ಬೆಂಗಳೂರು.ಜುಲೈ.21: ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಜಾತಿ ಪ್ರಮಾಣಪತ್ರಗಳನ್ನು ಉಚಿತವಾಗಿ ವಿತರಿಸುವ ಕಂದಾಯ ಇಲಾಖೆಯ ವಿಶೇಷ ಅಭಿಯಾನ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು.
ಸಮಾರಂಭದಲ್ಲಿ ಮಾತನಾಡಿದ ಅವರು, “ನಮಗೆ ರಾಜಕಾರಣ ಮುಖ್ಯವಲ್ಲ. ಜನರ ಮತದಾನದ ಹಕ್ಕನ್ನು, ಬದುಕುವ ಹಕ್ಕನ್ನು ಕಾಪಾಡುವುದು ಬಹಳ ಮುಖ್ಯ. ಹೀಗಾಗಿ ನಮ್ಮ ನಾಡಿನ ಜನರ ಗುರುತಿನ ಪ್ರಮಾಣಪತ್ರವನ್ನು ಅವರ ಮನೆ ಬಾಗಿಲಿಗೆ ತೆರಳಿ ನೀಡುವ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ,” ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಮಾತನಾಡಿದ ಅವರು, “ಮತದಾರರ ಹಕ್ಕನ್ನು ಉಳಿಸಲು, ಪ್ರಜಾಪ್ರಭುತ್ವದ ಅವಕಾಶವನ್ನು ಸಂರಕ್ಷಿಸಲು, ಜನಸಾಮಾನ್ಯರಿಗೆ ನೆರವಾಗಲು ಸರ್ಕಾರ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 4.85 ಕೋಟಿ ಡಿಜಿಟಲ್ ಪ್ರಮಾಣಪತ್ರಗಳನ್ನು ಮನೆ ಬಾಗಿಲಿಗೆ ತಲುಪಿಸಲು ಮುಂದಾಗಿದ್ದೇವೆ. ಈ ನೆಲದಲ್ಲಿ ವಾಸಿಸುವವರ ಹಕ್ಕನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ. ಪಕ್ಷ ಬೇರೆ, ಸರ್ಕಾರವೇ ಬೇರೆ. ನಮ್ಮ ಸರ್ಕಾರ ಪಕ್ಷದ ಮಿತಿಗೆ ಒಳಗಾಗದೆ, ಎಲ್ಲಾ ಮತದಾರರಿಗೂ ಅನುಕೂಲವಾಗುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಂದಾಗಿದೆ,” ಎಂದರು.
ಕಚೇರಿ ಅಲೆದಾಟ ತಪ್ಪಿತು; ಜಾತಿ, ನಿವಾಸಿ ಪ್ರಮಾಣಪತ್ರ ಮನೆ ಬಾಗಿಲಿಗೆ ಬಂತು!
ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತವಾಗಿ ಜಾತಿ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಿಸುವ ಸೇವೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು, ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರೊಂದಿಗೆ ಇಂದು ವಿಧಾನಸೌಧದ ಸಮ್ಮೇಳನ… pic.twitter.com/32HS0bsYLh
— CM of Karnataka (@CMofKarnataka) July 20, 2026
ಜನರ ಅನುಕೂಲಕ್ಕಾಗಿ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆ ವಿವರಣೆ ನೀಡಿದ ಅವರು, “ಹೋಬಳಿ ಮಟ್ಟದಲ್ಲಿ ಸಹಾಯ ಕೇಂದ್ರಗಳು ಹಾಗೂ ಬಾಪೂಜಿ ಸೇವಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಬ್ಬ ಮತದಾರರಿಗೂ ನೆರವು ದೊರೆಯಲಿದೆ. ಬಿಎಲ್ಒಗಳು ಮನೆ ಬಾಗಿಲಿಗೆ ಬಂದಾಗ ಅವರು ನೀಡುವ ಅರ್ಜಿಗಳನ್ನು ಸ್ವೀಕರಿಸಿ, ನೀವೇ ಸಹಿ ಹಾಕಿ ಸಲ್ಲಿಸುವ ಮೂಲಕ ನಿಮ್ಮ ಮತವನ್ನು ಹಾಗೂ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಿ. ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಸರಳ ವಿಧಾನವನ್ನೂ ಮತದಾರರಿಗೆ ಒದಗಿಸಿದ್ದೇವೆ. ವಾಟ್ಸ್ಆ್ಯಪ್ ಗುಂಪುಗಳ ಮೂಲಕ ಜನರಿಗೆ ಅರಿವು ಮೂಡಿಸುವುದರ ಜೊತೆಗೆ, ಪ್ರಮಾಣಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಿದ್ದೇವೆ. ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು ಎನ್ನುವುದು ನಮ್ಮ ಕಾಳಜಿಯಾಗಿದೆ,” ಎಂದು ತಿಳಿಸಿದರು.
ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ ಮುಖ್ಯಮಂತ್ರಿಗಳು, “ನಿಮ್ಮ ಮತ – ನಿಮ್ಮ ಹಕ್ಕು. ನಿಮ್ಮ ಹಕ್ಕು – ನಿಮ್ಮ ಬದುಕು. ನಿಮ್ಮ ಮತದಾನದ ಹಕ್ಕನ್ನು ಕಾಪಾಡುವುದು ಮತ್ತು ಬದುಕುವ ಹಕ್ಕನ್ನು ರಕ್ಷಿಸುವುದು ನಮ್ಮ ಗ್ಯಾರಂಟಿ ಎಂದು ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಮೊದಲಿನಿಂದಲೂ ಹೇಳುತ್ತಿದ್ದೇನೆ. ಆ ಮಾತನ್ನು ಈಗ ಮುಖ್ಯಮಂತ್ರಿಯಾಗಿ ಕಾರ್ಯರೂಪಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










