ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಹೊಳಲ್ಕೆರೆ, ಮೇ. 03 : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರೂ ಅಭಿವೃದ್ದಿ ಕಾಣದೆ ಸಣ್ಣ ಹಳ್ಳಿಯಂತಿದ್ದ ಹೊಳಲ್ಕೆರೆಯನ್ನು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ದಿಪಡಿಸಿದ್ದೇನೆಂದರೆ ಅದಕ್ಕೆ ಬಿ.ಎಸ್.ಯಡಿಯೂರಪ್ಪನವರ ಕೊಡುಗೆ ಕಾರಣ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಸ್ಮರಿಸಿದರು.


ರೈತ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸುದೀರ್ಘ ಐವತ್ತು ವರ್ಷಗಳ ರಾಜಕೀಯ ಪಣಯಕ್ಕಾಗಿ ಮೆ.9 ರಂದು ಚಿತ್ರದುರ್ಗದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದ ಹತ್ತಿರ ವಿಶಾಲವಾದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಂವಿಧಾನಸೌಧದಲ್ಲಿ ಭಾರತೀಯ ಜನತಾಪಾರ್ಟಿ ಹಾಗೂ ಭರಮಸಾಗರ ಮಂಡಲದ ವತಿಯಿಂದ ಭಾನುವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.
ನಾನು ಬೂಟಾಟಿಕೆ ಮಾತುಗಳನ್ನಾಡುವ ರಾಜಕಾರಣಿಯಲ್ಲ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅತಿ ಹೆಚ್ಚು ಅನುದಾನ ನೀಡಿದ್ದಾರೆ. ಅದೇ ರೀತಿ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗಲು ಕೋಟ್ಯಾಂತರ ರೂ.ಗಳ ಅನುದಾನ ಮಂಜೂರು ಮಾಡಿಸಿಕೊಂಡು ಬಂದ ಪರಿಣಾಮ ಕ್ಷೇತ್ರದಲ್ಲಿ ಈಗಲೂ ದಿನನಿತ್ಯ ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿರುತ್ತವೆ. ಶಾಲಾ-ಕಾಲೇಜು. ಆಸ್ಪತ್ರೆ, ಕೆರೆ ಕಟ್ಟೆಗಳನ್ನು ನಿರ್ಮಿಸಲಾಗಿದೆ. ಕುಡಿಯುವ ನೀರು ವಿದ್ಯುತ್ಗೆ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಮೆ.9 ರಂದು ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಐವತ್ತು ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.
ಬಿಜೆಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ಸುದೀರ್ಘ ಐವತ್ತು ವರ್ಷಗಳ ರಾಜಕೀಯ ಪಯಣದಲ್ಲಿ ಬಿ.ಎಸ್.ಯಡಿಯೂರಪ್ಪನವರು 45 ವರ್ಷಗಳ ಕಾಲ ನಿರಂತರ ಹೋರಾಟ ನಡೆಸಿ ಐದು ವರ್ಷಗಳು ಮಾತ್ರ ಅಧಿಕಾರ ಅನುಭವಿಸಿದ್ದಾರೆ. ಅಧಿಕಾರ ಇರಲಿ, ಬಿಡಲಿ ರೈತರು, ಜನಸಾಮಾನ್ಯರು, ಬಡವರು, ಶೋಷಿತರ ಕಣ್ಣೀರೊರೆಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಎಲ್ಲಿ ಯಾರಿಗೆ ಅನ್ಯಾಯವಾಗುತ್ತದೋ ಅಲ್ಲಿ ಇರುತ್ತಿದ್ದರು. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮನೆಗಳನ್ನು ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ನೀಡಿದ ಒಂದು ಲಕ್ಷ ರೂ.ಗಳ ಜೊತೆಗೆ ರಾಜ್ಯದಿಂದ ನಾಲ್ಕು ಲಕ್ಷ ರೂ.ಗಳನ್ನು ಸೇರಿಸಿ ಮನೆ ಕಟ್ಟಿಸಿಕೊಳ್ಳಲು ನೆರವಾಗಿದ್ದನ್ನು ಜನ ಇನ್ನು ಮರೆತಿಲ್ಲ ಎಂದು ಹೇಳಿದರು.
ಕೋಟ್ಯಾಂತರ ಜನರ ಪ್ರೀತಿ ವಿಶ್ವಾಸ ಗಳಿಸಿರುವ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ಜಿಲ್ಲೆಯಿಂದ ಹತ್ತುಸಾವಿರ ಭಾಗ್ಯಲಕ್ಷ್ಮಿ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಎಂಟನೆ ತಾರೀಖು ಸಂಜೆ ಯಡಿಯೂರಪ್ಪನವರನ್ನು ಭವ್ಯವಾಗಿ ಸ್ವಾಗತಿಸಲಾಗುವುದು. 9 ರಂದು ನಡೆಯುವ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ಶಾ ಸೇರಿದಂತೆ ನಾಡಿನ ಮೂಲೆ ಮೂಲೆಗಳಿಂದ ವಿವಿಧ ಮಠಾಧೀಶರು, ರಾಜಕಾರಣಿಗಳು ಆಗಮಿಸಲಿದ್ದಾರೆಂದು ತಿಳಿಸಿದರು.
ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಸಚಿವ ಹರತಾಳ ಹಾಲಪ್ಪ, ಮಾಜಿ ಶಾಸಕ ಪ್ರೀತಮ್ಗೌಡ, ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಯುವ ಮುಖಂಡ ಎಂ.ಸಿ.ರಘುಚಂದನ್, ಹನುಮಂತೆಗೌಡ, ಹೊಳಲ್ಕೆರೆ ಬಿಜೆಪಿ.ಮಂಡಲ ಅಧ್ಯಕ್ಷ ಕುಮಾರಣ್ಣ, ಭರಮಸಾಗರ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಸಿದ್ದೇಶ್, ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಶೈಲೇಶ್ಕುಮಾರ್, ಮಾಧುಸ್ವಾಮಿ, ಪ್ರಧಾನ ಕಾರ್ಯದರ್ಶಿ ಗಿರೀಶ್, ಮಂಜುನಾಥ್, ಪ್ರವೀಣ್ಕುಮಾರ್ ಇನ್ನು ಅನೇಕರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.



















