ಡಿಸಿಎಂ ಡಿಕೆ ಶಿವಕುಮಾರ್ ಅವರು ಇವತ್ತು ದೆಹಲಿಗೆ ತೆರಳಿದ್ದಾರೆ. 2 ದಿನಗಳ ಕಾಲ ದೆಹಲಿಯಲ್ಲೇ ಇರಲಿರುವ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ಕೈ ಪಾಳಯದಲ್ಲಿ ಕುತೂಹಲ ಕೆರಳಿಸಿದೆ. ಡಿಕೆ ಶಿವಕುಮಾರ್ ಅವರು ಇಂದು ರಾಹುಲ್ ಗಾಂಧಿ ಅವರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಅಸ್ಸಾಂ ಚುನಾವಣೆ ಹಿನ್ನಲೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದ್ದರೂ ಇದೇ ವೇಳೆ ನಾಯಕತ್ವ ಬದಲಾವಣೆ ವಿಚಾರವೂ ಚರ್ಚೆಗೆ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂರು ದಿನಗಳ ಹಿಂದೆ ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಉತ್ಸುಕರಾಗಿ ಕಂಡಿದ್ದು, ಸಿಎಂ ಕುರ್ಚಿ ಏರಲು ಮತ್ತೆ ಪ್ರಯತ್ನ ಆರಂಭಿಸಿದ್ದಾರೆ ಎಂದು ಹೇಳಲಾಗುತ್ತಿದೆ. 126 ಸದಸ್ಯರ ಅಸ್ಸಾಂ ವಿಧಾನಸಭೆ ಚುನಾವಣೆ ಸಂಬಂಧ ಇಂದು ಪ್ರಿಯಾಂಕ ಗಾಂಧಿ ಅವರ ಜೊತೆಗೆ ಸಭೆ ನಡೆಯಲಿದೆ. ಅಲ್ಲದೇ ಕೇರಳ, ತಮಿಳುನಾಡು, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆಯೂ ಕೆಲವು ತಿಂಗಳಲ್ಲಿ ನಡೆಯಲಿವೆ. ಈ ಬಗ್ಗೆ ಚರ್ಚೆಗಳು ನಡೆಯಲಿವೆ. ಈ ವೇಳೆ ಸಮಯ ಸಿಕ್ಕರೆ ಡಿಕೆ ಶಿವಕುಮಾರ್ ಅವರು ಪ್ರಿಯಾಂಕ ಗಾಂಧಿ ಅವರ ಜೊತೆಗೆ ಸಿಎಂ ಕುರ್ಚಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಕಳೆದ ಕೆಲ ದಿನಗಳಿಂದ ಸಿಎಂ ಕುರ್ಚಿ ವಿಚಾರ ತಣ್ಣಗಾದಂತೆ ಕಂಡಿತ್ತು. ಆದ್ರೆ ಮೈಸೂರಿಗೆ ರಾಹುಲ್ ಗಾಂಧಿ ಅವರು ಭೇಟಿ ಕೊಟ್ಟಾಗ ಡಿಕೆ ಶಿವಕುಮಾರ್ ಅವರಿಗೆ ದೆಹಲಿಗೆ ಬನ್ನಿ ಎಂದಿದ್ದರು. ಅಂದಿನಿಂದ ರಾಜ್ಯದಲ್ಲಿ ಮತ್ತೆ ಪಟ್ಟದಾಟ ಜೋರಾಗಿತ್ತು. ಡಿಕೆ ಬ್ರದರ್ಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು. ಇದೀಗ ದೆಹಲಿಗೆ ತೆರಳಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ತಿಂಗಳೋಳಗೆ ಪಟ್ಟದಾಟಕ್ಕೆ ಬ್ರೇಕ್ ಬೀಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.















