ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಬಯಲುಸೀಮೆ ಭಾಗದ ಜನರ ಐದು ದಶಕಗಳ ಕನಸಾಗಿರುವ ‘ಭದ್ರಾ ಮೇಲ್ದಂಡೆ ಯೋಜನೆ’ಗೆ ತಕ್ಷಣವೇ ರಾಷ್ಟ್ರೀಯ ಯೋಜನೆಯ ಮನ್ನಣೆ ನೀಡಬೇಕು ಹಾಗೂ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ ಅನುದಾನವನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿಯು ರಾಜ್ಯದ ಲೋಕಸಭೆ ಮತ್ತು ರಾಜ್ಯಸಭೆಯ ಗೌರವಾನ್ವಿತ ಸದಸ್ಯರುಗಳಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದೆ.
ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಎಲ್ಲಾ ಸಂಸದರು ಪಕ್ಷಾತೀತವಾಗಿ ಒಗ್ಗೂಡಿ ಈ ಕುರಿತು ಪ್ರಬಲವಾಗಿ ಧ್ವನಿಯೆತ್ತುವಂತೆ ಸಮಿತಿ ಪ್ರಕಟಣೆಯಲ್ಲಿ ಕೋರಿದೆ. ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು, ಮಠಾಧೀಶರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಬೆಂಬಲದೊಂದಿಗೆ ಸಮಿತಿಯು 1997ರಿಂದಲೂ ಈ ನೀರಾವರಿ ಯೋಜನೆಗಾಗಿ ನಿರಂತರ ಹೋರಾಟ ನಡೆಸಿಕೊಂಡು ಬಂದಿದೆ. ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಯೋಜನೆ ಜಾರಿಗೆ ಶ್ರಮಿಸಿದ್ದು, ಕೇಂದ್ರ ಸರ್ಕಾರ ಹಾಗೂ ಹಲವು ನಾಯಕರು ಈ ಯೋಜನೆಗೆ ರಾಷ್ಟ್ರೀಯ ಮನ್ನಣೆ ನೀಡುವ ಭರವಸೆ ನೀಡಿದ್ದರು.
2023-24ರ ಕೇಂದ್ರ ಬಜೆಟ್ನಲ್ಲಿ ಈ ಯೋಜನೆಗಾಗಿ 5,300 ಕೋಟಿ ರೂಪಾಯಿಗಳ ಅನುದಾನ ಘೋಷಿಸಲಾಗಿತ್ತು. ಆದರೆ ವರ್ಷಗಳು ಕಳೆದರೂ ಈ ಹಣ ಬಿಡುಗಡೆಯಾಗಿಲ್ಲ. ಪದೇ ಪದೆ ಪರಿಷ್ಕೃತ ಪ್ರಸ್ತಾವನೆ ಕಳುಹಿಸುವಂತೆ ಸೂಚಿಸುತ್ತಿರುವುದು ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ. ನಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪ್ರತ್ಯಾರೋಪಗಳು ಬೇಕಾಗಿಲ್ಲ, ಬರಡು ನೆಲವನ್ನು ಹಸಿರಾಗಿಸುವ ಜನರ ಕನಸು ಈಡೇರುವುದಷ್ಟೇ ಪ್ರಮುಖವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಅಲ್ಲದೆ, ಅರಣ್ಯ ಪ್ರದೇಶದಲ್ಲಿ 50 ವಿದ್ಯುತ್ ಪ್ರಸರಣ ಗೋಪುರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ 48 ಗೋಪುರಗಳಿಗೆ ಅನುಮತಿ ಲಭಿಸಿದ್ದು, ಬಾಕಿ ಉಳಿದ 2 ಗೋಪುರಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯಿಂದ ತಕ್ಷಣವೇ ಅಂತಿಮ ಅನುಮತಿ ಕೊಡಿಸಬೇಕಿದೆ. ಈ ಪ್ರಕ್ರಿಯೆ ಪೂರ್ಣಗೊಂಡರೆ ತುಂಗಾ ತಿರುವು ಮೂಲಕ ಭದ್ರಾ ಜಲಾಶಯಕ್ಕೆ 17.40 ಟಿಎಂಸಿ ಅಡಿ ನೀರು ಹರಿಯಲಿದ್ದು, ಇದರಿಂದ ಚಿತ್ರದುರ್ಗ, ತುಮಕೂರು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಜನರಿಗೆ ನೀರಾವರಿ ಸೌಲಭ್ಯ ದೊರೆಯಲಿದೆ.
ಆದ್ದರಿಂದ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಅಧಿವೇಶನದಲ್ಲಿ ಮುಖ್ಯವಾಗಿ ಯೋಜನೆಗೆ ರಾಷ್ಟ್ರೀಯ ಮನ್ನಣೆ ನೀಡುವುದು, ಬಜೆಟ್ನಲ್ಲಿ ಘೋಷಿಸಿದ 5,300 ಕೋಟಿ ರೂ. ಬಿಡುಗಡೆ ಮಾಡಿಸುವುದು ಹಾಗೂ ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಅಂತಿಮ ಅನುಮತಿ ಕೊಡಿಸುವ ವಿಷಯಗಳನ್ನು ಪ್ರಸ್ತಾಪಿಸಬೇಕು. ಸಂಸತ್ತಿನಲ್ಲಿ ಈ ಕುರಿತು ಧ್ವನಿಯೆತ್ತುವ ಜನಪ್ರತಿನಿಧಿಗಳಿಗೆ ಜಿಲ್ಲೆಯ ಸಮಸ್ತ ಜನತೆ, ಸಂಘ-ಸಂಸ್ಥೆಗಳು ಹಾಗೂ ನೀರಾವರಿ ಹೋರಾಟ ಸಮಿತಿಯು ಸಂಪೂರ್ಣ ಬೆಂಬಲವಾಗಿ ನಿಲ್ಲಲಿದೆ ಎಂದು ಅಧ್ಯಕ್ಷರಾದ ಪಿ. ಕೋದಂಡರಾಮಯ್ಯ, ಪ್ರಧಾನ ಸಂಚಾಲಕರಾದ ಡಾ. ಬಂಜಗೆರೆ ಜಯಪ್ರಕಾಶ್ ಹಾಗೂ ಸಂಚಾಲಕ ಸಮಿತಿ ಸದಸ್ಯರಾದ ಚಳ್ಳಕೆರೆ ಬಸವರಾಜ್, ನರೇನಹಳ್ಳಿ ಅರುಣ್ಕುಮಾರ್ ಮತ್ತು ಜೋಗಿಮಟ್ಟಿ ಮಹೇಶಬಾಬು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









