ದಾವಣಗೆರೆ.ಜುಲೈ.13 : ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ದೊಡ್ಡ ನಿರಾಳತೆ ಸಿಕ್ಕಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಶ್ರೀಗಳಿಗೆ ನಿಯಮಿತ ಜಾಮೀನು (ರೆಗ್ಯುಲರ್ ಬೇಲ್) ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರ ನೇತೃತ್ವದ ಪೀಠವು ಈ ಮಹತ್ವದ ತೀರ್ಪನ್ನು ನೀಡಿದ್ದು, ಸ್ವಾಮೀಜಿಯವರಿಗೆ ಕೆಲವು ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಕರುಣಿಸಿದೆ. ಈ ಹಿಂದೆ ವಚನಾನಂದ ಶ್ರೀಗಳು ಪಡೆದುಕೊಂಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ್ದ ಹೈಕೋರ್ಟ್, ಜೂನ್ 25ರಂದು ಕಡ್ಡಾಯವಾಗಿ ಕೆಳಹಂತದ ನ್ಯಾಯಾಲಯದಲ್ಲಿ ರೆಗ್ಯುಲರ್ ಬೇಲ್ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿತ್ತು. ಉನ್ನತ ನ್ಯಾಯಾಲಯದ ಈ ಆದೇಶವನ್ನು ಪಾಲಿಸಿದ ಸ್ವಾಮೀಜಿ, ಜೂನ್ 27ರಂದು ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಕಳೆದ ಕೆಲವು ದಿನಗಳಿಂದ ಉಭಯ ಪಕ್ಷಗಳ ಪರ ವಕೀಲರು ನ್ಯಾಯಾಲಯದಲ್ಲಿ ಸುದೀರ್ಘ ವಾದ-ಪ್ರತಿವಾದಗಳನ್ನು ಮಂಡಿಸಿದ್ದರು. ಅಂತಿಮವಾಗಿ ವಾದವನ್ನು ಆಲಿಸಿದ ನ್ಯಾಯಾಧೀಶರು, ಇಂದು ಶ್ರೀಗಳಿಗೆ ರೆಗ್ಯುಲರ್ ಬೇಲ್ ಮಂಜೂರು ಮಾಡಿದ್ದಾರೆ.










