Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿರಿಧಾನ್ಯ ಉತ್ಪಾದನೆಯಲ್ಲಿ ಚಿತ್ರದುರ್ಗ ರಾಜ್ಯದಲ್ಲೇ ಪ್ರಥಮ : ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಪೂರ್ಣ

---Advertisement---

 

ಚಿತ್ರದುರ್ಗ. ಜ.26: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಡಿ ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ತಿಳಿಸಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಅವರು ನಂತರ ಗಣರಾಜ್ಯೋತ್ಸವ ಸಂದೇಶ ನೀಡಿದರು.
ಯೋಜನೆಯ ಬಾಕಿ ಕಾಮಗಾರಿಗಳಿಗಾಗಿ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸರ್ಕಾರ ಭರವಸೆ ನೀಡಿದೆ. ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕುಗಳ ಒಟ್ಟು 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ 2677 ಕೋಟಿ ರೂ.ಗಳ ಬೃಹತ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ಕೃಷಿ ಸಾಧನೆಯಲ್ಲಿ ಜಿಲ್ಲೆ ನಂಬರ್ 1 :
ಜಿಲ್ಲೆಯ ರೈತರ ಸಾಧನೆಯನ್ನು ಶ್ಲಾಘಿಸಿದ ಸಚಿವರು, 2025-26ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯು 48,682 ಟನ್ ಸಿರಿಧಾನ್ಯ ಉತ್ಪಾದಿಸುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ತೋಟಗಾರಿಕೆ ಮತ್ತು ಸಣ್ಣ ನೀರಾವರಿ ಇಲಾಖೆಗಳ ಮೂಲಕ ಸಾವಿರಾರು ರೈತರಿಗೆ ಕೋಟ್ಯಂತರ ರೂಪಾಯಿಗಳ ಸೌಲಭ್ಯ ಒದಗಿಸಲಾಗಿದೆ ಎಂದು ಹೆಮ್ಮೆಯಿಂದ ತಿಳಿಸಿದರು.

 

ಕೈಗಾರಿಕೆ ಮತ್ತು ರೈಲ್ವೆ ಅಭಿವೃದ್ಧಿ :
ಜಿಲ್ಲೆಯ ಕೈಗಾರಿಕೆ ಅಭಿವೃದ್ದಿಗೆ ವೇಗ ನೀಡಿದ್ದು ಹಿರಿಯೂರು ತಾಲ್ಲೂಕಿನ ಮೇಟಿಕುರ್ಕಿ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ದೊರೆಯಲಿದೆ.ದಾವಣಗೆರೆ-ತುಮಕೂರು ನೇರ ರೈಲು ಮಾರ್ಗಕ್ಕಾಗಿ ಸರ್ಕಾರ 1,211 ಎಕರೆ ಜಮೀನು ಹಸ್ತಾಂತರಿಸಿದ್ದು, ಡಿಸೆಂಬರ್ 2027ರ ವೇಳೆಗೆ ಈ ಯೋಜನೆ ಪೂರ್ಣಗೊಂಡು ರೈಲು ಸಂಚಾರ ಆರಂಭವಾಗಲಿದೆ ಎಂದು ಭರವಸೆ ನೀಡಿದರು.
ನಮ್ಮ ಸಂವಿಧಾನವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಬದುಕು ಕಲ್ಪಿಸಿದೆ. ಸಂವಿಧಾನ ರಚನಾ ಸಮಿತಿಯಲ್ಲಿ ನಮ್ಮ ಜಿಲ್ಲೆಯ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್. ನಿಜಲಿಂಗಪ್ಪನವರು ಇದ್ದದ್ದು ನಮಗೆ ಹೆಮ್ಮೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಜೀವನ ಮಟ್ಟವನ್ನು ಸುಧಾರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ರಾಜ್ಯದ ಸವಾರ್ಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಅವರು ಹೇಳಿದರು.

 

ಪೆÇಲೀಸರಿಗೆ ಪೀಕ್ ಕ್ಯಾಪ್ ವಿತರಣೆ :
ಪೆÇಲೀಸ್ ಕಾನ್ಸ್‍ಟೇಬಲ್‍ಗಳಿಗೆ ಸ್ಲೋಚ್ ಹ್ಯಾಟ್ ಬದಲು ಪೀಕ್ ಕ್ಯಾಪ್ ನೀಡಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪೆÇಲೀಸರಿಗೆ  ಸಾಂಕೇತಿಕವಾಗಿ ಸಚಿವ ಡಿ.ಸುಧಾಕರ್ ಪೀಕ್  ಕ್ಯಾಪ್ ವಿತರಿಸಿದರು. ಇದೇ ವೇಳೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸರ್ಕಾರಿ ಶಾಲೆಗಳಿಗೆ ನೀಡಿರುವ ಕ್ರೀಡಾ ಪರಿಕರಗಳನ್ನು ಹಾಗೂ  ಸ್ವಾವಲಂಬಿ ಸಾರಥಿ ಯೋಜನೆಡಿ ಫಲಾನುಭವಿಗಳಿಗೆ ವಾಹನಗಳ ಕೀ ಅನ್ನು ಸಚಿವರು ಹಸ್ತಾಂತರಿಸಿದರು. ಎಸ್‍ಎಸ್.ಎಲ್.ಸಿ ಅಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ಧನ ಚೆಕ್ ನೀಡಿದರು.  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸತತ 5 ವರ್ಷಗಳ ಕಾಲ ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆಗಾಗಿ  ಸಂಸ್ಥೆ ವತಿಯಿಂದ ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರವನ್ನು ಚಿತ್ರದುರ್ಗ ಘಟಕದ ಚಾಲಕ ಮನೋಹರ್ ಆರ್. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿ, ಗೌರವಿಸಿದರು.

 

ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನ :
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 14 ಮಂದಿ ಅಧಿಕಾರಿಗಳು ಹಾಗೂ ನೌಕರರನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗೆ  ಭಾಜನರಾದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

 

ಆಕರ್ಷಕ ಪಥ ಸಂಚಲನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ :
ಸಶಸ್ತ್ರ ಮೀಸಲು ಪಡೆ, ನಾಗರೀಕ ಪೆÇಲೀಸ್, ಗೃಹ ರಕ್ಷಕ, ಅರಣ್ಯ ಇಲಾಖೆ ತುಕಡಿಗಳು ಎನ್‍ಸಿಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳ ತಂಡ, ಪೆÇಲೀಸ್ ಬ್ಯಾಂಡ್ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿದ್ದವು. ತುರುವನೂರು ಇಂದಿರಾ ಗಾಂಧಿ ವಸತಿ ಶಾಲೆ, ನಗರದ ಕೆ.ಕೆ.ನ್ಯಾಷನಲ್ ಸ್ಕೂಲ್, ರೀಜಿನಲ್ ಮತ್ತು ಕ್ರಸೆಂಟ್ ಶಾಲೆ ಮಕ್ಕಳು ದೇಶಭಕ್ತಿ ಹಾಗೂ ವೈವಿಧ್ಯತೆ ಬಿಂಬಿಸುವ ನೃತ್ಯ ರೂಪಕಗಳನ್ನು ಪ್ರಸ್ತುತ ಪಡಿಸಿದರು. ಪಥ ಸಂಚಲನದಲ್ಲಿ ಭಾಗವಹಿಸಿದ ಮೆದೇಹಳ್ಳಿ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಪ್ರಥಮ, ಗುಳೇನಹಟ್ಟಿಯ ಮೊರಾರ್ಜಿ ದೇಸಾಯಿ ದ್ವೀತಿಯ, ಮಲ್ಲಾಡಿಹಳ್ಳಿ ಗಾರ್ಡಿಯನ್ ಏಂಜಲ್ ಶಾಲೆಯ ತಂಡಗಳು ತೃತೀಯ ಸ್ಥಾನ ಪಡೆದುಕೊಂಡವು.

 

ಶಾಸಕ ಕೆ.ಎಸ್.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಭೋವಿ ನಿಗಮದ ಅಧ್ಯಕ್ಷ ವಿ.ರಾಮಪ್ಪ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರಿದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now