ಸ್ವಚ್ಛತೆಯೇ ಸೇವೆ-ಸ್ವಚ್ಛತಾ ಹೀ ಸೇವಾ ವಿಶೇಷ ಪಾಕ್ಷಿಕ ಆಚರಣೆ ಅಂಗವಾಗಿ ಜಿಲ್ಲಾ ಪಮಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರ ನೇತೃತ್ವದಲ್ಲಿ ಅವರ ತಂಡವು ನಗರದ ಹೊರವಲಯದ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಎಂಐಟಿ ಇಂಜಿನಿಯರಿಂಗ್ ಮುಂಭಾಗದಿಂದ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಎನ್.ಹೆಚ್-4 ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಎರಡು ಬದಿಗಳಲ್ಲಿ ಹಾಗೂ ಮೆದೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ-4ರ ಅಂಡರ್ ಪಾಸ್ಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು ಹಾಗೂ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಬೃಹತ್ ಕಸ ರಾಶಿ ಹೊಂದಿರುವ ಸ್ಥಳಗಳು ಹಾಗೂ ಕೊಳಕು ಸ್ಥಳಗಳನ್ನು ಗುರುತಿಸಿ, ಸ್ವಚ್ಛಗೊಳಿಸಿ, ಅಂತಹ ಸ್ಥಳಗಳನ್ನು ಸೌಂದರ್ಯಕರಣ ಹಾಗೂ ನಾಮಫಲಕಗಳನ್ನು ಅಳವಡಿಸಲಾಗುತ್ತಿದೆ ಎಂದರು.
ಜನಸಂದಣಿ ಹೆಚ್ಚಿರುವ ಸ್ಥಳಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಶುಚಿತ್ವ ಸುಧಾರಿಸಲು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಗ್ರಾಮ ಪಂಚಾಯಿತಿಯ ನೈರ್ಮಲ್ಯ ಕಾರ್ಯಕರ್ತರಿಗೆ ಆರೋಗ್ಯ ತಪಾಸಣೆ ಮತ್ತು ಸರ್ಕಾರಗಳ ವತಿಯಿಂದ ಜಾರಿ ಮಾಡಿರುವ ವಿವಿಧ ಜನ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.
ಸ್ವಚ್ಛತೆ ಕುರಿತಂತೆ ರಂಗೋಲಿ ಸ್ಪರ್ಧೆ, ಚರ್ಚಾ ಸ್ಪರ್ಧೆ, ಆಶುಭಾಷಣ ಸ್ಪರ್ಧೆಗಳನ್ನು ಎಲ್ಲ ಶಾಲೆಗಳಲ್ಲಿ ಆಯೋಜಿಸಲಾಗಿ, ವಿಜೇತ ವಿದ್ಯಾರ್ಥಿಗಳಿಗೆ ಅಕ್ಟೋಬರ್ 02ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಣೆ ಮಾಡಲಾಗುವುದು ಎಂದರು.
ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಮಾತನಾಡಿ, ಅತಿ ಹೆಚ್ಚು ತ್ಯಾಜ್ಯ ಸಂಗ್ರಹಣೆಯಾಗಿರುವ ಮಾರುಕಟ್ಟೆ, ಸಂತೆಮೈದಾನ, ಬಸ್ ನಿಲ್ದಾಣ ಇತರೆ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಚರಂಡಿ, ನೀರಿನ ಮೂಲಗಳ ಸ್ವಚ್ಛತೆ, ಗಿಡ ನೆಡುವುದು, ಮನೆಗಳಿಗೆ ಭೇಟಿ ನೀಡಿ, ಸ್ವಚ್ಛ ವಾಹಿನಿ ಮೂಲಕ ಹಸಿ ಕಸ, ಒಣ ಕಸ ಮೂಲದಲ್ಲಿಯೇ ವಿಂಗಡಣೆ ಮಾಡಿ, ಸಂಗ್ರಹಿಸಿ ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ವಿಂಗಡಣೆ ಮಾಡಿ ವಿಲೇವಾರಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸುಮ, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕಿ ( ಪಂಚಾಯತ್ ರಾಜ್ ) ರೂಪರಾಣಿ, ಜಿಲ್ಲಾ ಐಇಸಿ ಸಮಾಲೋಚಕರಾದ ಬಿ.ಸಿ.ನಾಗರಾಜ್, ಸ್ವಚ್ಛ ಭಾರತ್ ಮಿಷನ್ ಸಮಾಲೋಚಕ ಬಿ.ಪ್ರಮೀಳಾ, ಎಂಐಎಸ್ ಸಮಾಲೋಚಕ ಶಶಿಧರ್, ಹೆಚ್ಆರ್ಡಿ ಸಮಾಲೋಚಕ ವಿನಯ್ ಕುಮಾರ್, ಲೆಕ್ಕ ಸಹಾಯಕಿ ಶೃತಿ, ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್, ಸದಸ್ಯರಾದ ಲಿಂಗಪ್ಪ, ತಿಮ್ಮರಾಜು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಮೆದೇಹಳ್ಳಿ ಗ್ರಾಮ ಪಂಚಾಯಿತಿಯ ಎಸ್ಡಿಎ ವೆಂಕಟೇಶ್, ಬಿಲ್ ಕಲೆಕ್ಟರ್ ದುಗ್ಗೇಶ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಮತ್ತಿತರರು ಇದ್ದರು.