ಬೆಂಗಳೂರು : ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ರಾಜ್ಯದ ಜನತೆಗೆ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯ ತಲುಪಿಸಬೇಕು ಎನ್ನುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ನಿಯಮಾವಳಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ನಡೆಸಿದೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಗ್ಯಾರಂಟಿ ಯೋಜನೆಗಳು ವಿಶೇಷವಾಗಿ ‘ಗೃಹಲಕ್ಷ್ಮಿ’ ಯೋಜನೆ ವ್ಯಾಪಕವಾಗಿ ದುರುಪಯೋಗವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಕೆಲವೆಡೆ ಮರಣ ಹೊಂದಿದವರ ಹೆಸರಿನಲ್ಲಿ ಇನ್ನು ಕೆಲವರು ಹಣ ಪಡೆಯುತ್ತಿದ್ದರೆ, ಮತ್ತೆ ಕೆಲವೆಡೆ ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಿ, ಬೇರೆಯವರ ಖಾತೆಗಳಿಗೆ ಲಿಂಕ್ ಮಾಡಲಾಗಿರುವ ಗೊಂದಲಗಳು ಸೃಷ್ಟಿಯಾಗಿವೆ. ಅರ್ಹರ ಕೈಸೇರಬೇಕಾದ ಹಣ ಬೇರೆಯವರ ಪಾಲಾಗುತ್ತಿರುವುದಕ್ಕೆ ಶೀಘ್ರದಲ್ಲೇ ಬ್ರೇಕ್ ಹಾಕಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಹಣ ಯಾರಿಗೆ ತಲುಪಬೇಕೋ ಅವರಿಗೆ ಮಾತ್ರ ಸಿಗಬೇಕು. ಯೋಜನೆಗಳ ಪರಿಷ್ಕರಣೆ ಮಾಡುವುದರಿಂದ ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ನಿಜವಾದ ಬಡವರು ಮತ್ತು ಅರ್ಹರಿಗೆ ಯೋಜನೆ ತಲುಪಿಸುವುದೇ ನಮ್ಮ ಮೂಲ ಉದ್ದೇಶ” ಎಂದು ಸಿಎಂ ಡಿಕೆಶಿ ಭರವಸೆ ನೀಡಿದ್ದಾರೆ. ಎಲ್ಲಾ ಲೋಪದೋಷಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.






