ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 13 : ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ಹಾಸ್ಯನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ (62) ಸೋಮವಾರ ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು ಎಂದು ಅವರ ಮಗ ಭರತ ತಾಳಿಕೋಟಿ ತಿಳಿಸಿದ್ದಾರೆ.
ಚಲನಚಿತ್ರೀಕರಣಕ್ಕಾಗಿ ಮಂಗಳೂರಿನಲ್ಲಿದ್ದ ರಾಜು ತಾಳಿಕೋಟೆ ಅವರಿಗೆ ನಿನ್ನೆ ರಾತ್ರಿ ತೀವ್ರ ಹೃದಯಾಘಾತ ಆಗಿತ್ತು. ತಕ್ಷಣ ಅವರನ್ನು ಮಂಗಳೂರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಂಜೆ ಆಸ್ತತ್ರೆಯಲ್ಲಿ ನಿಧನರಾದರು.
ನಾಳೆ ಅವರ ಊರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಅವರ ಪುತ್ರ ಭರತ ತಾಳಿಕೋಟಿ ಅವರು ತಿಳಿಸಿದ್ದಾರೆ.
ರಾಜು ತಾಳಿಕೋಟಿ ಅವರು ಮೂಲತಃ ವಿಜಯಪುರ ಜಿಲ್ಲೆಯ ತಾಳಿಕೋಟೆಯವರಾಗಿದ್ದರು. ಇತ್ತೀಚೆಗೆ ರಂಗಾಯಣ ಧಾರವಾಡದ ನಿರ್ದೇಶಕರಾಗಿದ್ದರು.
ಈಚೆಗೆ 8-10 ವರ್ಷಗಳ ಹಿಂದೆ ಚಿತ್ರದುರ್ಗದಲ್ಲಿ ನಾಟಕ ಪ್ರದರ್ಶನ ನಡೆಸಿದ್ದರು.
ಕಲಿಯುಗದ ಕುಡುಕ ಸೇರಿದಂತೆ ಅನೇಕ ಉತ್ತರ ಕರ್ನಾಟಕದ ಹಾಸ್ಯ ನಾಟಕಗಳಲ್ಲಿ ಅಭಿನಯಿಸಿ ಮನೆಮಾತಾಗಿದ್ದರು. ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ರಾಜು ತಾಳಿಕೋಟೆ ಪರಿಚಯ
ಜನ್ಮ ಸ್ಥಳ- : ತಾಳಿಕೋಟೆ, ಮುದ್ದೇಬಿಹಾಳ ತಾಲ್ಲೂಕು ವಿಜಯಪುರ ಜಿಲ್ಲೆ
ವಿದ್ಯಾರ್ಹತೆ- : 4ನೇ ತರಗತಿ, ಇಬ್ಬರು ಅಕ್ಕಂದಿರು, ಒಬ್ಬ ಅಣ್ಣ
ಪತ್ನಿ- ಪ್ರೇಮಾ ತಾಳಿಕೋಟೆ (ರಂಗ ಕಲಾವಿದೆ)
ಮಕ್ಕಳು– ಇಬ್ಬರು ಗಂಡು ಮಕ್ಕಳು. ಮೂವರು ಹೆಣ್ಣುಮಕ್ಕಳು
ನೂರಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.
ಏಳನೇ ವಯಸ್ಸಿನಲ್ಲಿಯೇ ಅವರ ತಂದೆಯವರ ಮಾಲೀಕತ್ವದ ಶ್ರೀ ಖಾಸ್ಗತೇಶ್ವರ ನಾಟ್ಯ ಸಂಘ ತಾಳಿಕೋಟಿಯಲ್ಲಿ ಸತ್ಯ ಹರೀಶ್ಚಂದ್ರ ನಾಟಕದಲ್ಲಿ ಲೋಹಿತಾಶ್ವ, ರೇಣುಕಾ ಎಲ್ಲಮ್ಮ ನಾಟಕದಲ್ಲಿ ಬಾಲ ಪರಶುರಾಮ, ಬಾಲಚಂದ್ರ ನಾಟಕದಲ್ಲಿ ಬಾಲಚಂದ್ರನ ಪಾತ್ರಗಳಲ್ಲಿ ನಟನೆ. ತಂದೆ ಪಾರ್ಶ್ವವಾಯು ಪೀಡಿತರಾದರೆ, ತಾಯಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದಾಗ ಬದುಕಿಗಾಗಿ ಹೊಟೇಲ್ ಮಾಣಿಯಾಗಿ, ಲಾರಿ ಕ್ಲೀನರಾಗಿ ಕೆಲಸ ಮಾಡಿದರು. 1977-78ರಲ್ಲಿ ಜೀವಿ ಕೃಷ್ಣರ ನಾಟಕ ಕಂಪನಿ, ಶ್ರೀ ಗುರುಪ್ರಸಾದ ನಾಟ್ಯ ಸಂಘ ಕಡಪಟ್ಟಿ, ಪಂಚಾಕ್ಷರಿ ವಿಜಯ ನಾಟ್ಯ ಸಂಘ, ಚಿತ್ತರಗಿಯಲ್ಲಿ ನೇಪಥ್ಯದ ಕಲಾವಿದನಾಗಿ (ಪ್ರಚಾರ, ಪ್ರಸಾಧನ, ಗೇಟ ಕೀಪರ್) ಸೇವೆ. ಈ ಮಧ್ಯೆ ಕಂಪನಿಯ ಹಿರಿಯ ನಟರೊಬ್ಬರು ಕೈ ಕೊಟ್ಟಾಗ ಅನಿರೀಕ್ಷಿತವಾಗಿ ತಾಳಿತಕರಾರು ನಾಟಕದಲ್ಲಿ ಸುಮಿತ್ರ (ಕಿವುಡ) ಪಾತ್ರದಲ್ಲಿ ಅಭಿನಯಿಸಿ ಜನಪ್ರೀತಿ ಗಳಿಸಿದೆ. ಅಂದಿನಿಂದ ಪಾತ್ರಗಳು ಯಶಸ್ಸು ತಂದು ಕೊಟ್ಟವು. ದಿ|ಸಾಳುಂಕಿಯವರ ಕಣ್ಣಿದ್ದರೂ ಬುದ್ದಿ ಬೇಕು, ಹೂವಿನ ಅಂಗಡಿ, ದೇವರಿಗೆ ನೆನಪಿಲ್ಲ, ಭಾಗ್ಯಬಂತು ಬುದ್ದಿಹೋಯಿತು. ಕಾಲುಕೆದರಿದ ಹೆಣ್ಣು ಸೇರಿದಂತೆ ಹಲವು ನಾಟಕಗಳಲ್ಲಿ ಅಭಿನಯ. 1984ರಲ್ಲಿ ಶ್ರೀ ಶರೀಫ ಶಿವಯೋಗಿ ವಿಜಯ ನಾಟ್ಯ ಸಂಘ, ಯಂಕಂಚಿಯನ್ನು 03 ವರ್ಷಗಳ ಕಾಲ ನಡೆಸಲಾಯಿತು. ನಂತರ ಶ್ರೀ ಹುಚ್ಚೆಶ್ವರ ನಾಟ್ಯ ಸಂಘ, ಕಮತಗಿಯಲ್ಲಿ ಪತ್ನಿ (ಪ್ರೇಮಾ ತಾಳಿಕೋಟೆ ಕಲಾವಿದೆ) ಜೊತೆಗೂಡಿ 1996ರವರೆಗೆ ರಂಗ ಸೇವೆ. ಈ ಕಂಪನಿಯಲ್ಲಿ ಹಸಿರು ಬಳೆ, ಸೈನಿಕ ಸಹೋದರಿ, ಶ್ರೀ ಗರಗದ ಮಡಿವಾಳೇಶ್ವರ ಮಹಾತ್ಮ, ಚಿತ್ರನಟ ದಿವಂಗತ ಸುಧೀರ್ ಜೊತೆ ಸಿಂಧೂರ ಲಕ್ಷಣ, ಹಿರಿಯ ಕಲಾವಿದೆ ಉಮಾಶ್ರೀಯವರ ಜೊತೆ ಬಸ್ ಕಂಡಕ್ಟರ್, ಸೊಸೆ ಹಾಕಿದ ಸವಾಲು ಸೇರಿದಂತೆ ಹಲವಾರು ನಾಟಕಗಳಲ್ಲಿ ಕಲಾಸೇವೆ ಸಲ್ಲಿಸಿದ್ದಾರೆ.
1998ರಲ್ಲಿ ಮತ್ತೆ ಶ್ರೀ ಖಾಸ್ಗತೇಶ್ವರ ನಾಟ್ಯ ಸಂಘ ಪುನರ್ಸ್ಥಾಪಿಸಿ ಶ್ರೀ ಗುರು ಖಾಸ್ಗತೇಶ್ವರ ಮಹಾತ್ಮೆ. ಮುತ್ತೈದೆ ನೀ ಮತ್ತೊಮ್ಮೆ ಬಾ, ವರಪುತ್ರ. ಮನೆಗೆ ಬಂದ ಮಹಾಲಕ್ಷ್ಮೀ, ಕುಡುಗೋಲು ನುಂಗಬ್ಯಾಡ್ರಿ, ಯಾರು ನಂಬುವದು ಯಾರ ಬಿಡೂವುದು. ಹ್ಯಾಂಗರ ಬರಿ ನಕ್ಕೋತ ಹೋಗ್ರಿ ಸೇರಿದಂತೆ ಹಲವಾರು ನಾಟಕಗಳು ಕರ್ನಾಟಕದಾದ್ಯಂತ ಸಾವಿರಾರು ಪ್ರದರ್ಶನ ಕಂಡಿವೆ.
ಧ್ವನಿಮುದ್ರಿಕೆಗಳು: ಕಲಿಯುಗದ ಕುಡುಕ (ಈ ನಾಟಕವು 40 ಸಾವಿರಕ್ಕೂ ಹೆಚ್ಚು ಪ್ರಯೋಗಗಳು ಕಂಡು ಅಪಾರ ಜನಮನ್ನಣೆ ಗಳಿಸಿದೆ). ಕುಡುಕರ ಸಾಮ್ರಾಜ್ಯ, ಲತ್ತುಗುಣಿ ಲಕ್ಕವ್ವ, ಅಸಲಿ ಕುಡುಕ ಮುಂತಾದವು.
ಕನ್ನಡ ಚಲನಚಿತ್ರರಂಗ: ಹೆಂಡ್ತಿ ಅಂದರೆ ಹೆಂಡತಿ, ಪಂಜಾಬಿ ಹೌಸ್, ಮನಸಾರೆ, ಪಂಚರಂಗಿ, ಪರಮಾತ್ಮ, ಲಿಫ್ಟ್ ಕೊಡ್ಲಾ, ಜಾಕಿ, ಸುಗ್ರೀವ, ಕಳ್ಳ ಮಳ್ಳ ಸುಳ್ಳ, ಭೀಮಾತೀರದಲ್ಲಿ ಸೇರಿದಂತೆ 35 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯ
ಬಿರುದುಗಳು: ಹಾಸ್ಯ ರತ್ನಾಕರ, ಹಾಸ್ಯ ಸಾಮ್ರಾಟ, ಕಾಮಿಡಿ ಕಿಂಗ್, ಕೆಸೇಟ್ ಕಿಂಗ್, ಕನ್ನಡದ ಸೆಂಧಿಲ್
ಪ್ರಶಸ್ತಿಗಳು: 2010ರಲ್ಲಿ ಸುವರ್ಣ ವಾಹಿನಿಯ ಬೆಸ್ಟ್ ಕಾಮಿಡಿ, 2011ರಲ್ಲಿ ಫೀಲ್ಮಫೇರ್ ಅವಾರ್ಡ್, 2013ರಲ್ಲಿ ಬೆಸ್ಟ್ ಕಾಮಿಡಿಯನ್, 2015ರಲ್ಲಿ ರಾಜ್ಯೋತ್ಸವ ಚಿತ್ರ ಸಂಸ್ಥೆಯಲ್ಲಿ ಪಾಪುಲರ್ ಅವಾರ್ಡ್‘ರಂಗಾಯಣ’ದ ರಂಗದಲ್ಲಿ ರಾಜು ತಾಳಿಕೋಟಿ.
ಮಾಹಿತಿ :
ಕೆ.ಪಿ.ಎಂ. ಗಣೇಶಯ್ಯ,
ರಂಗನಿರ್ದೇಶಕರು
ಚಿತ್ರದುರ್ಗ.
ಮೊ : +91 94486 64878






