ತುಮಕೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯಕ್ಕೆ ಯಾವುದೇ ರೀತಿಯ ರಾಜಕೀಯ ಕಂಟಕ ಎದುರಾಗುವುದಿಲ್ಲ ಎಂದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಶ್ರೀ ಕರವೃಷಭ ದೇಶಿ ಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಹಾಗೂ ರಾಜ್ಯದ ಆಡಳಿತದ ಕುರಿತು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗುರುವಿನ ಸಂಪೂರ್ಣ ಆಶೀರ್ವಾದವಿದೆ. ಹೀಗಾಗಿ ಅವರಿಗೆ ಯಾವುದೇ ರೀತಿಯ ತೊಂದರೆ ಅಥವಾ ರಾಜಕೀಯ ವಿಘ್ನಗಳು ಎದುರಾಗುವುದಿಲ್ಲ. ಒಂದು ವೇಳೆ ರಾಜಕೀಯವಾಗಿ ಸಣ್ಣಪುಟ್ಟ ಅಡೆತಡೆಗಳು ಎದುರಾದರೂ ಸಹ, ಗುರುಕೃಪೆಯ ಬಲದಿಂದ ಅವೆಲ್ಲವೂ ಅತ್ಯಂತ ಸುಲಭವಾಗಿ ನಿವಾರಣೆಯಾಗಲಿವೆ ಎಂದು ಸ್ವಾಮೀಜಿಗಳು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಡಿ.ಕೆ. ಶಿವಕುಮಾರ್ ಅವರ ಆಡಳಿತ ಯಶಸ್ವಿಯಾಗಲಿದೆ ಎಂದು ಆಶೀರ್ವದಿಸಿದ ಶ್ರೀಗಳು, ಮುಖ್ಯಮಂತ್ರಿಗಳು ರಾಜ್ಯದ ರೈತರು ಹಾಗೂ ಬಡ ಜನರ ಹಿತರಕ್ಷಣೆಗೆ ಸದಾ ಬದ್ಧರಾಗಿ ಕೆಲಸ ಮಾಡಲಿದ್ದಾರೆ. ಜನಸಾಮಾನ್ಯರಿಗೆ ಒಳಿತಾಗುವಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯವನ್ನು ಪ್ರಗತಿ ಪಥದಲ್ಲಿ ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.









