ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಚಳ್ಳಕೆರೆ ತಾಲ್ಲೂಕು ಟಿ.ದೇವರಹಳ್ಳಿ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ವಿದ್ಯುತ್ ಹೆಚ್.ವಿ.ಕೇಬಲ್ ಮಾರ್ಗ ಅಳವಡಿಸಿ ಕೆ.ಪಿ.ಟಿ.ಸಿ.ಎಲ್ ಮತ್ತು ಗುತ್ತಿಗೆದಾರರು ಪರಿಹಾರ ನೀಡದೆ ವಂಚಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ರೈತರ ಜಮೀನುಗಳಲ್ಲಿ ದೊಡ್ಡ ಗಾತ್ರದ ಕಂಬಗಳನ್ನು ನೆಟ್ಟಿದ್ದು, 25 ರೈತರಿಗೆ ಅಲ್ಪಸ್ವಲ್ಪ ಪರಿಹಾರ ದೊರಕಿದೆ. ದೊಡ್ಡ ದೊಡ್ಡ ಮರಗಳನ್ನು ಜೆಸಿಬಿಯಿಂದ ನೆಲಸಮಗೊಳಿಸಲಾಗಿದೆ. ಕಂಬಗಳನ್ನು ನೆಟ್ಟಿರುವ ಕಡೆ ಬೆಳೆ ಬೆಳೆಯಲು ಆಗುತ್ತಿಲ್ಲ. ಕೆ.ಪಿ.ಟಿ.ಸಿ.ಎಲ್. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ಕರೆದು ಒಂದು ವಾರದೊಳಗೆ ರೈತರಿಗೆ ಪೂರ್ಣ ಪ್ರಮಾಣದ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ, ಬಸ್ತಿಹಳ್ಳಿ ಜಿ.ಸುರೇಶ್ಬಾಬು, ಜಿ.ಟಿ.ಶ್ರೀನಿವಾಸರೆಡ್ಡಿ, ಪಿ.ಶಿವಣ್ಣ, ಜಿ.ನಾರಾಯಣರೆಡ್ಡಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


