ಹಿರಿಯೂರು, ಏಪ್ರಿಲ್. 17 : ನಗರದ ಒಳ ಬರುವ ಹಾಗೂ ಹೊರ ಬರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ಮಾರ್ಗ ಮಧ್ಯದಲ್ಲಿ ಬೃಹತ್ ವಾಹನಗಳು, ಲಾರಿಗಳು ಪಾರ್ಕಿಂಗ್ ಮಾಡುತ್ತಿದ್ದು, ಇದು ಅಪಾಯಕಾರಿ ವಲಯ ಆಗಿ ಮಾರ್ಪಟ್ಟಿದೆ. ಇಲ್ಲಿ ನಿಲ್ಲಿಸುವ ಲಾರಿಗಳಿಗೆ ದಂಡ ವಿಧಿಸಬೇಕು, ಇಲ್ಲಿ ಗೂಡಂಗಡಿಗಳ ಹಾವಳಿ ಹೆಚ್ಚಾಗಿದ್ದು, ಈ ಅಂಗಡಿಗಳು ಇರುವ ಭೂಮಿ ಕೃಷಿಯೇತರಕ್ಕೆ ಪರಿವರ್ತನೆ ಆಗಿಲ್ಲ, ಇಲ್ಲಿನ ಎಲ್ಲ ಅಂಗಡಿಗಳು ಅನಧಿಕೃತವಾಗಿದ್ದು, ನೋಟಿಸ್ ನೀಡಿ ಕೂಡಲೆ ತೆರವುಗೊಳಿಸಬೇಕು, ಹಾಗೂ ಇಲ್ಲಿನ ಅಂಗಡಿಗಳಿಗೆ ವಿದ್ಯುತ್ ಸಂಪರ್ಕವನ್ನು ತ್ವರಿತವಾಗಿ ಕಡಿತಗೊಳಿಸಬೇಕು ಎಂದು ಹಿರಿಯೂರು ಪೌರಾಯುಕ್ತ ವಾಸೀಂ ಅವರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಟ್ರಕ್ ಟರ್ಮಿನಲ್ಗೆ ಈಗಾಗಲೇ ಎರಡು ಕಡೆಗಳಲ್ಲಿ ಜಾಗ ಗುರುತಿಸಲಾಗಿದೆ. 15 ದಿನಗಳೊಳಗಾಗಿ ಹಿರಿಯೂರು ನಗರ ವ್ಯಾಪ್ತಿಯಲ್ಲಿ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮವಹಿಸಲಾಗುವುದು ಎಂದು ಹಿರಿಯೂರು ನಗರಸಭೆ ಪೌರಾಯುಕ್ತ ವಾಸೀಂ ತಿಳಿಸಿದರು.
ಅಪಘಾತ ವಲಯ ಹಾಗೂ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ರಸ್ತೆಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಹಾಗೂ ಜಂಕ್ಷನ್ ರಸ್ತೆಗಳಲ್ಲಿ ಕ್ಯಾಟ್ಐಸ್ ಅಳವಡಿಕೆ, ಬ್ಲಿಂಕರ್ಸ್, ರಂಬಲ್ ಸ್ಟ್ರಿಪ್ಸ್, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೂಡಲೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.









