ಬೆಂಗಳೂರು.ಆಗಸ್ಟ್.3: ರಾಜ್ಯದ ಶಾಲಾ ಮಕ್ಕಳ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಲು ಮತ್ತು ಅವರ ಕಲಿಕಾ ಪ್ರಗತಿಯನ್ನು ಕಣ್ಣಾರೆ ವೀಕ್ಷಿಸಲು ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಮೌಲ್ಯಾಂಕನ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಶಾಲಾ ಶಿಕ್ಷಣ ಆಯುಕ್ತರು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳ ಬುನಾದಿ ಕಲಿಕೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಕಲಿಕಾ ಚೇತರಿಕೆ, ಕಲಿಕಾ ಬಲವರ್ಧನೆ ಮತ್ತು ಸೇತುಬಂಧ ಕಾರ್ಯಕ್ರಮಗಳ ಅಡಿಯಲ್ಲಿ ಈ ಪರೀಕ್ಷೆಗಳನ್ನು ಆಯೋಜಿಸಲಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇಲಾಖೆ ನೀಡಿರುವ ಮಾಸಿಕ ಪಾಠ ಯೋಜನೆ ಹಾಗೂ ಚಟುವಟಿಕೆಗಳ ವೇಳಾಪಟ್ಟಿಗೆ ಅನುಗುಣವಾಗಿ ಶಿಕ್ಷಕರು ಪಾಠವಾರು ಮೌಲ್ಯಾಂಕನ ಪ್ರಕ್ರಿಯೆ ನಡೆಸಬೇಕಿದೆ.
ಪ್ರಾಥಮಿಕ ಹಂತದ ಅಂದರೆ 1 ರಿಂದ 5ನೇ ತರಗತಿಯ ಪರೀಕ್ಷೆಗಳನ್ನು ಒಟ್ಟು 15 ಅಂಕಗಳಿಗೆ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ 10 ಅಂಕಗಳ ಲಿಖಿತ ಪರೀಕ್ಷೆ ಹಾಗೂ 5 ಅಂಕಗಳ ಮೌಖಿಕ ಪರೀಕ್ಷೆಗಳು ಇರಲಿವೆ. ಪ್ರಶ್ನೆಪತ್ರಿಕೆಯು ವಸ್ತುನಿಷ್ಠ ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರಲಿದೆ.
ಇನ್ನು 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕಲಿಕಾ ಫಲಗಳನ್ನು ಆಧರಿಸಿ 20 ಅಂಕಗಳ ವಸ್ತುನಿಷ್ಠ ಹಾಗೂ ವಿವರಣಾತ್ಮಕ ಪ್ರಶ್ನೆಗಳನ್ನೊಳಗೊಂಡ ಪರೀಕ್ಷೆ ನಡೆಸಲಾಗುತ್ತದೆ.
ಪ್ರೌಢಶಾಲಾ ಹಂತದ 8 ರಿಂದ 10ನೇ ತರಗತಿ ಮಕ್ಕಳಿಗೆ 20 ಅಂಕಗಳ ಬಹುಆಯ್ಕೆ (MCQ) ಮತ್ತು ವಿವರಣಾತ್ಮಕ ಮಾದರಿಯ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಪರೀಕ್ಷೆ ನಡೆಸಲಾಗುವುದು. ಈ ಹಂತದ ಮೌಲ್ಯಾಂಕನ ಫಲಿತಾಂಶವನ್ನು ಶಿಕ್ಷಕರು ಕಡ್ಡಾಯವಾಗಿ ಸ್ಯಾಟ್ಸ್ (SATS) ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಮೌಲ್ಯಾಂಕನದ ವಿಶ್ಲೇಷಣಾ ವರದಿ ಆಧರಿಸಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಬೆಂಬಲ ನೀಡಲು ಸೂಚಿಸಲಾಗಿದೆ. ಈ ವರ್ಷದಿಂದ ಹೊಸದಾಗಿ ಜಾರಿಗೆ ತಂದಿರುವ ‘ಸಮಗ್ರ ಪ್ರಗತಿಪತ್ರ’ವನ್ನು ಸಿದ್ಧಪಡಿಸಿ, ಶಾಲಾ ಶೈಕ್ಷಣಿಕ ದಿನಾಚರಣೆ ಹಾಗೂ ಪೋಷಕರ ಸಭೆಗಳಲ್ಲಿ ಪ್ರದರ್ಶಿಸುವ ಮೂಲಕ ಮಗುವಿನ ಕಲಿಕಾ ಪ್ರಗತಿಯನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಲು ಶಿಕ್ಷಣ ಇಲಾಖೆ ಮಾರ್ಗದರ್ಶನ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











