ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 28 : ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಬುಧವಾರ ಮೂರನೆ ದಿನಕ್ಕೆ ಕಾಲಿಟ್ಟಿದೆ.
ಚಿತ್ರದುರ್ಗ ತಾಲ್ಲೂಕು ಪೌರ ನೌಕರರು ಹಾಗೂ ಪೌರ ಕಾರ್ಮಿಕರು ನಗರಸಭೆ ಮುಂಭಾಗದ ಗೇಟ್ ಬಂದ್ ಮಾಡಿ ರಸ್ತೆಯಲ್ಲಿಯೇ ಮುಷ್ಕರ ಆರಂಭಿಸಿದ್ದಾರೆ. ಹೊರ ಗುತ್ತಿಗೆ ಪದ್ದತಿಯನ್ನು ನಿಲ್ಲಿಸಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ನೀರು ಸರಬರಾಜುದಾರರು ಹಾಗೂ ವಾಹನ ಚಾಲಕರುಗಳು ಜೀವನ ಭದ್ರತೆಯಿಲ್ಲದೆ ಅನೇಕ ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದು, ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಲ್ಲಿಯತನಕ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲವೆಂದು ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.
ಪೌರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ರೇಣುಕ ಮಾತನಾಡಿ ಬೆಂಗಳೂರಿನ ಬಿ.ಬಿ.ಎಂ.ಪಿ.ಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಾಯಂಗೊಳಿಸಿದ್ದು, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರನ್ನು ನಿರ್ಲಕ್ಷಿಸಿರುವುದು ಯಾವ ನ್ಯಾಯ? ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಸಿಗುತ್ತಿಲ್ಲ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಿದೆ. ಜ್ಯೋತಿ ಸಂಜೀವಿನಿ ಯೋಜನೆ ಪೌರ ಕಾರ್ಮಿಕರಿಗೆ ಸಿಗಬೇಕು. ಗುತ್ತಿಗೆ ಹೊರ ಗುತ್ತಿಗೆ ಬದಲು ನೇರ ಪಾವತಿಯಾಗಬೇಕೆಂದು ಒತ್ತಾಯಿಸಿದರು.
ವಾಲ್ಮನ್ಗಳು, ನೀರು ಸರಬರಾಜುದಾರರು, ಹೆಲ್ತ್ಇನ್ಸ್ಪೆಕ್ಟರ್ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮುಷ್ಕರದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ಬೆಂಬಲ ಸೂಚಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಸಿ.ಹೆಚ್.ಮಂಜುನಾಥ್, ಜಗದೀಶ್ ಇನ್ನು ಅನೇಕರು ಪೌರ ಕಾರ್ಮಿಕರ ಜೊತೆ ಮುಷ್ಕರದಲ್ಲಿದ್ದರು.



















