ದಾವಣಗೆರೆ.ಜುಲೈ.07: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಶಿವಪ್ಪ (51) ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾವಿಗೂ ಮುನ್ನ ಶಿವಪ್ಪ ಅವರು ಡೆತ್ ನೋಟ್ ಬರೆದಿಟ್ಟಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಂದಲಿಂಗೇಶ್ ಅವರೇ ತಮ್ಮ ಆತ್ಮಹತ್ಯೆಗೆ ನೇರ ಕಾರಣ ಎಂದು ಶಿವಪ್ಪ ಗಂಭೀರವಾಗಿ ಆರೋಪಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಪಿಡಿಒ ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಅತಿಯಾದ ಕಂದಾಯ ವಸೂಲಿ ಮಾಡುವಂತೆ ಕಟ್ಟುನಿಟ್ಟಿನ ಗುರಿ ನೀಡಿ, ತಡೆಯಲಾಗದಷ್ಟು ಒತ್ತಡ ಹೇರುತ್ತಿದ್ದರು ಎಂದು ಅವರು ಪತ್ರದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಸುಮಾರು 23 ವರ್ಷಗಳ ಕಾಲ ನೀರಗಂಟಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದ ಶಿವಪ್ಪ, ಕಳೆದ ಮೂರು ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಬಡ್ತಿ ಪಡೆದು ಕಾರ್ಯನಿರ್ವಹಿಸುತ್ತಿದ್ದರು. ಈ ದುರಂತದಿಂದ ಕಂಗಾಲಾಗಿರುವ ಮೃತರ ಪುತ್ರ ಅಶೋಕ್, ತಂದೆಯ ಸಾವಿಗೆ ನ್ಯಾಯ ಕೋರಿ ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪಿಡಿಒ ನಂದಲಿಂಗೇಶ್ ವಿರುದ್ಧ ಅಧಿಕೃತ ದೂರು ದಾಖಲಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಳಚೋಡು ಪೊಲೀಸರು, ಸ್ಥಳದಲ್ಲಿದ್ದ ಡೆತ್ ನೋಟನ್ನು ವಶಪಡಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

















