Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಲಾಭ ತಲುಪಿಸಿ : ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಸೂಚನೆ

---Advertisement---

ಚಿತ್ರದುರ್ಗ.ಅ.08 :  ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಡ ಜನರ ಏಳಿಗೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಬೇಕು. ಜಿಲ್ಲೆಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಈ ಕುರಿತು ಸಾರ್ವಜನರಿಗೆ ಹೆಚ್ಚಿನ ಮಾಹಿತಿ ದೊರಕುವಂತಾಗಬೇಕು ಎಂದರು.

ತಿಂಗಳ ಪ್ರಗತಿ ವಿವರ ಪ್ರದರ್ಶಿಸಿ : ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಜಿಲ್ಲೆಯ ಲಕ್ಷಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ.  ಈ ಯೋಜನೆಗಳ ಅಡಿ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಜಮೆ ಮಾಡಿದ ಹಣ, ಫಲಾನುಭವಿಗಳ ಸಂಖ್ಯೆಗಳ ಸಂಕ್ಷಿಪ್ತ ಪ್ರಗತಿ ವಿವರನ್ನು ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ನ್ಯಾಯಬೆಲೆ ಅಂಗಡಿಗಳ ಮುಂದಿನ ಫಲಕಗಳಲ್ಲಿ ಬರೆದು ಪ್ರದರ್ಶಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಪ್ರತಿ ತಿಂಗಳು ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಯಾಣಿಸಿದ ಮಹಿಳಾ ಫಲಾನುಭವಿಗಳು ಹಾಗೂ ಸರ್ಕಾರದಿಂದ ಪಾವತಿಸಿದ ಮೊತ್ತದ ವಿವರಗಳನ್ನು ಕ್ರೂಢಿಕರಿಸಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ದಿನಪತ್ರಿಕೆಗಳಲ್ಲಿ ಪ್ರಚುರ ಪಡಿಸಬೇಕು. ಗ್ಯಾರಂಟಿ ಯೋಜನೆಗಳ ಕುರಿತು ಬಸ್ ನಿಲ್ದಾಣಗಳಲ್ಲಿ ಆಡಿಯೋ ಹಾಗೂ ವಿಡಿಯೋ ಜಿಂಗಲ್ಸ್‍ಗಳನ್ನು ಪ್ರದರ್ಶಿಸಲು ಕ್ರಮಕೈಗೊಳ್ಳಬೇಕು.

ಗೃಹಜ್ಯೋತಿ ಯೋಜನೆ ಫಲಾನುಭವಿಗಳ ವಿವರ ಹಾಗೂ ಯೋಜನೆಯಡಿ ಇದರವರೆಗೂ ಸರ್ಕಾರದಿಂದ ಭರಿಸಿರುವ ಒಟ್ಟು ಮೊತ್ತದ ವಿವರಗಳನ್ನು ಪ್ರತಿ ಬೆಸ್ಕಾಂ ಕಚೇರಿಗಳ ಸೂಚನಾ ಫಲಕಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಬೇಕು. ಇದರೊಂದಿಗೆ ಬೆಸ್ಕಾಂ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಕೂಡ ಯೋಜನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.
ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಜಿಲ್ಲೆಯ ಎಲ್ಲಾ ಪದವಿ ಹಾಗೂ ಡಿಪ್ಲೋಮೋ ಕಾಲೇಜುಗಳಲ್ಲಿ ಜಾಗೃತಿ ಆಂದೋಲನ ಏರ್ಪಡಿಸಬೇಕು. ಹೆಚ್ಚು ಯುವಕರು ಯುವನಿಧಿಯ ಸೌಲಭ್ಯ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಹೇಳಿದರು.

ಕಚೇರಿ ಸ್ಥಾಪನೆ ಹಾಗೂ ನೋಡಲ್ ಅಧಿಕಾರಿಗಳ ನೇಮಕ:
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಕಚೇರಿಗಳನ್ನು ಶೀಘ್ರ ಸ್ಥಾಪಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸುವುದಾಗಿ ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್ ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳೂ ಗ್ಯಾರಂಟಿ ಯೋಜನೆಗಳ ಸ್ಥಿತಿಗತಿ ಕುರಿತು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ  ಮಾಹಿತಿ ನೀಡುವಂತೆ ಸೂಚಿಸಿದರು.

ಗೃಹಲಕ್ಷ್ಮೀ ಯೋಜನೆ : ರೂ.783 ಕೋಟಿ ಜಮೆ: ಚಿತ್ರದುರ್ಗ ಜಿಲ್ಲೆಯಲ್ಲಿ 4,05,282 ಪಡಿತರ ಚೀಟಿಗಳು ಇದ್ದು, ಇದರಲ್ಲಿ 3,83,537 ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಡಿ ನೊಂದಣಿಯಾಗಿರುತ್ತಾರೆ. ಇದವರೆಗೂ ಜಿಲ್ಲೆಯ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ರೂ.783,27,70,000 ಜಮೆ ಮಾಡಲಾಗಿದೆ.
ಇ-ಕೆವೈಸಿ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ವಿಫಲತೆ ಕಾರಣ 2,552 ಫಲಾನುಭವಿಗಳು ಹಾಗೂ 426 ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡ ಕಾರಣ ಇವರ ಖಾತೆಗಳಿಗೆ ಹಣ ಜಮೆಯಾಗಿರುವುದಿಲ್ಲ. ಜಿಲ್ಲೆಯಲ್ಲಿ 721 ಫಲಾನುಭವಿಗಳು ಜಿ.ಎಸ್.ಟಿ ಹಾಗೂ ಐಟಿ ಪಾವತಿ ಮಾಡಿರುವ ಕಾರಣದಿಂದ ಯೋಜನೆ ಲಾಭ ಪಡೆಯುವಲ್ಲಿ ವಂಚಿತರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸಭೆಯಲ್ಲಿ ಮಾಹಿತಿ ನೀಡಿದರು.

 

ಜಿಲ್ಲೆಯಲ್ಲಿ ಬಾಕಿ ಉಳಿದ 18,702 ಪಡಿತರ ಕಾರ್ಡು ಹೊಂದಿರುವವರ ಪೈಕಿ ಅರ್ಹರನ್ನು ಗುರುತಿಸಿ ಯೋಜನೆಯಡಿ ನೊಂದಣಿ ಮಾಡಲು ಕ್ರಮ ಕೈಗೊಳ್ಳಬೇಕು. 10 ದಿನಗಳ ಒಳಗಾಗಿ ನೊಂದಣಿಯಾಗದವರ ವಿವರಗಳನ್ನು ತಾಲ್ಲೂಕು ಹಾಗೂ ಗ್ರಾಮವಾರು ಸಿದ್ದಪಡಿಸಿ ಅನುಷ್ಠಾನ ಸಮಿತಿಗೆ ನೀಡಬೇಕು. ತಾಲ್ಲೂಕು ಹಂತದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಹಾಗೂ ಸಿಡಿಪಿಓಗಳ ಸಮಿತಿ ರಚಿಸಿ ಒಂದು ತಿಂಗಳ ಒಳಗಾಗಿ ಇ-ಕೆವೈಸಿ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಲು ಕ್ರಮ ಕೈಗೊಳ್ಳುವಂತೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಸೂಚಿಸಿದರು.

ಯುವನಿಧಿ ಯೋಜನೆಯಡಿ 3.85 ಕೋಟಿ ಹಣ ಪಾವತಿ:
ಯುವನಿಧಿ ಯೋಜನೆ ಜಾರಿಯಾದ 2024ರ ಜನವರಿಯಿಂದ ಆಗಸ್ಟ್ ತಿಂಗಳವರೆಗೆ ಜಿಲ್ಲೆಯ 3977 ಫಲಾನುಭವಿಗಳ ಖಾತೆಗೆ ಒಟ್ಟು ರೂ. 38535000/- ನಿರುದ್ಯೋಗಿ ಭತ್ಯೆ ಪಾವತಿಸಲಾಗಿದೆ ಎಂದು ಉದ್ಯೋಗ ವಿನಿಮಯ ಕಚೇರಿಯ ರವಿಕುಮಾರ್ ಸಭೆಗೆ ಮಾಹಿತಿ ನೀಡಿದರು.

 

ಜಿಲ್ಲೆಯಲ್ಲಿ ಪದವಿ ಪೂರ್ಣಗೊಳಿಸಿದ 1817 ಪುರುಷರು, 2110 ಮಹಿಳೆಯರು ಸೇರಿದಂತೆ ಒಟ್ಟು 3927 ಫಲಾನುಭವಿಗಳು ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದ 23 ಪುರುಷರು, 27 ಮಹಿಳೆಯರು ಸೇರಿದಂತೆ 50 ಫಲಾನುಭವಿಗಳು ಸೇರಿದಂತೆ ಒಟ್ಟು 3977 ಫಲಾನುಭವಿಗಳು ಇದ್ದಾರೆ. ಯುವನಿಧಿ ಯೋಜನೆಯ ಜಿಲ್ಲೆಯ ಫಲಾನುಭವಿಗಳು ಹೆಚ್ಚಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರು ಜಿಲ್ಲೆಗಳಿಗೆ ತರಬೇತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಯುವನಿಧಿ ಗ್ಯಾರಂಟಿ ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ.3000 ಹಾಗೂ ಡಿಪ್ಲೊಮಾ ವ್ಯಾಸಂಗ ಪೂರ್ಣಗೊಳಿಸಿದ ನಿರುದ್ಯೋಗಿಗಳಿಗೆ ಮಾಸಿಕ ರೂ.1500 ಸಿಗಲಿದ್ದು, ಈ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಪದವಿ ಹಾಗೂ ಡಿಪ್ಲೊಮಾ ವ್ಯಾಸಂಗ ಪೂರ್ಣಗೊಳಿಸಿ 180 ದಿನಗಳ ಆದನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರು. ಉನ್ನತ ಶಿಕ್ಷಣ ಹಾಗೂ ಉದ್ಯೋಗಕ್ಕೆ ಹೋದರೆ ಈ ಯೋಜನೆಗೆ ಅರ್ಹರಿರುವುದಿಲ್ಲ ಎಂದು ತಿಳಿಸಿದ ಅವರು, ಯುವನಿಧಿಗೆ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು 25ನೇ ತಾರೀಕುನೊಳಗೆ ಸ್ವಯಂ ಘೋಷಣೆ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಮಾತನಾಡಿ, ಯುವನಿಧಿ ಯೋಜನೆ ನೋಂದಣಿಗೆ ಸಂಬಂಧಪಟ್ಟಂತೆ ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಭೇಟಿ ನೀಡಿ, ಪೋಸ್ಟರ್ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಗೃಹಜ್ಯೋತಿಗೆ ಪ್ರತಿ ಮಾಹೆ 13 ಕೋಟಿ ಹೊಂದಾಣಿಕೆ ಮೊತ್ತ ಪಾವತಿ:
ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ಮಾಹೆ 13 ಕೋಟಿ ಹೊಂದಾಣಿಕೆ ಮೊತ್ತ ಪಾವತಿ ಮಾಡಲಾಗುತ್ತಿದೆ. ಇಲ್ಲಿಯವರೆಗೂ 175.82 ಕೋಟಿ ಗೃಹಜ್ಯೋತಿ ಯೋಜನೆಯಡಿ ವೆಚ್ಚ ಭರಿಸಲಾಗಿದೆ  ಎಂದು ಬೆಸ್ಕಾಂ ಇಂಜಿನಿಯರ್ ನಾಗರಾಜ್ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 4,16,215 ವಿದ್ಯುತ್ ಬಳಕೆದಾರರು ಇದ್ದು, ಇದರಲ್ಲಿ 3,73,754 ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳಾಗಿದ್ದಾರೆ. ಎಂದು ತಿಳಿಸಿದರು.

ವಿದ್ಯುತ್ ಬಳಕೆಗೆ ಸಂಬಂಧಪಟ್ಟಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಅಧ್ಯಕ್ಷ ಶಿವಣ್ಣ ಸೂಚನೆ ನೀಡಿದರು.

ಶಕ್ತಿ ಯೋಜನೆ: 2.93 ಕೋಟಿ ನಾರಿಯರು ಉಚಿತ ಪ್ರಯಾಣ:
ಶಕ್ತಿ ಯೋಜನೆಯಡಿ 2024ರ ಸೆಪ್ಟೆಂಬರ್ ಅಂತ್ಯಕ್ಕೆ ಜಿಲ್ಲೆಯಲ್ಲಿ 2,93,93,157 ನಾರಿಯರು ಉಚಿತ ಪ್ರಯಾಣ ಬೆಳೆಸಿದ್ದಾರೆ. ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗಕ್ಕೆ ಮಹಿಳೆಯರಿಗೆ ನೀಡಿರುವ ಶೂನ್ಯ ದರದ ಟಿಕೆಟ್ ಮೂಲಕ 114.83 ಕೋಟಿ ರೂ. ಆದಾಯ ಲಭಿಸಿದೆ ಎಂದು ಕೆಎಸ್‍ಆರ್‍ಟಿಸಿಯ ಸಂಚಾರ ನಿಯಂತ್ರಕ ಡಿ.ಟಿ.ಸುರೇಶ್ ಹೇಳಿದರು.

ಶಕ್ತಿ ಯೋಜನೆಯಿಂದ ಮಹಿಳಾ ಸಬಲೀಕರಣ, ಆರ್ಥಿಕ ವಹಿವಾಟು ಹೆಚ್ಚಳಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದ ಅಧ್ಯಕ್ಷ ಶಿವಣ್ಣ, ಅಗತ್ಯ ಇರುವ ಕಡೆ ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು. ಸಾರ್ವಜನಿಕರ ಬೇಡಿಕೆ ಹಿನ್ನಲೆಯಲ್ಲಿ ಹಿರಿಯೂರಿ ನಿಂದ ಹೊಸದುರ್ಗಕ್ಕೆ ರಾತ್ರಿ 6 ಗಂಟೆಯ ನಂತರ ಬಸ್ ಸೌಲಭ್ಯಕ್ಕೆ ಅಗತ್ಯ ಕ್ರಮ ವಹಿಸಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅನ್ನಭಾಗ್ಯ ಯೋಜನೆಯಡಿ ರೂ.248.90 ಕೋಟಿ ಪಾವತಿ: ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಜೂನ್ ಮಾಹೆಯಲ್ಲಿ 3,65,783 ಫಲಾನುಭವಿಗಳಿಗೆ ಹಣ ಪಾವತಿಯಾಗಿದೆ. ಪ್ರತಿ ಮಾಹೆ ಜಿಲ್ಲೆಯಲ್ಲಿ ಸರಾಸರಿ ರೂ.20 ಕೋಟಿಕೂ ಅಧಿಕ ಮೊತ್ತವನ್ನು ಪಾವತಿ ಮಾಡಲಾಗುತ್ತಿದ್ದು,  ಅನ್ನಭಾಗ್ಯ ಯೋಜನೆಯಡಿ ಇದುವರೆಗೂ 248.90 ಕೋಟಿ ರೂ. ಹಣ ಪಾವತಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ನಾಗೇಶ್ ರೆಡ್ಡಿ, ನಿರಂಜನ್ ಸೇರಿದಂತೆ ಸದಸ್ಯರು ಹಾಗೂ ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಬೆಸ್ಕಾಂ ಇಂಜಿನಿಯರ್ ನಾಗರಾಜ್, ಉದ್ಯೋಗ ವಿನಿಯಮ ಕಚೇರಿಯ ರವಿಕುಮಾರ್, ಶಿಕ್ಷಣ ಇಲಾಖೆಯ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸೇರಿದಂತೆ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment