ಬೆಂಗಳೂರು: ಅಡಿಕೆ ಬೆಳೆಗಾರರ ಕಷ್ಟ ಒಂದೆರಡಲ್ಲ. ಇದೀಗ ಬಜೆಟ್ ನಲ್ಲಿ ಅಡಿಕೆ ಬೆಳೆಗಾರರಿಗೂ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ ಸಿದ್ದರಾಮಯ್ಯ ಅವರು. ಅದರಲ್ಲೂ ರೈತರು ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ಹಾಗೂ ತೆಂಗಿನ ಕಪ್ಪು ತಲೆ ಹುಳು ರೋಗದ ಕೀಟ ಬಾಧೆಯಿಂದ ತತ್ತರಿಸಿ ಹೋಗಿದ್ದಾರೆ. ಇವುಗಳಿಂದ ಅಡಿಕೆ, ತೆಂಗು ಬೆಳೆಗಳು ಹಾಳಾಗುತ್ತಿದೆ. ಈ ಕೀಟ ನಿಯಂತ್ರಣಕ್ಕೆ ಬಜೆಟ್ ನಲ್ಲಿ 10 ಕೋಟಿ ರೂಪಾಯಿ ಘೋಷಿಸಲಾಗಿದೆ.
ಹೊಸದಾಗಿ 89,000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೇಸಾಯ ಅಳವಡಿಕೆ, 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಅಳವಡಿಸಿ 2.36 ಲಕ್ಷ ರೈತರಿಗೆ ಅನುಕೂಲ, ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ 2,378 ರೂಪಾಯಿ ಬೆಳೆ ವಿಮೆ ಪರಿಹಾರ ನೀಡಲಿದೆ. 21,360 ಫಲಾನುಭವಿಗಳಿಗೆ 9,800 ಕೊಯ್ಲೊತ್ತರ ಘಟಕಗಳ ನಿರ್ಮಾಣ ಮಾಡಲಿದೆ. ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ ಮಾಡಲಾಗುತ್ತದೆ.

ಅಡಿಕೆ ಬೆಳೆಯ ಎಲೆ ಚುಕ್ಕೆ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಸಮುದಾಯ ಆಧಾರಿತ ರೋಗ ಕೀಟ ನಿಯಂತ್ರಣ ಕ್ರಮಗಳನ್ನು 10 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ವೆಚ್ಚದಲ್ಲಿ ನಿರ್ಮಾಣ.












