ಸುದ್ದಿಒನ್, ಚಿತ್ರದುರ್ಗ, ಮೇ. 26 : ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ 125 ಕ್ಕೆ 125 ಅಂಕ ಪಡೆದವರಿಗೆ ಕನ್ನಡ ಕುವರ/ಕನ್ನಡ ಕುವರಿ ಅಭಿನಂದನಾ ಕಾರ್ಯಕ್ರಮವನ್ನು ನಾಳೆ ( ದಿನಾಂಕ 27.05.2026 ರ ಬುಧವಾರ) ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳ ಕನ್ನಡ ನುಡಿ ಮತ್ತು ಭಾಷೆಯನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಇದಾಗಿದೆ. ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಮದಕರಿಪುರ ಬಡಾವಣೆಯ ಎಸ್ಎಂಎಸ್ ಶಾಲೆಯಲ್ಲಿ ಬೆಳಗ್ಗೆ 10.30 ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಡಿಡಿಪಿಐ ಎಂ.ಆರ್.ಮಂಜುನಾಥ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಷಯ ಪರಿವೀಕ್ಷಕ ಸಿ.ರಂಗನಾಯಕ, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ತಾಲ್ಲೂಕು ಅಧ್ಯಕ್ಷ ವಿ.ಎಲ್.ಪ್ರಶಾಂತ್ ಭಾಗವಹಿಸಲಿದ್ದಾರೆ. ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










