ಬೆಂಗಳೂರು.ಆಗಸ್ಟ್.6: ಮುಂಬರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ, ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ರಾಜ್ಯಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಹಾಗೂ ರಾಸಾಯನಿಕ ಬಣ್ಣಗಳನ್ನು ಬಳಸಿ ತಯಾರಿಸುವ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕೃತ ಸುತ್ತೋಲೆ ಹೊರಡಿಸಿದೆ.
ಪರಿಸರ ಸಂರಕ್ಷಣೆ, ಸಾರ್ವಜನಿಕ ಆರೋಗ್ಯ ಹಾಗೂ ಕೆರೆ, ನದಿ ಮುಂತಾದ ಜಲಮೂಲಗಳ ರಕ್ಷಣೆಯ ಹಿತದೃಷ್ಟಿಯಿಂದ ಮಂಡಳಿಯು ಈ ಕೆಳಗಿನ ಪ್ರಮುಖ ಮಾರ್ಗದರ್ಶನಗಳನ್ನು ನೀಡಿದೆ.

POP ಹಾಗೂ ರಾಸಾಯನಿಕ ಮೂರ್ತಿಗಳ ನಿಷೇಧ: ಪಿಒಪಿ ಅಥವಾ ವಿಷಕಾರಿ ರಾಸಾಯನಿಕ/ಭಾರ ಲೋಹಗಳ ಬಣ್ಣಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಸುವುದು, ಸಂಗ್ರಹಿಸುವುದು, ವಿತರಿಸುವುದು ಮತ್ತು ಮಾರಾಟ ಮಾಡುವುದನ್ನು ರಾಜ್ಯಾದ್ಯಂತ ನಿಷೇಧಿಸಲಾಗಿದೆ.

ಮಣ್ಣಿನ ಮೂರ್ತಿಗಳಿಗೆ ಆದ್ಯತೆ: ಸಾರ್ವಜನಿಕರು ಹಾಗೂ ಗಣೇಶೋತ್ಸವ ಸಮಿತಿಗಳು ಕೇವಲ ನೈಸರ್ಗಿಕ ಮಣ್ಣು (Clay) ಹಾಗೂ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ, ನೈಸರ್ಗಿಕ/ವಿಷರಹಿತ ಬಣ್ಣಗಳಿಂದ ಅಲಂಕರಿಸಿದ ಮೂರ್ತಿಗಳನ್ನು ಮಾತ್ರ ಬಳಸಬೇಕು.
ಜಲಮೂಲಗಳಲ್ಲಿ ವಿಸರ್ಜನೆಗೆ ತಡೆ: ಯಾವುದೇ ಕಾರಣಕ್ಕೂ POP ಮೂರ್ತಿಗಳನ್ನು ಕೆರೆ, ನದಿ, ಕಾಲುವೆ, ಬಾವಿ ಅಥವಾ ಯಾವುದೇ ಜಲಮೂಲಗಳಲ್ಲಿ ವಿಸರ್ಜಿಸುವಂತಿಲ್ಲ.
ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ನಿಷೇಧಿತ ಮೂರ್ತಿಗಳನ್ನು ಜಪ್ತಿ ಮಾಡಲಾಗುವುದು.

ಸಾರ್ವಜನಿಕರು ಹಾಗೂ ಗಣೇಶೋತ್ಸವ ಮಂಡಳಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ಮಂಡಳಿ ಮನವಿ ಮಾಡಿದೆ.











