ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ 31-12-2015ರೊಳಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಈ ಕುರಿತು ಹೊರಡಿಸಿರುವ ಸೂಚನೆಯಲ್ಲಿ, 31-12-2015ರ ಪೂರ್ವದಲ್ಲಿನ ನಿಯಮಾನುಸಾರ ಅರ್ಹ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಈಗಾಗಲೇ ಅನುಮತಿ ನೀಡಿದ್ದರೂ, ಅನೇಕ ಅನುದಾನಿತ ಪ್ರೌಢಶಾಲೆಗಳ ಆಡಳಿತ ಮಂಡಳಿಗಳು ಇನ್ನೂ ಪ್ರಸ್ತಾವನೆಗಳನ್ನು ಸಲ್ಲಿಸಿಲ್ಲ ಎಂದು ಇಲಾಖೆ ಅಸಮಾಧಾನ ವ್ಯಕ್ತಪಡಿಸಿದೆ.
ಹುದ್ದೆಗಳು ಖಾಲಿಯಾಗಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಧಕ್ಕೆಯಾಗುತ್ತಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದ್ದು, ಸಂಬಂಧಿತ ಶಾಲಾ ಆಡಳಿತ ಮಂಡಳಿಗಳು ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸಲು 15-07-2026ರವರೆಗೆ ಅಂತಿಮ ಕಾಲಮಿತಿ ನಿಗದಿಪಡಿಸಿದೆ.
ಸಿಬ್ಬಂದಿ ಮಾದರಿ ರಚನಾ ವಿನ್ಯಾಸದಂತೆ ಅರ್ಹ ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಸಂಬಂಧಿತ ಪ್ರಾಧಿಕಾರಿಗಳಿಗೆ ತಕ್ಷಣವೇ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.ಇದೇ ವೇಳೆ, ನಿಗದಿತ ಅವಧಿಯೊಳಗೆ ಪ್ರಸ್ತಾವನೆ ಸಲ್ಲಿಸದ ಹುದ್ದೆಗಳು ಶಾಲೆಗಳಿಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಅಂತಹ ಹುದ್ದೆಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಗಮನಕ್ಕೆ ಈ ಆದೇಶವನ್ನು ತಂದು, ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಧಾರವಾಡ ಮತ್ತು ಕಲಬುರ್ಗಿ ವಿಭಾಗದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.














