ಚಿತ್ರದುರ್ಗ  ವೈದ್ಯಕೀಯ ಕಾಲೇಜು : ವೈದ್ಯರ ನೇಮಕಾತಿ ಪ್ರಕ್ರಿಯೆಗೆ ಕೆಡಿಪಿ ಸಭೆಯಲ್ಲಿ ತೀವ್ರ ಅಸಮಾಧಾನ

1 Min Read

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ನಿರ್ದೇಶಕರ ಕಾರ್ಯವೈಖರಿ ಕುರಿತು ಸಚಿವರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚೆಯಾಯಿತು.
ಚಿತ್ರದುರ್ಗ  ವೈದ್ಯಕೀಯ ಕಾಲೇಜು ವೈದ್ಯರ ನೇಮಕಾತಿ ಸಂದರ್ಶನ ಚಿತ್ರದುರ್ಗದ ಬದಲಾಗಿ ಬೆಂಗಳೂರಿನಲ್ಲಿ ಯಾಕೆ ನಡೆಸಿದಿರಿ, ತಜ್ಞ ವೈದ್ಯರಿಗೆ ಗೌರವಧನ ನೀಡಿ, ಚಿತ್ರದುರ್ಗದಲ್ಲಿಯೇ ಸಂದರ್ಶನ ಏರ್ಪಡಿಸಬಹುದಿತ್ತು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವೈದ್ಯಕೀಯ ಕಾಲೇಜು ನಿರ್ದೇಶಕರನ್ನು ಪ್ರಶ್ನಿಸಿದರು.

ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದಂತೆ ವಾರಕ್ಕೊಮ್ಮೆ ಜಿಲ್ಲಾಧಿಕಾರಿ ಹಾಗೂ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದು ಸೂಕ್ತ ಎಂದರು.

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಎಲ್ಲರ ಪ್ರಯತ್ನದ ಫಲವಾಗಿ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಕಟ್ಟಡಗಳು, ವಿದ್ಯಾರ್ಥಿ ನಿಲಯ, ಬೋಧಕ, ಬೋಧಕೇತರ ಸಿಬ್ಬಂದಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಆದಾಗ್ಯ ವೈದ್ಯರ ನೇಮಕಾತಿ ಸಂದರ್ಶನ ಬೆಂಗಳೂರಿನಲ್ಲಿ ಮಾಡುವ ಅನಿವಾರ್ಯತೆ ಏನಿತ್ತು. ನಿಮ್ಮದೇ ತೀರ್ಮಾನ ಮಾಡುತ್ತಿರಾ ಎಂದು ಪ್ರಶ್ನಿಸಿದರು.

ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು, ವೈದ್ಯಕೀಯ ಕಾಲೇಜಿಗೆ ವೈದ್ಯರ ನೇಮಕಾತಿಯಲ್ಲಿ ಬಹಳಷ್ಟು ದೂರುಗಳು ಕೇಳಿಬರುತ್ತಿವೆ.  ಈ ಬಗ್ಗೆ ನೊಂದವರೇ ನಮ್ಮ ಗಮನಕ್ಕೆ ತಂದಿದ್ದಾರೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *