ಸುದ್ದಿಒನ್, ದಾವಣಗೆರೆ, ಜುಲೈ. 27 : ಮಧ್ಯ ಕರ್ನಾಟಕದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಶ್ರೀ ದುರ್ಗಾಂಬಿಕಾ (ದುಗ್ಗಮ್ಮ) ದೇವಸ್ಥಾನದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇವಸ್ಥಾನದ ದೇವಿಯ ಚಿನ್ನಾಭರಣವನ್ನು ಪೂಜಾರಿಯೇ ಕಳ್ಳತನ ಮಾಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪ ದೇವಸ್ಥಾನ ಸಮಿತಿಯ ಲೆಕ್ಕಪತ್ರ ಪರಿಶೀಲನೆ ವೇಳೆ ಬಹಿರಂಗವಾಗಿದ್ದು, ಈ ಕುರಿತು ನಡೆದ ಸಭೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ ಶನಿವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಆರೋಪಿತ ಪೂಜಾರಿ ಹಾಗೂ ಚಿನ್ನ ಖರೀದಿಸಿದ್ದಾನೆ ಎನ್ನಲಾದ ವ್ಯಾಪಾರಿಯನ್ನು ಎದುರು ಕರೆಸಿ ಪ್ರಶ್ನಿಸಿರುವ ದೃಶ್ಯ ವೈರಲ್ ವಿಡಿಯೊದಲ್ಲಿ ಕಂಡುಬಂದಿದೆ.
ಸಭೆಯ ವೇಳೆ, “ವಾರದೊಳಗೆ ಕಳುವಾಗಿರುವ ಎಲ್ಲಾ ಚಿನ್ನಾಭರಣಗಳನ್ನು ಮರಳಿಸಬೇಕು. ಇಲ್ಲದಿದ್ದರೆ ಇಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು” ಎಂದು ಸಮಿತಿ ಅಧ್ಯಕ್ಷರು ಎಚ್ಚರಿಕೆ ನೀಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಆದರೆ, ಕಳುವಾಗಿರುವ ಚಿನ್ನಾಭರಣದ ನಿಖರ ಪ್ರಮಾಣ ಮತ್ತು ಮೌಲ್ಯದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.
ಈ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಯಶವಂತರಾವ್ ಜಾಧವ್, ದೇವಸ್ಥಾನದಲ್ಲಿ ದೇವಿಯ ಚಿನ್ನಾಭರಣ ಕಳ್ಳತನವಾಗಿರುವುದು ಅತ್ಯಂತ ಗಂಭೀರ ವಿಷಯವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ದೇವಸ್ಥಾನ ಸಮಿತಿಯ ಅಧ್ಯಕ್ಷ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಸಮಿತಿಯ ಎಲ್ಲ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಭಕ್ತರಲ್ಲಿ ಆತಂಕ ಮತ್ತು ಅಸಮಾಧಾನ ವ್ಯಕ್ತವಾಗಿದ್ದು, ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.










