ನಾಡಿನ ಖ್ಯಾತ ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಗುರುವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ವೇದಿಕೆಯ ಮೇಲೆಯೇ ಕುಸಿದುಬಿದ್ದ ಘಟನೆ ನಡೆದಿದೆ. ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ.ಬೆಂಗಳೂರಿನ ಮಹಾರಾಣಿ ಕಾಲೇಜು ಸಮೀಪದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೆಗ್ಡೆ, ಭಾಷಣ ಮಾಡುತ್ತಿದ್ದ ವೇಳೆ ಸಮತೋಲನ ಕಳೆದುಕೊಂಡು ಬಿದ್ದರು.
ಕುಸಿದುಬಿದ್ದ ಬಳಿಕ ವಾಂತಿ ಮಾಡಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗಿರುವುದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಆಯೋಜಕರು ಹಾಗೂ ಸಾರ್ವಜನಿಕರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು.
ಆಸ್ಪತ್ರೆಯಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಗಣನೀಯವಾಗಿ ಕುಸಿದಿರುವುದು ಪತ್ತೆಯಾಗಿದೆ. ಇದೇ ವೇಳೆ ಲಘು ಹೃದಯಾಘಾತ ಸಂಭವಿಸಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತಜ್ಞ ವೈದ್ಯರ ತಂಡದಿಂದ ನಿಗಾ ವಹಿಸಲಾಗುತ್ತಿದೆ.
ಪ್ರಾಮಾಣಿಕ ನ್ಯಾಯಮೂರ್ತಿಯಾಗಿ ಹೆಸರಾಗಿರುವ ಹೆಗ್ಡೆ ಅವರ ಆರೋಗ್ಯದ ಕುರಿತು ಸುದ್ದಿ ತಿಳಿದಂತೆ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಆತಂಕ ಹೆಚ್ಚಾಗಿದೆ. 80 ವರ್ಷ ದಾಟಿದರೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು ಶೀಘ್ರ ಗುಣಮುಖರಾಗಲಿ ಎಂಬ ಆಶಯ ವ್ಯಕ್ತವಾಗುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಅವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದ್ದು, ಅಗತ್ಯ ಪರೀಕ್ಷೆಗಳು ಮುಂದುವರಿದಿವೆ.
















