ಸುದ್ದಿಒನ್, ಚಿತ್ರದುರ್ಗ, ಮೇ 22: ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಾದುಹೋಗಿರುವ ಮಾರುತಿ ನಗರದ ಸಮೀಪದ ರೈಲ್ವೆ ಸೇತುವೆಯ ಕೆಳಭಾಗವು ಸಾರ್ವಜನಿಕರ ಪಾಲಿಗೆ ನರಕಸದೃಶವಾಗಿ ಮಾರ್ಪಟ್ಟಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಇಲ್ಲಿನ ಅವ್ಯವಸ್ಥೆಗಳು ತಾರಕಕ್ಕೇರಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಯಾತನೆ ಅನುಭವಿಸುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಪ್ರಮುಖ ಬಡಾವಣೆಗಳಾದ ಮಾರುತಿ ನಗರ ಮತ್ತು ವಿದ್ಯಾ ನಗರಗಳಿವೆ. ಇಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ, ಸಣ್ಣ ಮಳೆ ಬಂದರೂ ಸಾಕು ಇಡೀ ಸೇತುವೆಯ ಕೆಳಭಾಗ ಕೆರೆಯಂತಾಗುತ್ತದೆ. ಮಳೆ ನೀರು ಮೊಣಕಾಲುದ್ದ ನಿಲ್ಲುವುದರಿಂದ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸೇತುವೆಯ ಕೆಳಗೆ ಕೇವಲ ಮಳೆ ನೀರಿನದ್ದಷ್ಟೇ ಸಮಸ್ಯೆಯಲ್ಲ. ಸೂಕ್ತ ನಿರ್ವಹಣೆ ಇಲ್ಲದಿರುವುದನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಸಾರ್ವಜನಿಕರು ಸಿಕ್ಕಸಿಕ್ಕಲ್ಲಿ ಕಸ ತಂದು ಹಾಕುತ್ತಿದ್ದಾರೆ. ಇದರಿಂದಾಗಿ ಇಡೀ ಪ್ರದೇಶ ದುರ್ನಾತ ಬೀರುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಇನ್ನೂ ಕತ್ತಲಾಗುತ್ತಿದ್ದಂತೆ ಈ ಭಾಗದಲ್ಲಿ ಸಂಚರಿಸುವುದು ಸಾಹಸದ ಕೆಲಸವೇ ಸರಿ. ಸೇತುವೆಯ ಎರಡೂ ಬದಿಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ ಇಲ್ಲದಿರುವುದರಿಂದ ಇಡೀ ರಸ್ತೆ ಕತ್ತಲಲ್ಲಿ ಮುಳುಗುತ್ತದೆ. ಇದರಿಂದಾಗಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಸಂಜೆ ವೇಳೆ ಇಲ್ಲಿ ಓಡಾಡಲು ಭಯಪಡುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲೇ ಇಂತಹ ದುಃಸ್ಥಿತಿ ಇದ್ದರೂ ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡು, ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ. ಇಲ್ಲಿನ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಬೇಕು, ಬೀದಿ ದೀಪಗಳನ್ನು ಅಳವಡಿಸಬೇಕು ಮತ್ತು ಕಸ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾರುತಿನಗರ ಹಾಗೂ ವಿದ್ಯಾನಗರ ಬಡಾವಣೆಯ ನಿವಾಸಿಗಳು ಮತ್ತು ಸಾರ್ವಜನಿಕರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















