ಸುದ್ದಿಒನ್,ಬೆಂಗಳೂರು,ಮೇ.12: ಮಹಿಳೆಯರನ್ನು ಕಾಡುತ್ತಿರುವ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಂಡಿರುವ ಲಸಿಕಾ ಅಭಿಯಾನದಲ್ಲಿ ಕಲಬುರಗಿ ಜಿಲ್ಲೆ ರಾಜ್ಯದಲ್ಲೇ ಅಗ್ರಸ್ಥಾನ ಪಡೆದುಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲೆಯ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಭಾರತದ ಮಹಿಳೆಯರಲ್ಲಿ ಹೆಚ್ಚಾಗಿ ವರದಿಯಾಗುತ್ತಿರುವ ಕ್ಯಾನ್ಸರ್ಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಅಥವಾ ಸರ್ವೈಕಲ್ ಕ್ಯಾನ್ಸರ್ ಎರಡನೇ ಸ್ಥಾನದಲ್ಲಿದೆ. ಜಗತ್ತಿನಲ್ಲಿ ಸಂಭವಿಸುತ್ತಿರುವ ಗರ್ಭಕಂಠದ ಕ್ಯಾನ್ಸರ್ ಮರಣ ಪ್ರಕರಣಗಳಲ್ಲಿ ಸುಮಾರು ಕಾಲು ಭಾಗದಷ್ಟು ಭಾರತದಿಂದ ದಾಖಲಾಗುತ್ತಿರುವುದು ಆತಂಕಕಾರಿ. ಇದನ್ನು ತಡೆಯುವ ಎಚ್ಪಿವಿ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದ್ದರೂ ಜನರಲ್ಲಿ ಇದರ ಕುರಿತು ಜಾಗೃತಿ ಮೂಡಿಲ್ಲ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಈ ಬಗ್ಗೆ ತಿಳಿವಳಿಕೆ ಕೊರತೆ ಇದೆ. ಹೆಣ್ಣುಮಕ್ಕಳು ಪ್ರೌಢಾವಸ್ಥೆಗೆ ಬಂದಾಗಲೇ ಈ ಲಸಿಕೆ ನೀಡುವುದು ಹೆಚ್ಚು ಪರಿಣಾಮಕಾರಿ ಎನ್ನುವುದು ಸಂಶೋಧನೆಗಳಿಂದ ದೃಢಪಟ್ಟಿದೆ. ಹೀಗಾಗಿ ಎಚ್ಪಿವಿ ಲಸಿಕೆ ಅಭಿಯಾನವನ್ನು ರಾಜ್ಯಾದ್ಯಂತ ವ್ಯಾಪಕವಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜನನಾಂಗದ ಸೋಂಕುಗಳಿಗೆ ಕಾರಣವಾಗುವ ಒಂದು ಸಾಮಾನ್ಯ ವೈರಸ್ ಮಹಿಳೆಯರ ಜೀವಕ್ಕೇ ಕಂಟಕವಾಗುವ ಅಪಾಯವಿದೆ. ಆದರೆ ಕೇವಲ ಒಂದು ಡೋಸ್ ಲಸಿಕೆ ಇದರಿಂದ ಬಲವಾದ ರಕ್ಷಣೆ ನೀಡುತ್ತದೆ. 14 ವರ್ಷದ ಹೆಣ್ಣುಮಕ್ಕಳಿಗೆ ಎಚ್ಪಿವಿ ಲಸಿಕೆ ನೀಡುವ ಅಭಿಯಾನಕ್ಕೆ ಕಲಬುರಗಿಯಲ್ಲಿ ಉತ್ತಮ ಸ್ಪಂದನೆ ದೊರಕಿರುವುದು ಶ್ಲಾಘನೀಯ. ಇದುವರೆಗೂ ಜಿಲ್ಲೆಯಾದ್ಯಂತ ಮಾರ್ಚ್ ನಿಂದ ಈವರೆಗೆ 20,511 ಹೆಣ್ಣುಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ 68.5ರ ಸಾಧನೆಯೊಂದಿಗೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
ಮಹಿಳೆಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠ ಕ್ಯಾನ್ಸರ್ ಅನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಕೈಗೊಂಡ ಈ ಮಹತ್ವಾಕಾಂಕ್ಷಿ ಅಭಿಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದಾರೆ. ಇದಕ್ಕಾಗಿ ಅವರು ಅಭಿನಂದನಾರ್ಹರು.
ಈ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮ ಇಲ್ಲ ಹಾಗೂ ಇದು ಸಂಪೂರ್ಣ ಸುರಕ್ಷಿತ ಎಂದು ಸಂಶೋಧಕರು ದೃಢಪಡಿಸಿದ್ದಾರೆ. ಹಾಗೆಯೇ ಭವಿಷ್ಯದ ಆರೋಗ್ಯ ಸವಾಲುಗಳಿಂದ ಇದು ಮಹಿಳೆಯರಿಗೆ ರಕ್ಷಣೆ ನೀಡಲಿದೆ. ಹೀಗಾಗಿ ರಾಜ್ಯದ 14 ವರ್ಷದ ಎಲ್ಲ ಹೆಣ್ಣುಮಕ್ಕಳು ಮುಂಜಾಗರೂಕತೆಯ ದೃಷ್ಟಿಯಿಂದ ಎಚ್ಪಿವಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗುವಂತೆ ಮನವಿ ಮಾಡಿದ್ದಾರೆ.


















