ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಭಾರತ ಚುನಾವಣಾ ಆಯೋಗ ಮೊದಲ ಹಂತದಲ್ಲಿ 12 ರಾಜ್ಯಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಎಸ್.ಐ.ಆರ್.ಮ್ಯಾಪಿಂಗ್ ಕೈಗೊಂಡಿರುವುದರ ವಿರುದ್ದ ಎಲ್ಲಾ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಸರ್ಕಾರ ಸಂವಿಧಾನಬದ್ದ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿರುವುದನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರದ ಜನವಿರೋಧಿ, ದಲಿತ, ಹಿಂದುಳಿದ, ಕಾರ್ಮಿಕ, ಅಲ್ಪಸಂಖ್ಯಾತರು, ಮಹಿಳಾ ವಿರೋಧಿ ಕಾಯಿದೆಗಳನ್ನು ವಿರೋಧಿಸಿ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಿಹಾರ, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಪಶ್ಚಿಮ ಬಂಗಾಳದಲ್ಲಿ 58 ಲಕ್ಷ ಮತದಾರರನ್ನು ತೆಗೆದುಹಾಕಲು ಈಗಾಗಲೆ ಸೂಚಿಸಿರುವುದನ್ನು ವಿರೋಧಿಸಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ವಿಶೇಷ ಮತಪಟ್ಟಿ ಪರಿಷ್ಕರಣೆ ನೆಪದಲ್ಲಿ ಕೋಮುವಾದಿ ಬಿಜೆಪಿ. ಚುನಾವಣಾ ಆಯೋಗವನ್ನು ದುರಪಯೋಗಪಡಿಸಿಕೊಂಡು ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ಹುನ್ನಾರವಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎಸ್.ಐ.ಆರ್.ಜಾರಿಗೆ ತರಬಾರದೆಂದು ಆಗ್ರಹಿಸಿದರು.
ಸ್ಲಂ ಜನಾಂದೋಲನ ಕರ್ನಾಟಕ ಸಾವಿತ್ರಿಬಾಪುಲೆ ಮಹಿಳಾ ಸಂಘಟನೆ ಜಿಲ್ಲಾ ಸಂಯೋಜಕಿ ಸುಧಾ, ಶಾಂತಮ್ಮ, ನೀಲಮ್ಮ, ಕೆ.ರಾಜಣ್ಣ, ಬಸಮ್ಮ, ನಾಗರತ್ನಮ್ಮ, ಬಿ.ಎಸ್.ಪ್ರಭಾವತಿ, ಕಮಲಮ್ಮ, ಬಿ.ಎಸ್.ಮಂಜಣ್ಣ, ವಿನಾಯಕ, ಆರ್.ರಾಮಪ್ಪ, ಟಿ.ಶಫಿವುಲ್ಲಾ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


