ಸುದ್ದಿಒನ್,ಬೆಂಗಳೂರು,ಮೇ.18 : ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಮೇ 19ರಂದು (ನಾಳೆ) ತುಮಕೂರಿನಲ್ಲಿ ಬೃಹತ್ ‘ಸಾಧನಾ ಸಮಾವೇಶ’ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಒಟ್ಟು 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ ಭರವಸೆಗಳನ್ನು ಹೇಗೆ ಈಡೇರಿಸಿದೆ ಎಂಬುದನ್ನು ಈ ಸಮಾವೇಶದ ಮೂಲಕ ಜನರಿಗೆ ತಿಳಿಸಲಾಗುವುದು” ಎಂದರು.

ಇದು ಕೇವಲ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವಾಗಿದ್ದು, ಇದರಲ್ಲಿ ಯಾರ ವೈಯಕ್ತಿಕ ಶಕ್ತಿ ಪ್ರದರ್ಶನವೂ ಇಲ್ಲ. ಇದು ಪಕ್ಷದ ಕಾರ್ಯಕ್ರಮ ಅಲ್ಲದ ಕಾರಣ ಹೈಕಮಾಂಡ್ ನಾಯಕರನ್ನು ಆಹ್ವಾನಿಸಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ಸಮಾವೇಶದ ಬಳಿಕ ಸರ್ಕಾರದಲ್ಲಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ, ಅದು ಪಕ್ಷದ ಆಂತರಿಕ ವಿಚಾರವಾಗಿದ್ದು, ಸದ್ಯಕ್ಕೆ ಅಭಿವೃದ್ಧಿಯ ದೃಷ್ಟಿಯಿಂದ ಮಾತ್ರ ಈ ಸಮಾವೇಶ ಮಾಡಲಾಗುತ್ತಿದೆ ಎಂದು ಅವರು ಉತ್ತರಿಸಿದರು.















