Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಹಕರ ರಕ್ಷಣಾ ಕಾಯಿದೆ: ಸಾರ್ವಜನಿಕರಿಗೆ ಅರಿವು ಅಗತ್ಯ : ನ್ಯಾ. ವಿ. ಸೋಮಶೇಖರ

---Advertisement---

 

 

ಚಿತ್ರದುರ್ಗ. ಡಿ.24 : ಗ್ರಾಹಕರ ರಕ್ಷಣಾ ಕಾಯಿದೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿ. ಸೋಮಶೇಖರ ಹೇಳಿದರು.

ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನಶಾಸ್ತ್ರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಮತ್ತು ಚಿತ್ರದುರ್ಗ ಜಿಲ್ಲಾ ಅಡುಗೆ ಅನಿಲ ವಿತರಕರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 

ಗ್ರಾಹಕರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ 1986ರ ಡಿಸೆಂಬರ್ 24 ರಂದು ಗ್ರಾಹಕರ ರಕ್ಷಣಾ ಕಾಯ್ದೆ ಜಾರಿಗೆ ಬಂತು. ಈ ಕಾಯ್ದೆ ಜಾರಿಗೆ ಬಂದ ದಿನವನ್ನು ಅವಿಸ್ಮರಣೀಯ ದಿನ ಮಾಡುವ ಉದ್ದೇಶದಿಂದ ಪ್ರತಿ ವರ್ಷವೂ ರಾಷ್ಟ್ರೀಯ ಗ್ರಾಹಕರ ದಿನ ಆಚರಿಸಲಾಗುತ್ತಿದೆ. ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಪ್ರತಿ ವರ್ಷವೂ ಒಂದು ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಮಾಡುವ ಪದ್ಧತಿ ಇದೆ. “ಡಿಜಿಟಲ್ ನ್ಯಾಯದ ಮುಖಾಂತರ ಪರಿಣಾಮಕಾರಿ ಮತ್ತು ತ್ವರಿತ ವಿಲೇವಾರಿ” ಎಂಬುದು ಈ ಬಾರಿಯ ಘೋಷವಾಕ್ಯವಾಗಿದೆ. ಗ್ರಾಹಕರ ರಕ್ಷಣಾ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಹೇಳಿದರು.

 

ನಾವು ಯಾವುದಾದರೂ ಒಂದು ವಸ್ತುವನ್ನು ಕೊಂಡಾಗ ಅದಕ್ಕೆ ಸಂಬಂಧಿಸಿದಂತೆ ರಸೀದಿಯನ್ನು ಪಡೆಯುತ್ತೇವೆ. ರಸೀದಿ ಪಡೆದುಕೊಳ್ಳುವುದರಿಂದ ಇಂತಿಷ್ಟು ಹಣ ಸರ್ಕಾರಕ್ಕೆ ತೆರಿಗೆ ಪಾವತಿಯಾಗುತ್ತದೆ ಎಂದು ತಿಳಿಸಿದ ಅವರು, ರಸೀದಿ ಪಡೆಯುವುದು ನಮ್ಮ ಹಕ್ಕು. ಅದರಿಂದ ದೇಶಕ್ಕೆ ತೆರಿಗೆಯೂ ಪಾವತಿಯಾಗಲಿದ್ದು, ಅದು ನಾವುಗಳು ದೇಶಕ್ಕೆ ಮಾಡುವ ಕರ್ತವ್ಯ ಹಾಗೂ ಅಳಿಲು ಸೇವೆ ಎಂದು ಅಭಿಪ್ರಾಯಪಟ್ಟರು.
ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗವು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಅವರ ದೂರುಗಳನ್ನು ತ್ವರಿತವಾಗಿ ಪರಿಹರಿಸಲಿದೆ. ಯಾವುದಾದರೂ ಒಂದು ವಸ್ತುವನ್ನು ಖರೀದಿ ಮಾಡಿದಾಗ ಕಡ್ಡಾಯವಾಗಿ ರಸೀದಿ ಪಡೆಯಬೇಕು. ಗ್ರಾಹಕ ಮತ್ತು ಮಾಲೀಕರ ಮಧ್ಯೆ ಆಗುವ ಸೇವೆಯು ವಿಫಲವಾದಲ್ಲಿ ಮಾತ್ರ ಗ್ರಾಹಕರ ವ್ಯಾಜ್ಯ ಪರಿಹಾರಕ್ಕೆ ದೂರು ಸಲ್ಲಿಸಿ ಪರಿಹಾರ ಪಡೆಯಲು ಅವಕಾಶ ಇದೆ. ಈ ಕಾಯ್ದೆಯ ಪ್ರಕಾರ ಗ್ರಾಹಕರಿಗೆ ಆರು ಹಕ್ಕುಗಳನ್ನು ಕೊಡಲಾಗಿದೆ. ಸುರಕ್ಷತೆಯ ಹಕ್ಕು, ಮಾಹಿತಿಯ ಹಕ್ಕು, ಆಯ್ಕೆ ಮಾಡುವ ಹಕ್ಕು, ಕೇಳಿಸಿಕೊಳ್ಳುವ ಹಕ್ಕು ಮತ್ತು ಪರಿಹಾರ ಪಡೆಯುವ ಹಕ್ಕು, ಗ್ರಾಹಕರ ಶಿಕ್ಷಣದ ಹಕ್ಕು ಈ ಎಲ್ಲ ಹಕ್ಕುಗಳನ್ನು ಪಡೆಯಬೇಕಾದರೆ ನಾವು ಯಾವುದೇ ವಸ್ತು ಖರೀದಿಸಿದಾಗ, ಖರೀದಿಗೆ ಸಂಬಂಧಿಸಿದಂತೆ ಮಾರಾಟಗಾರರಿಂದ ಸೂಕ್ತ ದಾಖಲೆ ಪಡೆಯಬೇಕು ಎಂದು ಹೇಳಿದರು.

 

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಹೆಚ್.ಎನ್. ಮೀನಾ ಅವರು ಮಾತನಾಡಿ, ಯಾವುದೇ ವಸ್ತುವನ್ನು ನಾವು ಖರೀದಿಸಿದರೆ ನಾವು ಗ್ರಾಹಕರಾಗುತ್ತೇವೆ. ಆದರೆ ಕಾನೂನಿನ ದೃಷ್ಠಿಯಿಂದ ಗ್ರಾಹಕರಾಗಬೇಕಾದರೆ ಗ್ರಾಹಕರು ತೆಗೆದುಕೊಳ್ಳುವ ಸರಕು ಮತ್ತು ಸೇವೆಗೆ ರಸೀದಿ ತೆಗೆದುಕೊಂಡಾಗ ಮಾತ್ರ ನಾವು ಕಾನೂನು ಬದ್ಧ ಗ್ರಾಹಕರಾಗುತ್ತೇವೆ. ಅಂತಹವರಿಗೆ ಕಾನೂನಿನ ರಕ್ಷಣೆ ಸಿಗಲಿದೆ ಎಂದರು.

 

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ನೊಂದ ಗ್ರಾಹಕರು ರೂ. 1 ಲಕ್ಷದಿಂದ ರೂ. 50 ಲಕ್ಷದವರೆಗೂ ಪರಿಹಾರ ಪಡೆದುಕೊಳ್ಳಬಹುದಾಗಿದೆ. ರಾಜ್ಯ ಗ್ರಾಹಕರ ಆಯೋಗದಲ್ಲಿ 50 ಲಕ್ಷದಿಂದ 2 ಕೋಟಿಯವರಗೆ ಪರಿಹಾರ ಪಡೆದುಕೊಳ್ಳಬಹುದು. ರಾಷ್ಟ್ರೀಯ ಗ್ರಾಹಕರ ಆಯೋಗದಲ್ಲಿ ರೂ. 2 ಕೋಟಿಯಿಂದ 10 ಕೋಟಿವರಗೆ ಪರಿಹಾರ ಪಡೆದುಕೊಳ್ಳಬಹುದು. ನೊಂದ ಗ್ರಾಹಕರು ತಾವು ಇರುವ ಸ್ಥಳದಿಂದ ದೂರು ಸಲ್ಲಿಸಬಹುದು ಅಥವಾ ಪ್ರತಿವಾದಿ ಇರುವ ಸ್ಥಳದಲ್ಲಿಯೂ ದೂರು ಸಲ್ಲಿಸಬಹುದು ಎಂದರು.

 

ಗ್ರಾಹಕರ ರಕ್ಷಣಾ ಕಾಯ್ದೆ ಮೊಟ್ಟ ಮೊದಲ ಬಾರಿಗೆ ಅಮೇರಿಕಾದಲ್ಲಿ ಜಾರಿಗೆ ಬಂತು. ಅಮೇರಿಕಾದಲ್ಲಿ ಗ್ರಾಹಕರಿಗೆ ಆಗುತ್ತಿರುವ ಮೋಸ, ವಂಚನೆ, ಅನ್ಯಾಯದ ವ್ಯಾಪಾರ, ಸೇವಾ ನ್ಯೂನತೆ ಅರಿತು ಗ್ರಾಹಕ ಹಿತ ರಕ್ಷಣಾ ಕಾಯ್ದೆಯನ್ನು 1962ರಲ್ಲಿ ಜಾರಿಗೆ ತಂದರು. ನಮ್ಮ ದೇಶದಲ್ಲಿ ಪ್ರತ್ಯೇಕವಾಗಿ ಕಾಯ್ದೆ ಇರಲಿಲ್ಲ. ಗ್ರಾಹಕರಿಗೆ ಆದ ಮೋಸ, ವಂಚನೆ, ಅನ್ಯಾಯ, ಅಪಘಾತಗಳ ಪರಿಹಾರಕ್ಕಾಗಿ ಕಂಪನಿ ಆ್ಯಕ್ಟ್ 1956 ರ ಅಡಿಯಲ್ಲಿ ದೂರು ದಾಖಲಿಸಿ, ಪರಿಹಾರ ಪಡೆಯಬೇಕಿತ್ತು. ಗ್ರಾಹಕರಿಗೆ ಈ ರೀತಿ ಪರಿಹಾರ ಪಡೆಯುವುದು ತುಂಬಾ ಕಷ್ಟವಾಗುತ್ತಿತ್ತು ಮತ್ತು ಕೆಲವೊಮ್ಮೆ ಈ ರೀತಿಯಿಂದ ಪರಿಹಾರ ಪಡೆದುಕೊಳ್ಳವಲ್ಲಿ ವಂಚಿತರಾಗುತ್ತಿದ್ದರು. ಇದನ್ನು ಮನಗಂಡು ನಮ್ಮ ದೇಶದಲ್ಲಿ 1986 ರ ಡಿಸೆಂಬರ್ 24ರಂದು ರಾಷ್ಟ್ರಪತಿಗಳಿಂದ ಅನುಮೋದನೆಗೊಂಡು ಗ್ರಾಹಕರ ಕಾಯ್ದೆ ಜಾರಿಗೆ ಬಂದಿದೆ ಎಂದರು.

ಉಪ ಪ್ರಧಾನ ಕಾನೂನು ಅಭಿರಕ್ಷಕ ಎಂ.ಮೂರ್ತಿ ಅವರು ಗ್ರಾಹಕರ ರಕ್ಷಣಾ ಕಾಯಿದೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಕಾನೂನು ಮಾಪನಾಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಚನ್ನಬಸಪ್ಪ, ಕೆಎಸ್‍ಸಿಎಸ್‍ಇ ಜಿಲ್ಲಾ ವ್ಯವಸ್ಥಾಪಕ ಎಸ್.ಕೆ.ಮಲ್ಲಿಕಾರ್ಜುನ್, ರಂಗಕರ್ಮಿ ಕೆ.ಪಿ.ಎಂ. ಗಣೇಶಯ್ಯ ಸೇರಿದಂತೆ ಮತ್ತಿತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now