Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ, ಸರ್ಕಾರ ಸುಭದ್ರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಹಿರಿಯೂರು, ಜ 23: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಿರಿಯೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ. ಸರ್ಕಾರ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡಿದ್ದು , ಪ್ರಧಾನಿಗಳು, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ ಎಂದರು.

ನನ್ನನ್ನೂ ಒಳಗೊಂಡಂತೆ ಉಪಮುಖ್ಯಮಂತ್ರಿಗಳು ಭೇಟಿಯಾಗಿ ಬಂದಿದ್ದೇವೆ. ನಬಾರ್ಡ್ ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು . ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಜೆಟ್ ನಲ್ಲಿಯಾದರೂ ಹಣ ಮೀಸಲಿಟ್ಟು ಬಿಡುಗಡೆ ಮಾಡಲಿ ಎಂದು ಪತ್ರವನ್ನು ಕೇಂದ್ರಕ್ಕೆ ಬರೆದು ಒತ್ತಡ ಹಾಕಲಾಗುತ್ತಿದೆ.

ರೈತರ ಜಮೀನು ಮುಳುಗಡೆಯಾಗದಂತೆ ತಡೆಯಲು ಪ್ರಯತ್ನ :

ಹೊಸದುರ್ಗ ತಾಲ್ಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಾಣಿ ವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ ಜನವರಿ 14, 2025 ರಲ್ಲಿ ಕೋಡಿ ಬಿದ್ದಿದೆ. ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿ ವಿಲಾಸ ಸಾಗರ ಎಂದು ಕರೆಯಲಾಗಿದೆ. 1898 ನೇ ಇಸವಿಯಲ್ಲಿ ಪ್ರಾರಂಭವಾಗಿ 1907 ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30.ಟಿ.ಎಂ.ಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ ಎಂದು ಸಿಎಂ ವಿವರಿಸಿದರು.

ಈ ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು .ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45 ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು ಎಂದು ತಿಳಿಸಿದರು.

ಸಮೃದ್ಧ ಮಳೆಗಾಗಿ ಪ್ರಾರ್ಥನೆ : ಇಂದು ಗಂಗಾಪೂಜೆಯನ್ನು ಮಾಡಿ ಬಾಗಿನ ಅರ್ಪಿಸಿದ್ದೇವೆ. ಪ್ರತಿ ವರ್ಷವೂ ರೈತರ ಜಮೀನುಗಳಿಗೆ ನೀರು ಸಿಗುವಂತಾಗಲಿ ಒಳ್ಳೆ ಮಳೆ, ಬೆಳೆಯಾಗಿ ಪ್ರತಿ ವರ್ಷವೂ ಕೋಡಿ ಬೀಳುವಂತೆ ಕೆರೆಗೆ ನೀರು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವಾದರೆ ಪ್ರತಿ ವರ್ಷವೂ ಅಣೆಕಟ್ಟಿಗೆ ನೀರು ಹರಿಯಲಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದೆ :

ಬಿಜೆಪಿಯಲ್ಲಿ ಎರಡು ಮೂರು, ನಾಲ್ಕು ಗುಂಪುಗಳಿವೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ. ಬಿಜೆಪಿಯಲ್ಲಿ ಕಚ್ಚಾಟ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದ್ದು, ನಾವು ಐದು ವರ್ಷ ಅಧಿಕಾರ ನಡೆಸಿ 2028 ನಡೆವ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment