ಬೆಳಗಾವಿ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ್ದಾರೆ. ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಯಾಗಿದ್ದರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲ ರಾಜಕೀಯದಲ್ಲಿದ್ದವರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಬಾಪೂಜಿ ವುದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದವರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಜವಳಿ ಕ್ಷೇತ್ರದಲ್ಲಿ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ತಂದುಕೊಟ್ಟವರು ಶಾಮನೂರು ಎಂದರು.
ಇನ್ನು ಶಾಮನೂರು ಶಿವಶಂಕರಪ್ಪ ಅವರ ಅಂತ್ಯ ಸಂಸ್ಕಾರ ಇಂದು ನಡೆಯಲಿದೆ. 4.30ರ ನಂತರ ಅಂತ್ಯಸಂಸ್ಕಾರ ನಡೆಯಲಿದ್ದು, ದಾವಣಗೆರೆಯ ಶಿವಶಂಕರಪ್ಪ ಅವರ ಒಡೆತನದ ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ಅಂತ್ಯಸಂಸ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸರ್ಕಾರ ಸೂಚನೆ ನೀಡಿದೆ. ಜೊತೆಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ – ಪುನಸ್ಕಾರಗಳು ನೆರವೇರಿದೆ.





