ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ,ಜುಲೈ. 09. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಕೆ.ವೇಲಾ ತಿಳಿಸಿದರು.
ಅವರು ಬುಧವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜಿ, ಸಂಧಾನ ನಡೆಸಲು ನ್ಯಾಯಾಂಗ ಇಲಾಖೆ ಮತ್ತು ವಕೀಲರ ಕಡೆಯಿಂದಲೂ ಪ್ರತ್ಯೇಕವಾಗಿ ಮಧ್ಯಸ್ಥಗಾರರು ಇರುವರು. ರಾಜಿ, ಸಂಧಾನ ನಡೆಸುವ ಅಧಿಕಾರವನ್ನು ಕಾನ್ಸಿಲೇಟರ್ಗಳಿಗೆ ನೀಡಲಾಗಿರುತ್ತದೆ. ಅದಾಲತ್ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದಾಲತ್ನಲ್ಲಿ ಇತ್ಯರ್ಥವಾಗುವ ಪ್ರಕರಣಗಳು ನ್ಯಾಯಾಲಯದಲ್ಲಿನ ತೀರ್ಪುಗಳಂತೆ ಇರುತ್ತದೆ. ಅದಾಲತ್ನಲ್ಲಿ ಇತ್ಯರ್ಥ ಮಾಡಿಕೊಂಡಲ್ಲಿ ಮತ್ತೆ ಅಪೀಲು ಹೋಗಲು ಅವಕಾಶ ಇರುವುದಿಲ್ಲ ಎಂದರು.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ, ಕೌಟುಂಬಿಕ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಲೋಕ ಅದಾಲತ್ನಲ್ಲಿ ಬಗೆಹರಿಸಲಾಗುವುದು. ಈ ದಿನಾಂಕಗಳ ಹೊರತಾಗಿಯೂ ಸತತವಾಗಿ ನಡೆಯುವ ಲೋಕ ಅದಾಲತ್ ಮುಖಾಂತರ ಕೂಡ ಕಕ್ಷಿದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಜುಲೈ 12 ರ ಎರಡನೇ ಶನಿವಾರವಾರ ಬೇರೆ ಯಾವುದೇ ಕಲಾಪಗಳು ನಡೆಯದೇ ಸಂಪೂರ್ಣವಾಗಿ ಲೋಕ ಅದಾಲತ್ ಪ್ರಕರಣಗಳ ರಾಜೀ ಸಂಧಾನ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ವಕೀಲರ ಸಹಕಾರದೊಂದಿಗೆ ಕಲಾಪ ನಡೆಸುವರು. ಇದೇ ರೀತಿ ತಾಲ್ಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದ್ದು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಳ್ಳಲು ಈ ಲೋಕ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಹತ್ತು ಸಾವಿರ ಪ್ರಕರಣ ಇತ್ಯರ್ಥದ ಗುರಿ : ಜುಲೈ 12ರಂದು ನಡೆಯುವ ಲೋಕ ಅದಾಲತ್ನಲ್ಲಿ ರಾಜೀಯಾಗಬಲ್ಲ ಸುಮಾರು 10 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಕಳೆದ ಮಾರ್ಚ್ನಲ್ಲಿ ನಡೆದ ಲೋಕ ಅದಾಲತ್ನಲ್ಲಿ 10186 ಬಾಕಿ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ 187026 ಸೇರಿ ಒಟ್ಟು 197215 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿತ್ತು.
ಈಗ ಪ್ರಸ್ತುತ ಎಲ್ಲಾ ನ್ಯಾಯಾಲಯಗಳಲ್ಲಿ 45508 ಪ್ರಕರಣಗಳು ಬಾಕಿ ಇದ್ದು ರಾಜಿ, ಸಂಧಾನಕ್ಕಾಗಿ 12853 ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥ ಮಾಡುವ ಗುರಿ ಹೊಂದಲಾಗಿದ್ದು ಇದರೊಂದಿಗೆ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಮಾಡಲಿದ್ದು ನಿಖರ ಅಂಕಿ ಅಂಶಗಳು ಶನಿವಾರ ಸಿಗಲಿವೆ ಎಂದರು.
ಲೋಕ್ ಅದಾಲತ್ನ್ನು ಜನತಾ ನ್ಯಾಯಾಲಯ ಎಂದು ಕರೆಯಲಾಗುತ್ತದೆ. ಜನತಾ ನ್ಯಾಯಾಲಯದಲ್ಲಿ ಸಮಯ, ಹಣ ಉಳಿತಾಯ, ಕಕ್ಷಿದಾರರು ಮತ್ತು ಎದುರುದಾರರಿಗೆ ಸಮಾಧಾನ ತರುವ ನ್ಯಾಯದಾನ ಸಿಗಲಿದೆ. ಮಾನವ ಸಂಬಂಧಗಳನ್ನು ಬೆಸೆಯಬೇಕು. ಸಣ್ಣ ವಿಷಯವನ್ನು ತೆಗೆದುಕೊಂಡು ಪ್ರತಿಷ್ಟೆಯಾಗಿ ಸ್ವೀಕರಿಸಿ ವರ್ಷಾನುಗಟ್ಟಲೆ ನ್ಯಾಯಾಲಯಕ್ಕೆ ಅಲೆದಾಡುವರು. ಇದಕ್ಕಾಗಿ ಹೆಚ್ಚು ಹೆಚ್ಚು ಜನರು ತಮ್ಮ ಪ್ರಕರಣಗಳ ಇತ್ಯರ್ಥಕ್ಕಾಗಿ ಲೋಕ್ ಅದಾಲತ್ನಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಅದಾಲತ್ನಲ್ಲಿ ಭಾಗವಹಿಸಲು ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂ.ಸಂ: 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿ ಹರಿಹರ ದೂ.ಸಂ: 08192-296885, ಹೆÇನ್ನಾಳಿ ದೂ.ಸಂ:08188-251732, ಚನ್ನಗಿರಿ ದೂ.ಸ 08189-229195 ಮತ್ತು ಜಗಳೂರು ದೂ.ಸ:08196-227600 ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ತಹಶೀಲ್ದಾರ್ ಕೋರ್ಟ್, ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕೋರ್ಟ್ನಲ್ಲಿ ಇದ್ದ ಅನೇಕ ಆಸ್ತಿ ಪ್ರಕರಣಗಳನ್ನು ಕಕ್ಷಿದಾರರು ಮತ್ತು ಎದುರುದಾರರಿಗೆ ಕಾನೂನು ಅವಕಾಶ, ದಾಖಲಾತಿಗಳ ಕುರಿತು ಮನವರಿಕೆ ಮಾಡಿಕೊಟ್ಟು ಕಡಿಮೆ ಸಮಯದಲ್ಲಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ. ರಾಜಿ, ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಜನತೆಗೆ ಹಣ, ಸಮಯ ಮತ್ತು ಮಾನಸಿಕ ಸ್ಥಿಮಿತತೆಯನ್ನು ಕಾಪಾಡಲು ಸಹಾಯಕವಾಗಿಲಿದೆ. ಅಷ್ಟೇ ಅಲ್ಲದೇ ಜನತೆ, ರೈತರು ಆರ್ಥಿಕವಾಗಿ ಸದೃಢವಾಗಲು ಹೆಚ್ಚು ಸಹಾಯವಾಗಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಪ್ರತಿಯೊಬ್ಬ ನಾಗರೀಕನಿಗೂ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಹಲವಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಲೋಕ ಅದಾಲತ್ ಮೂಲಕ ಸರಳ ಮತ್ತು ಬಾಕಿ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ನ್ಯಾಯ ಒದಗಿಸಬಹುದಾಗಿದೆ ಎಂದರು.
ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಾಹಾವೀರ ಮ ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಕಾರ್ಯದರ್ಶಿ ಬಸವರಾಜ್ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್