
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಎಡಗಾಲಿನ ಮಂಡಿನೋವು ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದೆರಡು ದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ, ವಿಶ್ರಾಂತಿಯನ್ನು ಪಡೆದುಕೊಂಡರು. ಬಜೆಟ್ ಇರುವ ಕಾರಣ, ಇಲಾಖಾ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸುತ್ತಿದ್ದಾರೆ. ಇದೀಗ ವೀಲ್ ಚೇರ್ ನಲ್ಲಿಯೇ ಇನ್ವೆಸ್ಟ್ ಕರ್ನಾಟಕ-2025ಕ್ಕೂ ಬಂದಿದ್ದಾರೆ.
ಕೊಂಚ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಡಾ.ಸತ್ಯನಾರಾಯಣ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ನೀ ಪ್ಯಾಡ್ ಹಾಕಿ, ಇನ್ನಷ್ಟು ವಿಶ್ರಾಂತಿಗೆ ಸೂಚಿಸಿದ್ದಾರೆ. ಆದರೂ ಹೂಡಿಕೆದಾರರ ಸಮಾವೇಶಕ್ಕೆ ಇಂದು ವೀಲ್ ಚೇರ್ ನಲ್ಲಿಯೇ ಬಂದಿದ್ದಾರೆ. ಅರಮನೆ ಮೈದಾನದಲ್ಲಿ ಬಹು ನಿರೀಕ್ಷಿತ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ.
ಸಹಾಯಕರ ನೆರವಿನೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ವೀಲ್ ಚೇರ್ ನಲ್ಲಿಯೇ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಹಿಂದೆ ಕೂಡ ಸಿಎಂ ಸಿದ್ದರಾಮಯ್ಯ ಅವರಿಗೆ ಲೆಗ್ಮೆಂಟ್ ಶಸ್ತ್ರ ಚಿಕಿತ್ಸೆ ನಡೆದಿತ್ತು. ಈಗ ಅದೇ ಜಾಗದ ಮೇಲೆ ಒತ್ತಡ ಬೀಳುತ್ತಿರುವ ಕಾರಣಕ್ಕೆ ನೋವು ಜಾಸ್ತಿಯಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇನ್ನು ಇನ್ವೆಸ್ಟ್ ಕರ್ನಾಟಕ ಬೃಹತ್ ಸಮಾವೇಶದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಡಿಸಿಎಂ ಡಿಕೆ ಶಿವಕುಮಾರ್, ಉದ್ಯಮಿ ಕಿರಣ್ ಮಜುಂದಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕರ್ನಾಟಕದಲ್ಲಿ ಎಷ್ಟು ಕೋಟಿ ಇನ್ವೆಸ್ಟ್ ಆಗಲಿದೆ ಎಂಬ ಕುತೂಹಲದ ಜೊತೆಗೆ ಉದ್ಯೋಗ ಸೃಷ್ಟಿಯ ಭರವಸೆಯೂ ಸಿಕ್ಕಂತಾಗುತ್ತದೆ. ಇಂದಿನಿಂದ ಸಮಾವೇಶ ಶುರುವಾಗುತ್ತಿದೆ.



















