ಚಿತ್ರದುರ್ಗ. ಸೆ.17: ಜಿಲ್ಲೆಯ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ಸೇರಿದಂತೆ ರಾಜ್ಯದ 53 ತಾಲ್ಲೂಕುಗಳಲ್ಲಿ ಬರ ಘೋಷಣೆ ಸಂಬಂಧ ಕ್ಷೇತ್ರ ಮಟ್ಟದ ಪರಿಸ್ಥಿತಿ ಪರಿಶೀಲನೆಗೆ (Ground Truthing) ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSDMA) ಅಧಿಸೂಚನೆ ಹೊರಡಿಸಿದೆ. ಶೀಘ್ರವೇ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಮೊದಲು ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಜಿಲ್ಲೆಯ ಚಳ್ಳಕೆರೆ, ಹಿರಿಯೂರು ಹಾಗೂ ಹೊಸದುರ್ಗ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿತ್ತು. ಸದ್ಯ ಉಳಿದ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಮಟ್ಟದಲ್ಲಿ ತೀವ್ರ ಸಿದ್ಧತೆ ನಡೆಸಲಾಗಿದೆ. ಕ್ಷೇತ್ರ ಮಟ್ಟದ ಪರಿಸ್ಥಿತಿ ಪರಿಶೀಲನೆಗೆ ಸೆ.17 ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಬರ ಕೈಪಿಡಿ 2020 ರ ಪ್ರಕಾರ ಬರ ಘೋಷಿಸಲು ಕಡ್ಡಾಯವಾಗಿ ಶೇ.60ಕ್ಕಿಂತ ಹೆಚ್ಚು ಮಳೆ ಕೊರತೆ ಅಥವಾ ಸತತ ಮೂರು ವಾರಗಳ ಕಾಲ ಶುಷ್ಕ ವಾತಾವರಣ ಇರಬೇಕು. ತತ್ಪರಿಣಾಮಗಳ ಮಾನದಂಡವಾಗಿ ಬಿತ್ತನೆ ಪ್ರದೇಶದ ಪ್ರಮಾಣ, ಮಣ್ಣಿನ ತೇವಾಂಶ ಕೊರತೆ, ಉಪಗ್ರಹ ಆಧಾರಿತ ಬೆಳೆ ಸೂಚ್ಯಂಕ ಹಾಗೂ ಜಲಸಂಪನ್ಮೂಲ ಸೂಚ್ಯಂಕಗಳನ್ನು ಪ್ರಭಾವ ಸೂಚಕಗಳಾಗಿ ಪರಿಗಣಿಸಲಾಗುತ್ತದೆ.

ಕ್ಷೇತ್ರ ಮಟ್ಟದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳನ್ನೂ ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗುವುದು. ಇದರಿಂದಾಗಿ ಜಿಲ್ಲೆಯ ಎಲ್ಲಾ ಆರೂ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೊಳ್ಳಲಿವೆ ಎಂದು ಸಚಿವ ಟಿ.ರಘುಮೂರ್ತಿ ತಿಳಿಸಿದ್ದಾರೆ.










