ಕಾರವಾರ.ಜುಲೈ.21: ಕರ್ನಾಟಕದ ಹೆದ್ದಾರಿಗಳಲ್ಲಿ ರಸ್ತೆ ಅಪಘಾತಕ್ಕೊಳಗಾಗುವ ಸಂತ್ರಸ್ತರಿಗೆ ಮೊದಲ 7 ದಿನಗಳವರೆಗೆ ಗರಿಷ್ಠ 2.5 ಲಕ್ಷ ರೂಪಾಯಿ ಮೌಲ್ಯದ ಉಚಿತ ತುರ್ತು ಚಿಕಿತ್ಸೆ ಒದಗಿಸುವ ನೂತನ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಪ್ರಕಟಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯ ಸಿಎಸ್ಆರ್ (CSR) ಅನುದಾನದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಮತ್ತು ತುರ್ತು ಚಿಕಿತ್ಸಾ ಘಟಕವನ್ನು ಉದ್ಘಾಟಿಸಿ ಅವರು ಈ ವಿಷಯ ತಿಳಿಸಿದರು.
ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿದರೆ ವೆಚ್ಚವನ್ನು ಯಾರು ಭರಿಸುತ್ತಾರೆ ಎನ್ನುವ ಭೀತಿಯಿಂದ ಸಾರ್ವಜನಿಕರು ನೆರವಿಗೆ ಬರಲು ಹಿಂದೆಟು ಹಾಕುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸೌಲಭ್ಯವು ಕೇವಲ ಕನ್ನಡಿಗರಿಗಷ್ಟೇ ಅಲ್ಲದೆ, ದೇಶ-ವಿದೇಶಗಳಿಂದ ಬಂದು ರಾಜ್ಯದಲ್ಲಿ ಅಪಘಾತಕ್ಕೆ ಈಡಾಗುವ ಪ್ರತಿಯೊಬ್ಬರಿಗೂ ಅನ್ವಯಿಸಲಿದೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಪ್ರಾಥಮಿಕ ಹಂತದ ಮಾತುಕತೆ ಪೂರ್ಣಗೊಂಡಿದೆ.
15 ನಿಮಿಷದಲ್ಲಿ ಆಂಬ್ಯುಲೆನ್ಸ್: ವಿಳಂಬವಾದರೆ ಸಾವಿರಾರು ರೂ. ದಂಡ!
ರಾಜ್ಯದಲ್ಲಿ ತುರ್ತು ಕರೆ ಬಂದ ಕೇವಲ 15 ನಿಮಿಷಗಳ ಒಳಗೆ ಆಂಬ್ಯುಲೆನ್ಸ್ ಘಟನಾ ಸ್ಥಳಕ್ಕೆ ತಲುಪುವಂತೆ ಮಾಡಲು ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗುತ್ತಿದೆ. ನಿಗದಿತ ಅವಧಿಯಲ್ಲಿ ಆಂಬ್ಯುಲೆನ್ಸ್ ತಲುಪದಿದ್ದರೆ ಸಂಬಂಧಿಸಿದ ನಿರ್ವಹಣಾ ಸಂಸ್ಥೆಗೆ 3,000 ರಿಂದ 5,000 ರೂಪಾಯಿಗಳವರೆಗೆ ದಂಡ ವಿಧಿಸುವ ಕಠಿಣ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.
ಶಾಲಾ ಮಕ್ಕಳ ಆರೋಗ್ಯ ಮತ್ತು ಆಸ್ಪತ್ರೆಗಳ ಬಲವರ್ಧನೆ
ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ವಿಶೇಷ ಒತ್ತು ನೀಡಲಾಗಿದ್ದು, ಶಾಲಾ ಆವರಣಗಳಲ್ಲಿ ಹಾನಿಕಾರಕ ಜಂಕ್ ಫುಡ್ ಮಾರಾಟ ಮಾಡುವುದನ್ನು ತಡೆಯಲು ಬಿಗಿ ನಿಯಮ ತರಲಾಗುವುದು. ಅಲ್ಲದೆ, ಆಹಾರ ಕಲಬೆರಕೆ ತಡೆಯಲು ಸುಸಜ್ಜಿತ ಹೈ-ಟೆಕ್ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ಶುಶ್ರೂಷಕರು ಹಾಗೂ ತಾಂತ್ರಿಕ ಸಿಬ್ಬಂದಿಯ ಹುದ್ದೆಗಳನ್ನು ಒಪ್ಪಂದ ಮತ್ತು ಖಾಯಂ ಆಧಾರದ ಮೇಲೆ ತಕ್ಷಣವೇ ಭರ್ತಿ ಮಾಡಲು ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









