ಧಾರವಾಡ.ಸೆಪ್ಟೆಂಬರ್.01 : ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಬೆಳಗಾವಿಯಿಂದ ಧಾರವಾಡದತ್ತ ಬರುತ್ತಿದ್ದ ಕಾರು ವೆಂಕಟಾಪುರ ಗ್ರಾಮದ ಸಮೀಪ ಏಕಾಏಕಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ಕೆ.ಯು. ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮತ್ತೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗರಗ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.










