ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಪೂರ್ಣಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ತಮಗೆ ಹಂಚಿಕೆಯಾಗಿರುವ ಖಾತೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಪಕ್ಷದ ವಲಯದಲ್ಲಿ ಸಂಚಲನ ಮೂಡಿಸಿದೆ.ಈ ಬೆಳವಣಿಗೆ ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು, ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪರಿಸ್ಥಿತಿಯ ಮೇಲೆ ನಿಗಾ ವಹಿಸಿರುವುದಾಗಿ ಮೂಲಗಳು ತಿಳಿಸಿವೆ.
ಸುರ್ಜೇವಾಲಾಗೆ ಮನವೊಲಿಕೆ ಜವಾಬ್ದಾರಿ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಮಲಿಂಗಾರೆಡ್ಡಿ ಅಸಮಾಧಾನದ ವಿಚಾರವನ್ನು ರಾಹುಲ್ ಗಾಂಧಿ ಅವರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಹಿರಿಯ ನಾಯಕರನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳುವಂತೆ ಸೂಚಿಸಿರುವ ರಾಹುಲ್ ಗಾಂಧಿ, ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡುವ ಜವಾಬ್ದಾರಿಯನ್ನು ಸುರ್ಜೇವಾಲಾಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಹೈಕಮಾಂಡ್ನ ಕಠಿಣ ಸಂದೇಶ
ಒಂದು ಹಂತದವರೆಗೆ ಸಮಾಧಾನ ಪ್ರಯತ್ನ ನಡೆಸಬೇಕು. ಆದರೆ ಅದಕ್ಕೂ ಮಣಿಯದಿದ್ದರೆ ಯಾವುದೇ ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಬೇಕು ಎಂಬ ಸಂದೇಶವನ್ನು ಹೈಕಮಾಂಡ್ ನೀಡಿದೆ ಎನ್ನಲಾಗುತ್ತಿದೆ. ಒಬ್ಬ ಸಚಿವರ ಅಸಮಾಧಾನಕ್ಕೆ ಮಣಿದರೆ ಮುಂದಿನ ದಿನಗಳಲ್ಲಿ ಇತರ ನಾಯಕರೂ ಇದೇ ರೀತಿಯ ಒತ್ತಡದ ರಾಜಕಾರಣಕ್ಕೆ ಮುಂದಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಹೈಕಮಾಂಡ್ ಎಚ್ಚರಿಕೆಯ ನಿಲುವು ತಾಳಿದೆ.
ಏರ್ಪೋರ್ಟ್ನಲ್ಲೇ ತುರ್ತು ಸಭೆ
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣವೇ ರಾಹುಲ್ ಗಾಂಧಿ ಅವರು ಪಕ್ಷದ ಪ್ರಮುಖ ನಾಯಕರೊಂದಿಗೆ ತುರ್ತು ಸಮಾಲೋಚನೆ ನಡೆಸಿದರು ಎನ್ನಲಾಗಿದೆ. ಖಾತೆ ಹಂಚಿಕೆ ನಂತರ ಉಂಟಾಗಿರುವ ಆಂತರಿಕ ಅಸಮಾಧಾನ ಮತ್ತು ಅದರ ರಾಜಕೀಯ ಪರಿಣಾಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆದಿದ್ದು, ಸರ್ಕಾರ ಹಾಗೂ ಪಕ್ಷದ ಇಮೇಜ್ಗೆ ಧಕ್ಕೆಯಾಗದಂತೆ ಡ್ಯಾಮೇಜ್ ಕಂಟ್ರೋಲ್ ತಂತ್ರ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಖಾತೆ ಹಂಚಿಕೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಕಾಣಿಸಿಕೊಂಡಿರುವ ಈ ಅಸಮಾಧಾನವನ್ನು ಹೈಕಮಾಂಡ್ ಹೇಗೆ ನಿಭಾಯಿಸುತ್ತದೆ ಎಂಬುದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲದ ವಿಷಯವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
























