Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇವಲ ಅಂಕ ಗಳಿಸುವುದಷ್ಟೇ ಶಿಕ್ಷಣವಲ್ಲ, ಸಂಸ್ಕಾರ-ಕೌಶಲವೂ ಬೆಳೆಯಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

---Advertisement---

ಚಿತ್ರದುರ್ಗ.03:  ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ, ರೊಬೊಟಿಕ್ಸ್, ಬಯೋಟೆಕ್ನಾಲಜಿ ಹಾಗೂ ಡಿಜಿಟಲ್ ತಂತ್ರಜ್ಞಾನದ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿಗಳಿಗೆ ಕೌಶಲ ಮತ್ತು ನಾವೀನ್ಯತೆ ಆಧಾರಿತ ಶಿಕ್ಷಣ ನೀಡುವುದು ಅತ್ಯಗತ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತಿಳಿಸಿದರು.

ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಗುರುವಾರ, ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಶಾಲಾ ಕೊಠಡಿಗಳು, ಪ್ರಾರ್ಥನಾ ಮಂದಿರ ಹಾಗೂ ಕುಟೀರಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ವಿಜ್ಞಾನ ಮಾದರಿಗಳ ತಯಾರಿಕೆ, ಪರಿಸರ ಯೋಜನಾ ಚಟುವಟಿಕೆಗಳು, ರೀಡಿಂಗ್ ಕ್ಲಬ್‌ಗಳು, ಕ್ರೀಡೆ ಹಾಗೂ ಕೌಶಲಾಭಿವೃದ್ಧಿ ಚಟುವಟಿಕೆಗಳನ್ನು ಶಾಲಾ ಹಂತದಲ್ಲೇ ಹೆಚ್ಚು ಪ್ರೋತ್ಸಾಹಿಸಬೇಕು. ಸಣ್ಣ ನಾವೀನ್ಯತಾ ಯೋಜನೆಗಳ ಮೂಲಕ ಮಕ್ಕಳಲ್ಲಿ ಸೃಜನಶೀಲತೆ ಮತ್ತು ಆವಿಷ್ಕಾರದ ಮನೋಭಾವವನ್ನು ಬೆಳೆಸಬೇಕು ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

ಶಾಲೆಗಳು ಕೇವಲ ಶಿಕ್ಷಣದ ಕೇಂದ್ರಗಳಾಗಷ್ಟೇ ಅಲ್ಲದೆ ಪರಿಸರ ಜಾಗೃತಿಯ ಕೇಂದ್ರಗಳಾಗಿಯೂ ಹೊರಹೊಮ್ಮಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಸಸಿನೆಟ್ಟು ಪೋಷಿಸಬೇಕು. ಜಲ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆ ಕಡಮೆ ಮಾಡುವುದು, ಶಕ್ತಿ ಉಳಿತಾಯ ಹಾಗೂ ಶಾಲೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಿಕ್ಷಣದೊಂದಿಗೆ ಸಂಸ್ಕಾರ, ಕೌಶಲ ಬೆಳೆಯಲಿ:

ಶಿಕ್ಷಣ ಎಂದರೆ ಕೇವಲ ಪರೀಕ್ಷೆಯಲ್ಲಿ ಅಂಕ ಗಳಿಸುವುದು ಅಥವಾ ಉದ್ಯೋಗ ಪಡೆಯುವುದಕ್ಕೆ ಮಾತ್ರ ಸೀಮಿತವಾಗಿರಬಾರದು. ಜ್ಞಾನದೊಂದಿಗೆ ವಿವೇಕ, ವಿಜ್ಞಾನದೊಂದಿಗೆ ಸಂವೇದನೆ, ಯಶಸ್ಸಿನೊಂದಿಗೆ ಸಂಸ್ಕಾರ ಹಾಗೂ ಹಕ್ಕುಗಳೊಂದಿಗೆ ಕರ್ತವ್ಯ ಪ್ರಜ್ಞೆಯನ್ನು ಮೂಡಿಸುವುದೇ ನಿಜವಾದ ಶಿಕ್ಷಣದ ಮುಖ್ಯ ಉದ್ದೇಶ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು.
ನವ ನಿರ್ಮಿತ ತರಗತಿಗಳನ್ನು ಉದ್ಘಾಟಿಸುತ್ತಿರುವುದು ಕೇವಲ ಕಟ್ಟಡದ ಆರಂಭವಲ್ಲ, ಬದಲಿಗೆ ಕರ್ನಾಟಕ ಮತ್ತು ಭಾರತದ ಭವಿಷ್ಯದ ನಿರ್ಮಾಣಕ್ಕೆ ತಳಪಾತ ಹಾಕಿದಂತೆ. ಈ ತರಗತಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವಿಜ್ಞಾನಿಗಳು, ವೈದ್ಯರು, ಎಂಜಿನಿಯರ್‌ಗಳು, ಶಿಕ್ಷಕರು, ಆಡಳಿತಾಧಿಕಾರಿಗಳು, ಉದ್ಯಮಿಗಳು ಹಾಗೂ ದೇಶಸೇವಕರಾಗಿ ಹೊರಹೊಮ್ಮಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಶಿಕ್ಷಣವನ್ನು ಹೆಚ್ಚು ಸಮಗ್ರ, ಕೌಶಲಾಧಾರಿತ ಹಾಗೂ ನಾವೀನ್ಯತೆ ಕೇಂದ್ರಿತಗೊಳಿಸಲು ಒತ್ತು ನೀಡಿದೆ. ಇಂದು ವಿದ್ಯಾರ್ಥಿಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ ಪ್ರಯೋಗಾಲಯ, ಕ್ರೀಡಾಂಗಣ, ಕಲೆ, ಸಂಸ್ಕೃತಿ ಮತ್ತು ತಂತ್ರಜ್ಞಾನದ ಸೃಜನಶೀಲ ಬಳಕೆಯಲ್ಲಿ ತೊಡಗಿಸಿಕೊಳ್ಳಬೇಕು. ಭಾರತ ಹಾಗೂ ಕರ್ನಾಟಕದ ಸುದೀರ್ಘ ಜ್ಞಾನ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸ್ಮರಿಸಿದ ಅವರು, ಆಧುನಿಕ ತಂತ್ರಜ್ಞಾನದ ಜೊತೆಗೆ ತಮ್ಮ ಸಾಂಸ್ಕೃತಿಕ ಬೇರುಗಳನ್ನು ಮರೆಯಬಾರದು ಎಂದರು.

‘ವಿಕಸಿತ ಭಾರತ’ದ ಕನಸು ನನಸಾಗಲು ಹೆಣ್ಣುಮಕ್ಕಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪ್ರತಿಯೊಬ್ಬ ಹೆಣ್ಣುಮಗಳಿಗೆ ಗುಣಮಟ್ಟದ ಶಿಕ್ಷಣ, ಸುರಕ್ಷತೆ, ಆರೋಗ್ಯ ಮತ್ತು ಆತ್ಮವಿಶ್ವಾಸ ಸಿಗುವಂತಾಗಬೇಕು. ವಿದ್ಯಾವಂತ ಹೆಣ್ಣುಮಕ್ಕಳು ಇಡೀ ಕುಟುಂಬ ಮತ್ತು ಸಮಾಜದ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

ಸರ್ಕಾರಿ ಶಾಲೆಯನ್ನು ಮಾದರಿಯಾಗಿಸಿದ ಕಾರ್ಯ ಶ್ಲಾಘನೀಯ:

ಹೊಸಯಳನಾಡು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸಿರುವುದು ಅತ್ಯಂತ ಶ್ಲಾಘನೀಯ ಮತ್ತು ಹೆಮ್ಮೆಯ ವಿಷಯ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಲೆಯ ಮಹಾಪೋಷಕರಾಗಿರುವ ತಿಪ್ಪೇಸ್ವಾಮಿ ಹಾಗೂ ಅವರ ತಂಡ ರೂ.25 ಕೋಟಿಗೂ ಹೆಚ್ಚು ಮೊತ್ತದ ಅನುದಾನ ಹಾಗೂ ದೇಣಿಗೆಯನ್ನು ವಿವಿಧ ಸಂಸ್ಥೆಗಳಿಂದ ತಂದು ಈ ಶಾಲೆಯನ್ನು ದೇಶದಲ್ಲೇ ಮಾದರಿ ಶಾಲೆಯನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನೂತನ ಶಿಕ್ಷಣ ನೀತಿ ಮತ್ತು ತ್ರಿಭಾಷಾ ಸೂತ್ರ ಜಾರಿಯಾಗಲಿ:

ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳಲ್ಲಿ ಓದುವ ಬಡವರ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಮತ್ತು ಸಮಾನ ಅವಕಾಶಗಳು ಸಿಗಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿ ತ್ರಿಭಾಷಾ ಸೂತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಜಾರಿಗೊಳಿಸಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಸ್ವಾತಂತ್ರ ನಂತರದಲ್ಲಿ ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಮಠ ಮಾನ್ಯಗಳು ಶಿಕ್ಷಣ ಸಂಸ್ಥೆಗಳನ್ನು ತೆರೆದು ಎಲ್ಲಾ ವರ್ಗದ ಜನರಿಗೂ ಶಿಕ್ಷಣ ನೀಡಿದವು. ಇಂದು ಸರ್ಕಾರವು ಶಿಕ್ಷಕರನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತದೆ. ಹೀಗೆ ಆಯ್ಕೆಯಾಗುವ ಶಿಕ್ಷಕರು, ಸರ್ಕಾರಿ ಶಾಲೆಗಳಿಗೆ ಬರುವ ಬಡ ಮಕ್ಕಳು ಕೂಡ ಮೆರಿಟ್ ಮಟ್ಟದಲ್ಲಿ ಬೆಳೆಯುವಂತೆ ಬೋಧನೆ ಮಾಡಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳು ಮತ್ತು ಶಿಕ್ಷಣ ವ್ಯವಸ್ಥೆ ಸಂಪೂರ್ಣ ಸಫಲವಾಗುತ್ತದೆ ಎಂದು ಶಿಕ್ಷಕ ವೃಂದಕ್ಕೆ ಕಿವಿಮಾತು ಹೇಳಿದರು.

ಶಿಕ್ಷಣದಲ್ಲಿ ತಾರತಮ್ಯ ತಪ್ಪಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ತ್ರಿಭಾಷಾ ನೀತಿಯನ್ನು ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿದರೆ ಗ್ರಾಮೀಣ ಪ್ರದೇಶದ ಮಕ್ಕಳು ಇಂದಿಗೂ ಸರ್ಕಾರಿ ಶಾಲೆಯಲ್ಲೇ ಓದಲು ಇಷ್ಟಪಡುತ್ತಾರೆ ಎಂಬುದಕ್ಕೆ ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆ ಅತ್ಯುತ್ತಮ ಸಾಕ್ಷಿಯಾಗಿದೆ ಎಂದು ಹೇಳಿದರು.

ಜ್ಞಾನಕ್ಕೆ ಸಮಾನವಾದದ್ದು ಪ್ರಪಂಚದಲ್ಲಿ ಬೇರೊಂದಿಲ್ಲ. 12ನೇ ಶತಮಾನದ ಶರಣ ಅಲ್ಲಮಪ್ರಭುಗಳು ಹೇಳಿದಂತೆ ‘ಹೇಮ ನಿನ್ನದಲ್ಲ, ಭೂಮಿ ನಿನ್ನದಲ್ಲ, ಕಾಮಿನಿ ನಿನ್ನವಳಲ್ಲ… ನಿನ್ನದಲ್ಲದ್ದಕ್ಕೆ ಜ್ಞಾನ ರತ್ನ’ ಎಂಬಂತೆ, ಮನುಷ್ಯ ಗಳಿಸುವ ಆಸ್ತಿ, ಅಧಿಕಾರ ಯಾವುದೂ ಶಾಶ್ವತವಲ್ಲ. ಆತ ಗಳಿಸುವ ಜ್ಞಾನ, ವಿದ್ಯೆ ಮತ್ತು ಸಂಸ್ಕಾರ ಮಾತ್ರ ಆತನನ್ನು ಕೊನೆವರೆಗೂ ಕಾಪಾಡುತ್ತದೆ. ಜ್ಞಾನಿಯಾದವನು ಜಗತ್ತಿನಾದ್ಯಂತ ಪೂಜಿಸಲ್ಪಡುತ್ತಾನೆ ಎಂದರು.

ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ ಮಾತನಾಡಿ, ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ‘ಪುರಾ’ (PURA – Provide Urban Amenities to Rural Areas) ಎಂಬ ಕಲ್ಪನೆಯನ್ನು ನೀಡಿ, ಗ್ರಾಮೀಣ ಭಾಗದಲ್ಲಿ ನಗರ ಪ್ರದೇಶದಲ್ಲಿ ದೊರಕುವ ಸೌಲಭ್ಯಗಳನ್ನು ನೀಡಬೇಕು ಎಂದು ಕರೆ ನೀಡಿದರು. ಅವರ ಆಶಯದಂತೆ ನಗರ ಪ್ರದೇಶಗಳಲ್ಲಿ ದೊರೆಯುವ ಆಧುನಿಕ ಶೈಕ್ಷಣಿಕ ಸೌಲಭ್ಯಗಳು ಗ್ರಾಮೀಣ ಮಕ್ಕಳಿಗೂ ಸಿಗಬೇಕು ಎಂಬ ಉದ್ದೇಶದಿಂದ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಇ-ಲೈಬ್ರರಿ, ಕಂಪ್ಯೂಟರ್ ಲ್ಯಾಬ್ ಹಾಗೂ ಸುಸಜ್ಜಿತ ಪ್ರಯೋಗಾಲಯಗಳನ್ನು ಶಾಲೆಯಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಗೌಡ, ಕೆ.ಎಸ್.ನವೀನ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ತಿಮ್ಮಶೆಟ್ರು, ತಾಲ್ಲೂಕು ಶಿಕ್ಷಣ ಸುಧಾರಣ ಸಮಿತಿ ಅಧ್ಯಕ್ಷ ಎ.ಎಂ.ಅಮೃತೇಶ್ವರ ಸ್ವಾಮಿ, ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now