ಬೆಂಗಳೂರು: ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ತೀವ್ರ ಮಳೆ ಕೊರತೆ ಮತ್ತು ಬಿತ್ತನೆ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಧಾರವಾಡ, ಗದಗ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಜುಲೈ 15 ಕೊನೆಯ ದಿನಾಂಕವಾಗಿತ್ತು. ಆದರೆ ಮಳೆ ಅಭಾವದಿಂದ ರೈತರು ವಿವಿಧ ರೀತಿಯ ಬೆಳೆಗಳನ್ನು ಬಿತ್ತನೆ ಮಾಡಿರುವ ಕಾರಣ, ಬೆಳೆ ವಿಮೆ ನೋಂದಣಿಯಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಇದನ್ನು ಪರಿಗಣಿಸಿ ಕೇಂದ್ರ ಸರ್ಕಾರ ಅವಧಿ ವಿಸ್ತರಣೆ ಮಾಡಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರೊಂದಿಗೆ ಈ ಕುರಿತು ಚರ್ಚಿಸಿ ರೈತರ ಪರವಾಗಿ ಮನವಿ ಸಲ್ಲಿಸಿದ್ದರು. ಅಲ್ಲದೆ, ಶಾಸಕ ಸಿ.ಸಿ. ಪಾಟೀಲ್, ಎಂ.ಆರ್. ಪಾಟೀಲ್ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ರೈತರು ಸಹ ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದಿದ್ದರು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಕೇಂದ್ರದ ಮಟ್ಟದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ರಾಜ್ಯ ಕೃಷಿ ಇಲಾಖೆ ಜುಲೈ 15ರಂದು ಪ್ರಸ್ತಾವನೆ ಕಳುಹಿಸಿದ್ದು, ಕೇವಲ 24 ಗಂಟೆಗಳಲ್ಲೇ ಕೇಂದ್ರ ಸರ್ಕಾರ ಅನುಮೋದನೆ ನೀಡಿ ಜುಲೈ 31ರವರೆಗೆ ನೋಂದಣಿ ಅವಧಿ ವಿಸ್ತರಿಸಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದು, ಮಳೆ ಕೊರತೆಯಿಂದ ವಿಮೆ ಮಾಡಿಸಿಕೊಳ್ಳಲು ಸಾಧ್ಯವಾಗದ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.










