ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಐತಿಹಾಸಿಕ ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಏಕನಾಥೇಶ್ವರಿ ಹಾಗೂ ಬರಗೇರಮ್ಮನವರ ಮೆರವಣಿಗೆ ವೈಭವೋಪೇತವಾಗಿ ನಡೆಯಿತು.
ಕೋಟೆ ರಸ್ತೆಯಲ್ಲಿರುವ ಪಾದಗುಡಿ ಮುಂಭಾಗದಲ್ಲಿ ತಹಶೀಲ್ದಾರ್ ಮೆರವಣಿಗೆ ಉದ್ಘಾಟಿಸಿದರು. ಡೊಳ್ಳು, ತಮಟೆ, ವಿವಿಧ ಕಲಾ ತಂಡಗಳೊಂದಿಗೆ ಸಾಗಿದ ಮೆರವಣಿಗೆ ಆನೆಬಾಗಿಲು, ಬುರುಜನಹಟ್ಟಿ, ಸಿಹಿನೀರು ಹೊಂಡದ ರಸ್ತೆ, ಸಿದ್ದರಾಮೇಶ್ವರ ಸರ್ಕಲ್, ಗಾಯತ್ರಿ ಭವನ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆಯಲ್ಲಿ ಸಂಚರಿಸಿತು.
ಜೋಡೆತ್ತಿನ ಬಂಡಿಯಲ್ಲಿ ಏಕನಾಥೇಶ್ವರಿಯನ್ನು ವಿವಿಧ ಬಗೆಯ ಬೃಹಧಾಕಾರವಾದ ಹಾರ ಹಾಗೂ ಬಣ್ಣ ಬಣ್ಣದ ಹೂವುಗಳಿಂದ ಸಿಂಗರಿಸಲಾಗಿತ್ತು. ರಸ್ತೆಯುದ್ದಕ್ಕೂ ಅಲ್ಲಲ್ಲಿ ಭಕ್ತರು ಏಕನಾಥೇಶ್ವರಿ ಅಮ್ಮನಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಉರಿ ಬಿಸಿಲನ್ನು ಲೆಕ್ಕಿಸದೆ ಮೆರವಣಿಗೆಯಲ್ಲಿ ಹೊರಟವರಿಗೆ ಭಕ್ತರು ತಮ್ಮ ಮನೆಗಳ ಮುಂದೆ ತಂಪಾದ ಪಾನೀಯ ಹಾಗೂ ಮಜ್ಜಿಗೆಯನ್ನು ವಿತರಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಮಾಜಿ ಸದಸ್ಯ ಗಾಡಿ ಮಂಜ, ಮೃತ್ಯುಂಜಯ, ಕುಮಾರಸ್ವಾಮಿ, ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್, ಮಾಜಿ ನಾಮ ನಿರ್ದೇಶಿತ ಸದಸ್ಯ ಓಂಕಾರ್ ಇನ್ನು ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

















