ಬೆಂಗಳೂರು.ಜುಲೈ.31 : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಉಚಿತವಾಗಿ ಮನೆ-ಮನೆಗೆ ಜಾತಿ ಪ್ರಮಾಣ ಪತ್ರಗಳನ್ನು ತಲುಪಿಸಲು ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯನ್ನು ನೀಡಲು ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತು ಕಂದಾಯ ಆಯುಕ್ತಾಲಯವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪ್ರಮುಖ ಸುತ್ತೋಲೆ ಒಂದನ್ನು ರವಾನಿಸಿದೆ.
ವಿಶೇಷ ತೀವ್ರ ಪರಿಷ್ಕರಣೆಯಡಿ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು ಅಥವಾ ತಿದ್ದುಪಡಿ ಇರುವವರು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಚುನಾವಣಾ ಆಯೋಗ ಸೂಚಿಸಿರುವ 11 ಪ್ರಮುಖ ದಾಖಲೆಗಳಲ್ಲಿ ಜಾತಿ ಪ್ರಮಾಣ ಪತ್ರವೂ ಒಂದಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಡೇಟಾ ಬೇಸ್ನಲ್ಲಿರುವ ಒಟ್ಟು 4.81 ಕೋಟಿ ಜಾತಿ ಪ್ರಮಾಣ ಪತ್ರಗಳ PDF ಪ್ರತಿಗಳನ್ನು ಜಿಲ್ಲಾವಾರು, ತಾಲೂಕುವಾರು ಮತ್ತು ಗ್ರಾಮವಾರು ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಲಾಗುತ್ತಿದೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯಿದೆ 1999 ರನ್ವಯ ಸ್ಥಳೀಯ ಮುದ್ರಣಾಲಯಗಳಲ್ಲಿ ಇವುಗಳನ್ನು ಮುದ್ರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಜಾತಿ ಪ್ರಮಾಣ ಪತ್ರದೊಂದಿಗೆ ಮುಖ್ಯಮಂತ್ರಿಗಳ ಜಾಗೃತಿ ಸಂದೇಶ ಹಾಗೂ ಹಿಂಭಾಗದಲ್ಲಿ ಅಗತ್ಯ ದಾಖಲಾತಿಗಳ ಪಟ್ಟಿಯನ್ನು ಮುದ್ರಿಸಿ ವಿತರಿಸಲಾಗುತ್ತದೆ. ಮೇಲಾಗಿ, ಲಭ್ಯವಿರುವ ಮೊಬೈಲ್ ಸಂಖ್ಯೆಗಳಿಗೆ SMS ಮತ್ತು ವಾಟ್ಸಾಪ್ ಮೂಲಕ ಡೌನ್ಲೋಡ್ ಲಿಂಕ್ ಕಳುಹಿಸುವ ಕಾರ್ಯವೂ ನಡೆಯಲಿದೆ.
ಸಾರ್ವಜನಿಕರಿಗೆ ಈ ಪ್ರಮಾಣ ಪತ್ರಗಳನ್ನು ತಲುಪಿಸಿದ ನಂತರ ಸ್ವೀಕೃತಿಯನ್ನು ದಾಖಲಿಸಿಕೊಳ್ಳಲು ವಿಶೇಷ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ಮೊಬೈಲ್ ಅಥವಾ ಆಧಾರ್ ಸಂಖ್ಯೆ ನಮೂದಿಸಿ ವಿತರಣೆಯ ವಿವರಗಳನ್ನು ನಮೂದಿಸಲು ಸೂಚಿಸಲಾಗಿದೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಅತ್ಯಂತ ತುರ್ತಾಗಿ ಕಾರ್ಯಗತಗೊಳಿಸುವಂತೆ ಕಂದಾಯ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











