ಸುದ್ದಿಒನ್, ಬೆಂಗಳೂರು, ಮೇ. 28 : ಕರ್ನಾಟಕ ರಾಜಕೀಯದಲ್ಲಿ ಇಂದು ಅಪರೂಪದ ಹಾಗೂ ಭಾವುಕ ಕ್ಷಣವೊಂದು ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಚರ್ಚೆಗಳ ನಡುವೆಯೇ, ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಉಪಹಾರ ಕೂಟ ರಾಜಕೀಯ ವಲಯದ ಗಮನ ಸೆಳೆಯಿತು. ಸಭೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ದೃಶ್ಯ ಎಲ್ಲರ ಗಮನ ಸೆಳೆಯಿತು.
ಕಾವೇರಿ ನಿವಾಸಕ್ಕೆ ಬಂದ ಡಿಕೆ ಶಿವಕುಮಾರ್ ನೇರವಾಗಿ ಸಿದ್ದರಾಮಯ್ಯ ಅವರ ಬಳಿ ತೆರಳಿ ಗೌರವ ಸೂಚಕವಾಗಿ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಡಿಕೆಶಿಯನ್ನು ಕೈಹಿಡಿದು ಎಬ್ಬಿಸಿ ಆತ್ಮೀಯವಾಗಿ ಆಲಿಂಗಿಸಿಕೊಂಡರು. ಇಬ್ಬರು ನಾಯಕರ ನಡುವಿನ ಈ ಭಾವುಕ ಕ್ಷಣದ ಫೋಟೋಗಳು ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ.
ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಒಳರಾಜಕೀಯದಲ್ಲಿ ನಾಯಕತ್ವ ಪೈಪೋಟಿ ಮತ್ತು ಶೀತಲ ಸಮರದ ಮಾತುಗಳು ಕೇಳಿಬರುತ್ತಿದ್ದ ಹಿನ್ನೆಲೆ, ಇಂದು ಕಂಡುಬಂದ ಈ ಸೌಹಾರ್ದತೆಯ ದೃಶ್ಯಕ್ಕೆ ವಿಶೇಷ ರಾಜಕೀಯ ಅರ್ಥ ಕಲ್ಪಿಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ‘ಅವಧಿ ಹಂಚಿಕೆ’ ಸೂತ್ರ ರೂಪುಗೊಂಡಿತ್ತು ಎನ್ನಲಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ನಡೆಸಿದ ಸುದೀರ್ಘ ರಾಜಕೀಯ ಹೋರಾಟಕ್ಕೆ ಇದೀಗ ಫಲ ಸಿಕ್ಕಂತಾಗಿದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.
ಹೈಕಮಾಂಡ್ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಲು ಒಲವು ತೋರಿದೆ ಎನ್ನಲಾಗುತ್ತಿರುವ ಹಿನ್ನೆಲೆ, ಇಂದಿನ ಉಪಹಾರ ಸಭೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಯಾವುದೇ ಗೊಂದಲ ಅಥವಾ ರಾಜಕೀಯ ಹೈಡ್ರಾಮಾಗಳಿಲ್ಲದೆ ಸುಗಮವಾಗಿ ಅಧಿಕಾರ ಹಸ್ತಾಂತರವಾಗಬೇಕು ಎಂಬ ಉದ್ದೇಶದಿಂದಲೇ ಈ ಸಭೆ ಆಯೋಜಿಸಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಈ ಭಾವುಕ ಕ್ಷಣವನ್ನು ಕಾಂಗ್ರೆಸ್ ನಾಯಕರು “ರಾಜಕೀಯ ಪ್ರೌಢಿಮೆಯ ಸಂಕೇತ” ಎಂದು ಬಣ್ಣಿಸುತ್ತಿದ್ದಾರೆ. “ಇದು ಕೇವಲ ಅಧಿಕಾರ ಬದಲಾವಣೆ ಅಲ್ಲ, ಇಬ್ಬರು ಪ್ರಭಾವಿ ನಾಯಕರ ನಡುವಿನ ಪರಸ್ಪರ ಗೌರವದ ಪ್ರತೀಕ” ಎಂದು ಕೈ ಪಾಳಯದಲ್ಲಿ ವಿಶ್ಲೇಷಣೆ ನಡೆಯುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















