿ, ತಿಮ್ಮಯ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *