ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗರಕ್ಕೆ ಆಗಮಿಸುವ ಮುನ್ನ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಮಳೆ ಕೊರತೆಯಿಂದ ಜಿಲೆಯ ರೈತರು ಈಗಾಗಲೆ ಸಂಕಷ್ಟದಲ್ಲಿರುವುದರಿಂದ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ ಬೆಳೆ ಪರಿಹಾರ ನೀಡಬೇಕು. ಬೆಳೆ ವಿಮೆ ಪಾವತಿಸಿರುವ ರೈತರಿಗೆ ಅಧಿಕಾರಿಗಳು ಹಾಗೂ ವಿಮೆ ಕಂಪನಿಯವರು ಶಾಮೀಲಾಗಿ ಮೋಸ ಮಾಡಿದ್ದಾರೆ. ಬೆಸ್ಕಾಂ ಇಲಾಖೆಯಲ್ಲಿ ರೈತರ ಪಂಪ್ಸೆಟ್ಗಳಿಗೆ ಸ್ವಯಂ ವೆಚ್ಚದಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎರಡರಿಂದ ಮೂರು ಲಕ್ಷ ರೂ.ಗಳ ವೆಚ್ಚವಾಗುತ್ತಿದ್ದು, ಅಕ್ರಮ-ಸಕ್ರಮದಡಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ರೈತರ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಅವಕಾಶವಿದ್ದರೂ ಅಧಿಕಾರಿಗಳ ನಿರ್ಲಕ್ಷೆಯಿಂದ ರೈತರು ಕತ್ತಲಲ್ಲಿ ಜೀವಿಸುವಂತಾಗಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ರೈತರ ನೆರವಿಗೆ ಮುಂದೆ ಬರಬೇಕು. ಇಲ್ಲವಾದಲ್ಲಿ ಶನಿವಾರ ನಗರಕ್ಕೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಕಪ್ಪುಪಟ್ಟಿ ಪ್ರದರ್ಶಿಸಲಾಗುವುದೆಂದು ಎಚ್ಚರಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಭವಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಭದ್ರಾಮೇಲ್ದಂಡೆ ಯೋಜನೆಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ರೈತ ಮುಖಂಡರುಗಳಾದ ಎಂ.ಸಿದ್ದಪ್ಪ ಹಳಿಯೂರು, ನಾಗರಾಜ್ ಮುದ್ದಾಪುರ, ಎಂ.ಶಿವಮೂರ್ತಿ, ಸಂಜೀವಪ್ಪ, ಮಾರುತಿ, ಎಂ.ಕೆ.ಓಬಳೇಶ, ರಾಜಶೇಖರಪ್ಪ, ಕೆ.ಎ.ಕಲ್ಲೇಶ, ಗುರುಸಿದ್ದಪ್ಪ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











