ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ಜೂನ್. 19 : ಆರ್ಸಿಬಿ ದುರಂತಕ್ಕೆ ಹನ್ನೊಂದು ಮಂದಿ ಬಲಿಯಾಗಿದ್ದಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ನೈತಿಕ ಹೊಣೆ ಹೊತ್ತು ಇಷ್ಟೊತ್ತಿಗಾಗಲೆ ರಾಜಿನಾಮೆ ನೀಡಬೇಕಿತ್ತು. ಭಂಡತನ ಪ್ರದರ್ಶಿಸುತ್ತಿರುವುದನ್ನು ಜನ ಒಪ್ಪಲ್ಲ ಎಂದು ಸಂಸದ ಗೋವಿಂದ ಕಾರಜೋಳ ಛೀಮಾರಿ ಹಾಕಿದರು.

ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಗುರುವಾರ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು ರಾಜ್ಯ ಸರ್ಕಾರ ಹಗರಣಗಳ ಮೇಲೆ ಹಗರಣಗಳನ್ನೆಸಗುತ್ತಿದೆ. ಲಂಚಕ್ಕೆ ಅಧಿಕಾರಿಗಳು, ನೌಕರರು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚೆತ್ತುಕೊಂಡು ಸಂಬಂಧಪಟ್ಟ ಮಂತ್ರಿಗಳನ್ನು ವಜಾಗೊಳಿಸಬೇಕಿತ್ತು. ವಾಲ್ಮೀಕಿ ಹಗರಣದಲ್ಲಿ 187 ಕೋಟಿ ರೂ.ಗಳನ್ನು ಲೂಟಿ ಹೊಡೆದಿರುವುದಕ್ಕೆ ಮುಖ್ಯಮಂತ್ರಿ ಜವಾಬ್ದಾರಿ ಹೊರಬೇಕು. ಮುಡಾ ಹಗರಣ ಹೀಗೆ ಒಂದರ ಮೇಲೊಂದು ಹಗರಣಗಳನ್ನು ಎಸಗುತ್ತಿರುವುದೇ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಎಂದು ವ್ಯಂಗ್ಯವಾಡಿದರು.
ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಬಲಿಯಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ವಿಧಾನಸೌಧದ ಮೆಟ್ಟಿಲ ಮೇಲಲ್ಲ ಎಂಬ ಅಹಂಕಾರದ ಮಾತುಗಳನ್ನಾಡುವುದು ಮುಖ್ಯಮಂತ್ರಿಗೆ ಶೋಭೆಯಲ್ಲ. ರಾಜ್ಯ ಸರ್ಕಾರ ಹಗರಣದಲ್ಲಿ ಮುಳುಗಿದೆ ಎಂದು ನಲವತ್ತು ಶಾಸಕರುಗಳೇ ಆಪಾದಿಸುತ್ತಿದ್ದಾರೆ. ಲೋಕಾಯುಕ್ತ ಹಗರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಬೇಕಿತ್ತು. ನಯಾಪೈಸೆಯ ಅಭಿವೃದ್ದಿಯೂ ಆಗಿಲ್ಲ. ದಲಿತರ ಹಣವನ್ನು ಕೊಳ್ಳೆ ಹೊಡೆಯಲಾಗಿದೆ. ಎಲ್ಲಾ ಹಗರಣಗಳಲ್ಲೂ ಸರ್ಕಾರದ ಮಂತ್ರಿಗಳೆ ಇದ್ದಾರೆ. ನದಿಗಳ ದಡದಲ್ಲಿನ ಮರಳನ್ನು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದರು.
ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಖಜಾಂಚಿ ಮಾಧುರಿ ಗಿರೀಶ್, ನಿಕಟಪೂರ್ವ ಅಧ್ಯಕ್ಷ ಎ.ಮುರಳಿ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್ ಈ ಸಂದರ್ಭದಲ್ಲಿದ್ದರು.



















