ದಾವಣಗೆರೆ, ಮಾ. 28 : ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಹಿನ್ನಲೆಯಲ್ಲಿ ಉಂಟಾಗಿದ್ದ ಕಾಂಗ್ರೆಸ್ ಒಳಬಂಡಾಯವನ್ನು ಶಮನಗೊಳಿಸುವಲ್ಲಿ ಪಕ್ಷದ ನಾಯಕರು ಯಶಸ್ವಿಯಾಗಿದ್ದಾರೆ. ವಿಧಾನಪರಿಷತ್ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ನಡೆಸಿದ ತೀವ್ರ ಕಸರತ್ತಿನ ಫಲವಾಗಿ ‘ಆಪರೇಷನ್ ಬಂಡಾಯ ಶಮನ’ ಯಶಸ್ವಿಯಾಗಿ ಪೂರ್ಣಗೊಂಡಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯವಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ತಮ್ಮ ನಾಮಪತ್ರ ಸಲ್ಲಿಸಿ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹಠ ಹಿಡಿದಿದ್ದರು. ಕ್ಷೇತ್ರದಲ್ಲಿ 70 ಸಾವಿರಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರು ಇರುವ ಹಿನ್ನೆಲೆ, ಅವರ ಸ್ಪರ್ಧೆಯಿಂದ ಮತ ವಿಭಜನೆ ಉಂಟಾಗುವ ಭೀತಿ ಕಾಂಗ್ರೆಸ್ ನಾಯಕರನ್ನು ಕಾಡುತ್ತಿತ್ತು.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ನ ಸೂಚನೆಯಂತೆ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಲ್ಪಸಂಖ್ಯಾತ ನಾಯಕರಿಗೆ ಬಂಡಾಯ ಶಮನದ ಜವಾಬ್ದಾರಿ ನೀಡಿದ್ದರು.
ಕೆಲವು ನಾಯಕರು ವಿವಿಧ ಕಾರಣಗಳಿಂದ ಈ ಪ್ರಕ್ರಿಯೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ, ಸಲೀಂ ಅಹಮದ್ ಹಾಗೂ ರಿಜ್ವಾನ್ ಅರ್ಷದ್ ಕಾರ್ಯಚಟುವಟಿಕೆಯನ್ನು ಮುಂದುವರೆಸಿದರು. ಅವರು ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ತಲುಪಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಸಾದಿಕ್ ಪೈಲ್ವಾನ್ ನಿವಾಸಕ್ಕೆ ತೆರಳಿ ರಾತ್ರಿಯಿಡೀ ಮನವೊಲಿಕೆ ನಡೆಸಿದರು.ಇದರ ಫಲವಾಗಿ ಸಾದಿಕ್ ಪೈಲ್ವಾನ್ ಅವರನ್ನು ಬೆಂಗಳೂರಿಗೆ ಕರೆತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಸಲಾಯಿತು.
ಈ ವೇಳೆ ಮುಖ್ಯಮಂತ್ರಿ ಅವರು ತಟಸ್ಥರಾಗಿರಲು ಸಲಹೆ ನೀಡಿದ್ದು, ಅದಕ್ಕೆ ಸಾದಿಕ್ ಒಪ್ಪಿಗೆ ಸೂಚಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದರು.ಇದೀಗ ಬಂಡಾಯ ಶಮನ ಕಾರ್ಯ ಯಶಸ್ವಿಯಾದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಸಮಾಧಾನ ವಾತಾವರಣ ನಿರ್ಮಾಣವಾಗಿದೆ. ಈ ಕಾರ್ಯದಲ್ಲಿ ಸಲೀಂ ಅಹಮದ್ ಹಾಗೂ ರಿಜ್ವಾನ್ ಅರ್ಷದ್ ಅವರ ಪಾತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












