ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಚಿತ್ರದುರ್ಗದಲ್ಲಿ  ಆಶಾಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ

1 Min Read

ಸುದ್ದಿಒನ್, ಚಿತ್ರದುರ್ಗ, ಜನವರಿ.19 : ಗೌರವಧನವನ್ನು ತಿಂಗಳಿಗೆ  ರೂ. 15 ಸಾವಿರಕ್ಕೆ ಹೆಚ್ಚಿಸಬೇಕು, ಆರೋಗ್ಯ ಇಲಾಖೆಯ ಸೇವೆಗಳನ್ನು ಹೊರತಾಗಿ ಅನ್ಯ ಇಲಾಖೆಗಳ ಕೆಲಸಕಾರ್ಯಗಳಿಗೆ ತಮ್ಮನ್ನು ಬಳಸಿಕೊಳ್ಳಬಾರದು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾ ಪಂಚಾಯತ್ ಕಚೇರಿ‌ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಗಾಂಧಿ ವೃತ್ತದಿಂದ ಜಿಲ್ಲಾ ಪಂಚಾಯತ್ ಕಚೇರಿವರೆಗೂ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಆಶಾ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ರಾಜ್ಯ ಕಾರ್ಯದರ್ಶಿ ಕಾಮ್ರೆಡ್ ನಾಗಲಕ್ಷ್ಮಿ ಅವರು ನೇತೃತ್ವ ವಹಿಸಿದ್ದರು. ನಂತರ ಮಾತನಾಡಿದ ಅವರು ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅವರ ಸೇವೆಯನ್ನು ಖಾಯಂಗೊಳಿಸಿ ನಿವೃತ್ತಿ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.

ರಾಜಕೀಯ ಕಾರ್ಯಕ್ರಮಗಳಿಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ.  ಬಿಟ್ಟಿಚಾಕರಿಯಂತಾಗಿದೆ. ಅವರಿಗೆ ಕನಿಷ್ಠವೇತನವೂ ಸಿಗುತ್ತಿಲ್ಲ. ಇತರ ಯಾವುದೇ  ಯಾವುದೇ ಸೌಲಭ್ಯಗಳನ್ನೂ ಸರ್ಕಾರ ನೀಡುತ್ತಿಲ್ಲ’ ಎಂದು ಟೀಕಿಸಿದರು.

ಆಶಾ ಕಾರ್ಯಕರ್ತರ ಮನವಿಯನ್ನು ಡಾ. ನಾಗರಾಜ್ ಮತ್ತು ತಿಮ್ಮಪ್ಪ ಸ್ವೀಕರಿಸಿದರು. ಜಿಲ್ಲಾ ಪಂಚಾಯತ್ ಸಿಇಓ ಅವರು ಸ್ಥಳದಲ್ಲಿ ಇಲ್ಲದ ಕಾರಣ ದೂರವಾಣಿ ಮೂಲಕ ಆಶಾ ಕಾರ್ಯಕರ್ತರ ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ನಂತರ ಅವರು ಸಂಬಂಧಪಟ್ಟ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಿ
ವರದಿ ಬಂದ ನಂತರ ಆಶಾ ಮುಖಂಡರು ಮತ್ತು ಯೂನಿಯನ್ ನ ಪದಾಧಿಕಾರಿಗಳ ಸಮ್ಮುಖದಲ್ಲಿ ಕುಂದು ಕೊರತೆ ಸಭೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ AIUTUC ಯ ಜಿಲ್ಲಾ ಸಂಚಾಲಕರಾದ ರವಿಕುಮಾರ್ , ಆಶಾ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷರಾದ ಗಿರಿಜಮ್ಮನವರು , ಕಾರ್ಯದರ್ಶಿಗಳಾದ ಲಕ್ಷ್ಮಿ, ಗುರುಶಾಂತ , ಮಂಜುಳಾ ಮೀನಾಕ್ಷಿ , ನಾಗವೇಣಿ, ಪದ್ಮ ವಸಂತಿ, ಮಮತಾ ಮುಂತಾದವರು  ಭಾಗವಹಿಸಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *